ವಾಣಿಜ್ಯ ಮಳಿಗೆಗಳಲ್ಲಿ ಶೇ.60 ಕನ್ನಡ ಬಳಸದವರಿಗೆ ಈ ಪತ್ರ ನೀಡುವಂತೆ ಖಡಕ್ ಸೂಚನೆ, ಗಡುವು ನಿಗದಿ
ಬೆಂಗಳೂರು, ಜನವರಿ 04: ಬೆಂಗಳೂರು ನಗರ ವ್ಯಾಪ್ತಿಯಲ್ಲಿರುವ ವಾಣಿಜ್ಯ ಮಳಿಗೆಗಳು, ಅಂಗಡಿಗಳ ನಾಮಫಲಕಗಳಲ್ಲಿ ಶೇಕಡಾ 60 ರಷ್ಟು ಕನ್ನಡ ಭಾಷೆ ಕಡ್ಡಾಯಗೊಳಿಸವ ಪ್ರಕ್ರಿಯೆಗಳು ಮುಂದುವೆರೆದಿವೆ.
ಗುರುವಾರ ನಗರದ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡ ಭಾಷೆ ಅಳವಡಿಸುವ ಸಂಬಂಧ ಬಿಬಿಎಂಪಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು. ಪಾಲಿಕೆ ವ್ಯಾಪ್ತಿಯ ಎಲ್ಲಾ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇಕಡಾ 60 ರಷ್ಟು ಕನ್ನಡ ಭಾಷೆಯನ್ನು ಬಳಸದೇ ಇರುವವರಿಗೆ ತಿಳುವಳಿಕೆ ಪತ್ರ ನೀಡಿ ಕೂಡಲೇ ಅನುಷ್ಠಾನಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಬಿಬಿಎಂಪಿ ಮುಖ್ಯ ಆಯುಕ್ತರ ತುಷಾರ್ ಗಿರಿ ನಾಥ್ ಅವರು ವಲಯ ಆಯುಕ್ತರಿಗೆ ಗುರುವಾರ ಕಟ್ಟು ನಿಟ್ಟಿನ ಸೂಚನೆ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇಕಡಾ 60 ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ಜನವರಿ 15ರ ಗಡುವು ನೀಡಿದ ಬಿಬಿಎಂಪಿ
ಬೆಂಗಳೂರು ನಗರದಲ್ಲಿರುವ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ಬರುವ ವಾಣಿಜ್ಯ ಮಳಿಗೆಗಳು, ಅಂಗಡಿ ಮುಂಗಟ್ಟುಗಳು ಹಾಗೂ ಎಲ್ಲಾ ವಲಯದ ಉದ್ದಿಮೆಗಳನ್ನು ಜನವರಿ 15ರ ಒಳಗೆ ಸರ್ವೇ ಕಾರ್ಯ ಪೂರ್ಣಗೊಳಿಸಿ ಕನ್ನಡ ಭಾಷೆಯ ನಾಮಫಲಕ ಅಳವಡಿಸುವಂತೆ ತಿಳುವಳಿಕೆ ಪತ್ರ ನೀಡಬೇಕೆಂದು ಅವರು ಹೇಳಿದರು.
ಸಮೀಕ್ಷೆ ನಡೆಸುವಾಗ ನಾಮಪಲಕದಲ್ಲಿ ಕನ್ನಡ ಬಳಕೆ ಮಾಡದಿದ್ದಲ್ಲಿ ಆಯಾ ಉದ್ದಿಮೆಗಳಿಗೆ ತಿಳುವಳಿಕೆ ಪತ್ರ ನೀಡಬೇಕು. ಉದ್ದಿಮೆ ಪರವಾನಗಿ ಇದ್ದರೆ ಯಾಕೇ ನಾವು ಉದ್ದಿಮೆ ಪರವಾನಗಿ ರದ್ದು ಮಾಡಬಾರದು ಎಂದು ನೀಡಬೇಕು. ಒಂದು ವೇಳೆ ಉದ್ದಿಮೆ ಪರವಾನಗಿ ಮಾಡಿಸದ್ದಿದರೆ ಯಾಕೆ ನಾವು ನಿಮ್ಮ ಉದ್ದಿಮೆಯನ್ನು ಮುಚ್ಚಬಾರದೆಂದು ತಿಳುವಳಿಕೆ ಪತ್ರವನ್ನು ಜಾರಿಮಾಡಬೇಕೆಂದು ತಿಳಿಸಿದರು.

ಭಾಷೆ ಬಳಸದವರ ವಿರುದ್ಧ ಕಠಿಣ ಕ್ರಮ
ನಗರದಲ್ಲಿ ಎಲ್ಲಾ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆಯನ್ನು ಬಳಸಬೇಕು. ಆಯಾ ವಲಯ ವ್ಯಾಪ್ತಿಯಲ್ಲಿ ಯಾವುದೇ ಒತ್ತಡಕ್ಕೆ ಮಣಿಯದೆ ಕನ್ನಡ ಭಾಷೆಯನ್ನು ಬಳಸದ ಉದ್ದಿಮೆಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ನಿರ್ದೇಶಿಸಿದರು.
ಸಭೆಯಲ್ಲಿ ವಲಯ ಆಯುಕ್ತರಾದ ಇಬ್ರಾಹಿಂ ಮೈಗುರ್, ಪ್ರೀತಿ ಗೆಹ್ಲೋಟ್, ಎಲ್ಲಾ ವಲಯದ ಜಂಟಿ ಆಯುಕ್ತರು, ಉಪ ಆಯುಕ್ತರು(ಆಡಳಿತ), ಜಾಹೀರಾತು ವಿಭಾಗದ ಉಪ ಆಯುಕ್ತರು, ಮುಖ್ಯ ಆರೋಗ್ಯಾಧಿಕಾರಿ, ವಲಯ ಆರೋಗ್ಯಾಧಿಕಾರಿಗಳು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.












Click it and Unblock the Notifications