ಬಿಬಿಎಂಪಿ ಚುನಾವಣೆ ಫಲಿತಾಂಶ : ಯಾರು, ಏನು ಹೇಳಿದರು?
ಬೆಂಗಳೂರು, ಆ.25 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನವಣಾ ಫಲಿತಾಂಶ ಪ್ರಕಟಗೊಂಡಿದ್ದು, ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಪಕ್ಷ ಪಾಲಿಕೆಯಲ್ಲಿ ಅಧಿಕಾರ ಹಿಡಿಯಲು ವಿಫಲವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಗಳೂರು ರೌಂಡ್ಸ್ ಮತಗಳಾಗಿ ಪರಿವರ್ತನೆಯಾಗಿಲ್ಲ.
ಮಂಗಳವಾರ ಬಿಬಿಎಂಪಿ ಫಲಿತಾಂಶ ಪ್ರಕಟಗೊಂಡಿದ್ದು ಬಿಜೆಪಿ 100 ಸ್ಥಾನಗಳಲ್ಲಿ ಜಯಗಳಿಸಿದೆ. ಕಾಂಗ್ರೆಸ್ ಪಕ್ಷ 76 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಜೆಡಿಎಸ್ ಅಭ್ಯರ್ಥಿಗಳು 14 ವಾರ್ಡ್ಗಳಲ್ಲಿ ಗೆಲುವು ಸಾಧಿಸಿದ್ದಾರೆ. ಬಿಬಿಎಂಪಿಯಲ್ಲಿ ಅಧಿಕಾರ ಹಿಡಿಯುವ ಕಾಂಗ್ರೆಸ್ ಕನಸು ನನಸಾಗಿಲ್ಲ. [ಬಿಬಿಎಂಪಿ ಫಲಿತಾಂಶ : ಕ್ಷಣ-ಕ್ಷಣದ ಮಾಹಿತಿ]
'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಜನಾದೇಶ ಕಳೆದುಕೊಂಡಿದೆ' ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದರೆ, 'ಚುನಾವಣೆ ಬಂದಾಗ ಮಾತ್ರ ಬೆಂಗಳೂರಿನ ಕಡೆ ತಿರುಗಿ ನೋಡಬೇಡಿ' ಎಂದು ಸರ್ಕಾರಕ್ಕೆ ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಸಲಹೆ ನೀಡಿದ್ದಾರೆ. [ಬಿಬಿಎಂಪಿ: ಬಿಜೆಪಿಗೆ ಸ್ಪಷ್ಟ ಬಹುಮತ, ಕಾಂಗ್ರೆಸ್ಸಿಗೆ ಮುಖಭಂಗ]
'ಬಿಬಿಎಂಪಿ ಚುನಾವಣೆ ಗೆಲುವು ಒಬ್ಬ ವ್ಯಕ್ತಿಯ ಗೆಲುವಲ್ಲ' ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಸಹ ಬಿಜೆಪಿಯನ್ನು ಬೆಂಲಿಸಿದ ಬೆಂಗಳೂರಿನ ಜನರಿಗೆ ಟ್ವಿಟರ್ ಮೂಲಕ ಕೃತಜ್ಞತೆ ಸಲ್ಲಿಸಿದ್ದಾರೆ. ಫಲಿತಾಂಶದ ಬಗ್ಗೆ ಯಾರು ಏನು ಹೇಳಿದರು ನೋಡೋಣ ಬನ್ನಿ.....
'ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ'
'ಬಿಬಿಎಂಪಿ ಚುನಾವಣೆಯಲ್ಲಿ ನಿರೀಕ್ಷಿತ ಫಲಿತಾಂಶ ಬಂದಿಲ್ಲ. ಹೆಚ್ಚಿನ ಸ್ಥಾನಗಳನ್ನು ನಿರೀಕ್ಷೆ ಮಾಡಲಾಗಿತ್ತು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಬೆಂಗಳೂರಿನ ಅಭಿವೃದ್ಧಿಗಾಗಿ ಅನೇಕ ಕಾರ್ಯಕ್ರಮಳನ್ನು ಹಮ್ಮಿಕೊಳ್ಳಲಾಗಿತ್ತು. ಬಿಜೆಪಿ ಐದು ವರ್ಷ ಅಧಿಕಾರ ನಡೆಸಿದರೂ ಏನೂ ಕೆಲಸ ಮಾಡಿರಲಿಲ್ಲ. ಆದರೂ ಜನರು ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಸೋಲಿನ ಜವಾಬ್ದಾರಿಯನ್ನು ನಾನೇ ತೆಗೆದುಕೊಳ್ಳುತ್ತೇನೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
'ಚುನಾವಣೆಯ ಗೆಲುವು ಒಬ್ಬ ವ್ಯಕ್ತಿಯದ್ದಲ್ಲ'
'ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದರೂ ಬಿಬಿಎಂಪಿ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದೆ. 20 ವರ್ಷಗಳಲ್ಲೇ ಮೊದಲ ಬಾರಿಗೆ ರಾಜ್ಯದ ಪ್ರತಿಪಕ್ಷ ಸ್ಥಾನದಲ್ಲಿ ಕುಳಿತಿರುವ ಪಕ್ಷ ಬಿಬಿಎಂಪಿ ಚುನಾವಣೆ ಗೆದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವರು ಈ ಸೋಲಿನ ಹೊಣೆಯನ್ನು ಹೊರಬೇಕು. ಬಿಜೆಪಿಯ ಈ ಗೆಲುವು ಒಬ್ಬ ವ್ಯಕ್ತಿಯ ಗೆಲುವುಲ್ಲ. ಬೆಂಗಳೂರಿನ ಅಭಿವೃದ್ಧಿಗೆ ಎಲ್ಲ ಪಕ್ಷಗಳು ಸಹಕಾರ ನೀಡಬೇಕು' ಎಂದು ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
'ಸಿದ್ದರಾಮಯ್ಯ ಸರ್ಕಾರ ಜನಾದೇಶ ಕಳೆದುಕೊಂಡಿದೆ'
'ಬಿಬಿಎಂಪಿ ಚುನಾವಣಾ ಫಲಿತಾಂಶ ಮುಂಬರುವ ಎಲ್ಲ ಚುನಾವಣೆಗೂ ದಿಕ್ಸೂಚಿಯಾಗಲಿದೆ. ಸಿದ್ದರಾಮಯ್ಯ ಸರ್ಕಾರ ಜನಾದೇಶ ಕಳೆದುಕೊಂಡಿದೆ. ಕಾಂಗ್ರೆಸ್ ಸರ್ಕಾರ ನಡೆಸಿದ ಹಗರಣಗಳು ಹಾಗೂ ಬೆಂಗಳೂರು ನಗರದ ಅಭಿವೃದ್ಧಿಯನ್ನು ಕಡೆಗಣಿಸಿದ್ದು ಅವರ ಸೋಲಿಗೆ ಪ್ರಮುಖ ಕಾರಣವಾಗಿದೆ' ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದಾರೆ.
|
ಬೆಂಗಳೂರಿಗರಿಗೆ ಕೃತಜ್ಞತೆ ಸಲ್ಲಿಸಿದ ಮೋದಿ
ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಜನರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಚುನಾವಣೆ ಫಲಿತಾಂಶ ಅಚ್ಚರಿ ತಂದಿದೆ
