ಬಿಬಿಎಂಪಿ ಚುನಾವಣೆ: ಹೈಕೋರ್ಟ್ ಆದೇಶ ಪಾಲಿಸುವ ತಾಕತ್ತು ತೋರಿ
ಬೆಂಗಳೂರು, ಸೆಪ್ಟೆಂಬರ್ 30: ಬಿಬಿಎಂಪಿ ಚುನಾವಣೆಯನ್ನು ಡಿಸೆಂಬರ್ 31ರೊಳಗೆ ನಡೆಸಬೇಕು ಎಂಬ ಹೈಕೋರ್ಟ್ ಆದೇಶವನ್ನು ಆಮ್ ಆದ್ಮಿ ಪಾರ್ಟಿ ಸ್ವಾಗತಿಸಿದ್ದು, ಬಿಜೆಪಿಗೆ ತಾಕತ್ತಿದ್ದರೆ ಚುನಾವಣೆ ಮುಂದೂಡಲು ನೆಪ ಹುಡುಕುವ ಬದಲು ಈ ಆದೇಶವನ್ನು ಪಾಲಿಸಲಿ ಎಂದು ಎಎಪಿ ಬೆಂಗಳೂರು ಅಧ್ಯಕ್ಷ ಮೋಹನ್ ದಾಸರಿ ಸವಾಲು ಹಾಕಿದ್ದಾರೆ.
ಆಮ್ ಆದ್ಮಿ ಪಕ್ಷ ಬೆಂಗಳೂರನ್ನು ಗಮನದಲ್ಲಿಟ್ಟು ಕರ್ನಾಟಕದಲ್ಲಿ ತನ್ನ ನೆಲೆಯನ್ನು ಭದ್ರಪಡಿಸಿಕೊಳ್ಳಬೇಕು ಎಂಬ ಉತ್ಸಾಹದಲ್ಲಿದೆ. ಇದಕ್ಕಾಗಿ ರಾಜ್ಯದ ಮೂರು ಪ್ರಬಲ ಪಕ್ಷಗಳಿಗಿಂತಲೂ ಎಎಪಿ ಬಿಬಿಎಂಪಿ ಚುನಾವಣೆಗೆ ಉತ್ಸಾಹವನ್ನು ತೋರಿಸುತ್ತಿದೆ. 2020ರಲ್ಲಿಯೇ ನಡೆಯಬೇಕಿದ್ದ ಬಿಬಿಎಂಪಿ ಚುನಾವಣೆ ವಾರ್ಡ್ ಮರುವಿಂಗಡಣೆ, ಮೀಸಲಾತಿ ನೆಪಗಳಲ್ಲಿ ಮುಂದೂಡಿಕೆಯಾಗುತ್ತ ಬಂದಿದೆ. ಇನ್ನೇನು ಚುನಾವಣೆ ಬಂದೆ ಬಿಟ್ಟಿತು ಎನ್ನುವ ಸಮಯಕ್ಕೆ ಅಡ್ಡಿಗಳು ಪ್ರಾರಂಭ ಆಗಿಬಿಡುತ್ತದೆ. ಇದಕ್ಕಾಗಿ ಎಎಪಿ ಬಿಜೆಪಿ ಸರ್ಕಾರಕ್ಕೆ ಹೈಕೋರ್ಟ್ ಆದೇಶ ಪಾಲಿಸುವ ಸವಾಲು ಹಾಕುತ್ತಿದೆ.
ಚುನಾವಣೆ ನಡೆಸದೇ ಅಧಿಕಾರ ನಡೆಸುವ ದುರಾಸೆ
ಎಎಪಿ ಬೆಂಗಳೂರು ಅಧ್ಯಕ್ಷ ಮೋಹನ್ ದಾಸರಿ, "ಮೀಸಲಾತಿಗೆ ಸಂಬಂಧಿಸಿ ಅನಗತ್ಯ ಗೊಂದಲ ಸೃಷ್ಟಿಸಿ ಚುನಾವಣೆಯನ್ನು ಮುಂದೂಡಲು ಬಿಜೆಪಿ ಯತ್ನಿಸುತ್ತಿದೆ. ಚುನಾವಣೆಯಲ್ಲಿ ಸೋಲುವುದು ನಿಶ್ಚಿತವೆಂದು ತಿಳಿದಿದ್ದರಿಂದ ಬಿಜೆಪಿಯು ಈ ರೀತಿ ಪ್ರಜಾಪ್ರಭುತ್ವಕ್ಕೆ ಮಾರಕವಾಗಿ ವರ್ತಿಸುತ್ತಿದೆ. 2020ರಲ್ಲಿ ನಡೆಯಬೇಕಿದ್ದ ಚುನಾವಣೆಯು ಇನ್ನೂ ನಡೆಯದಿರುವುದು ಗಮನಿಸಿದರೆ ಬಿಜೆಪಿಯ ಭಯ ಹಾಗೂ ಚುನಾವಣೆ ನಡೆಸದೇ ಅಧಿಕಾರ ಅನುಭವಿಸುವ ದುರಾಸೆ ತಿಳಿಯುತ್ತದೆ" ಎಂದು ಹೇಳಿದರು.

ಡಿಸೆಂಬರ್ 31ರೊಳಗೆ ಚುನಾವಣೆ ನಡೆಸಲಿ
"ಬೆಂಗಳೂರಿನಾದ್ಯಂತ ಆಮ್ ಆದ್ಮಿ ಪಾರ್ಟಿಗೆ ಜನಬೆಂಬಲ ಹೆಚ್ಚಾಗುತ್ತಿರುವುದು ಬಿಜೆಪಿ ನಾಯಕರ ನಿದ್ದೆಗೆಡಿಸಿದೆ. ಭ್ರಷ್ಟ ಪಕ್ಷಗಳನ್ನು ಬದಿಗೊತ್ತಿ ಪ್ರಾಮಾಣಿಕ ಆಡಳಿತವನ್ನು ತರಬೇಕೆಂಬ ಬೆಂಗಳೂರಿಗರ ನಿಲುವನ್ನು ಸಹಿಸಿಕೊಳ್ಳಲು ಬಿಜೆಪಿ ಸಾಧ್ಯವಾಗುತ್ತಿಲ್ಲ. ಆದ್ದರಿಂದ ಒಂದಿಲ್ಲೊಂದು ಕುತಂತ್ರಗಳನ್ನು ಮಾಡಿ ಚುನಾವಣೆಯನ್ನು ಎರಡು ವರ್ಷಗಳ ಕಾಲ ಮುಂದೂಡಿದೆ. ಆಮ್ ಆದ್ಮಿ ಪಾರ್ಟಿಯು ಚುನಾವಣೆಗೆ ಸಿದ್ಧವಾಗಿದ್ದು, ಯಾವಾಗ ಚುನಾವಣೆ ನಡೆದರೂ ನಾವೇ ಗೆಲ್ಲಲಿದ್ದೇವೆ. ಬಿಜೆಪಿ ಸರ್ಕಾರವು ಹೈಕೋರ್ಟ್ ಆದೇಶದಂತೆ ಡಿಸೆಂಬರ್ 31ರೊಳಗೆ ಚುನಾವಣೆ ನಡೆಸುವ ತಾಕತ್ತು ಪ್ರದರ್ಶಿಸಲಿ" ಎಂದು ಮೋಹನ್ ದಾಸರಿ ಹೇಳಿದರು.
ಎಎಪಿ ಕಂಡರೆ ಬಿಜೆಪಿಗೆ ಭಯ
"ಆಮ್ ಆದ್ಮಿ ಪಾರ್ಟಿಯು ಪ್ರತಿ ವಾರ್ಡ್ನಲ್ಲೂ ಬಲಗೊಳ್ಳುತ್ತಿದೆ. ಮನೆಮನೆ ಪ್ರಚಾರ ನಡೆಸಿ ಎಎಪಿಯ ಸಾಧನೆಗಳನ್ನು ಜನರಿಗೆ ತಲುಪಿಸುವ ಕಾರ್ಯ ಭರದಿಂದ ಸಾಗಿದೆ. ಕೇಂದ್ರದ ಬಿಜೆಪಿ ಸರ್ಕಾರದ ಜನವಿರೋಧಿ ನೀತಿಗಳು ಹಾಗೂ ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರಕ್ಕೆ ಜನರು ಹಿಡಿಶಾಪ ಹಾಕುತ್ತಿರುವುದು ಕಂಡುಬರುತ್ತಿದೆ. ಗುಣಮಟ್ಟದ ಮೂಲಸೌಕರ್ಯಗಳು ಹಾಗೂ ಪಾರದರ್ಶಕ ಆಡಳಿತಕ್ಕಾಗಿ ಬೆಂಗಳೂರಿನ ಜನತೆ ದೊಡ್ಡ ಪ್ರಮಾಣದಲ್ಲಿ ಎಎಪಿಯನ್ನು ಬೆಂಬಲಿಸಬೇಕು"ಎಂದು ಮೋಹನ್ ದಾಸರಿ ಹೇಳಿದರು.












Click it and Unblock the Notifications