'ಚುನಾವಣಾ ಫಲಿತಾಂಶ ಅಚ್ಚರಿ ತಂದಿದೆ. ಮತ ವಿಭಜನೆ ಮಾಡಲು ಹಲವಾರು ಜನರು ಚುನಾವಣೆಗೆ ಸ್ಪರ್ಧಿಸುತ್ತಾರೆ. ಬಿಬಿಎಂಪಿ ಚುನಾವಣಾ ಫಲಿತಾಂಶ ಸರ್ಕಾರದ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ' ಎಂದು ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
'ಚುನಾವಣೆಯಲ್ಲಿ ಭ್ರಷ್ಟರಿಗೆ ಗೆಲುವು ಸಿಕ್ಕಿದೆ'
'ಬಿಬಿಎಂಪಿ ಚುನಾವಣೆಯಲ್ಲಿ ಭ್ರಷ್ಟರಿಗೆ ಗೆಲುವು ಸಿಕ್ಕಿದೆ. ಬೆಂಗಳೂರಿಗರು ಮತ್ತೆ ಭ್ರಷ್ಟರನ್ನು ಆಯ್ಕೆ ಮಾಡಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. 'ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಭ್ರಷ್ಟಾಚಾರವನ್ನು ನಾವು ಬಯಲಿಗೆಳೆದಿದ್ದೆವು. ಜನರ ಮುಂದೆ ಸತ್ಯವನ್ನು ತೆರೆದಿಟ್ಟಿದ್ದೆವು. ಆದರೂ ಜನರು ಭ್ರಷ್ಟರಿಗೆ ಅಧಿಕಾರ ನೀಡಿದ್ದಾರೆ' ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಮುಂದಿನ ಚುನಾವಣೆಯಲ್ಲಿ ಪೈಪೋಟಿ ಕೊಡುತ್ತೇವೆ
'ಜನರು ಕೊಟ್ಟ ತೀರ್ಪನ್ನು ಒಪ್ಪಿಕೊಳ್ಳುತ್ತೇವೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ಪೈಪೋಟಿ ನೀಡುತ್ತೇವೆ. ಪಕ್ಷ ಕೊಟ್ಟ ಜವಾಬ್ದಾರಿಯನ್ನು ನಾನು ನಿರ್ವಹಿಸಿದ್ದೇನೆ' ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
'ಚುನಾವಣೆ ಬಂದಾಗ ಬೆಂಗಳೂರನ್ನು ನೋಡಬೇಡಿ'
'ಚುನಾವಣೆಗಳು ಬಂದಾಗ ಬೆಂಗಳೂರನ್ನು ನೋಡಬೇಡಿ. ಬೆಂಗಳೂರಿನ ಜನರನ್ನು ಕಡೆಗಣಿಸಬೇಡಿ' ಎಂದು ಮಾಜಿ ಉಪಮುಖ್ಯಮಂತ್ರಿ ಮತ್ತು ಬಿಜೆಪಿ ಚುನಾವಣಾ ಉಸ್ತುವಾರಿ ಆರ್.ಅಶೋಕ್ ಕಾಂಗ್ರೆಸ್ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. 'ಸಿದ್ದರಾಮಯ್ಯ ಅವರು ತಮ್ಮ ಸಂಪುಟದ ಎಲ್ಲಾ ಸಚಿವರನ್ನು ಕರೆದುಕೊಂಡು ಬಂದು ಪ್ರಚಾರ ನಡೆಸಿದರೂ ಗೆಲ್ಲಲು ಸಾಧ್ಯವಾಗಿಲ್ಲ' ಎಂದು ಅವರು ಲೇವಡಿ ಮಾಡಿದ್ದಾರೆ.
ತಪ್ಪಿನ ಬಗ್ಗೆ ಪರಾಮರ್ಶಿಸುತ್ತೇವೆ : ಪರಮೇಶ್ವರ
'ಬಿಬಿಎಂಪಿ ಚುನಾವಣೆಯಲ್ಲಿ ನಾವು ಎಲ್ಲಿ ತಪ್ಪಿ ಮಾಡಿದ್ದೇವೆ ಎಂದು ಪರಾಮರ್ಶೆ ನಡೆಸುತ್ತೇವೆ. ಬಿಜೆಪಿ ಹಿಂದೆ ಐದು ವರ್ಷ ಅಧಿಕಾರ ನಡೆಸಿದೆ. ಹಲವಾರು ಹಗರಣ ಮಾಡಿದೆ. ಆದರೂ ಜನರು ಅವರಿಗೆ ಬೆಂಬಲ ನೀಡಿದ್ದಾರೆ. ಇದು ಸರ್ಕಾರದ ವಿರುದ್ಧ ಬಂದ ತೀರ್ಪಲ್ಲ ಎಂದು' ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಹೇಳಿದ್ದಾರೆ.
'ಬಿಜೆಪಿ ತಪ್ಪನ್ನು ಜನರಿಗೆ ತಲುಪಿಸಲು ವಿಫಲವಾಗಿದ್ದೇವೆ'
'ಕಾಂಗ್ರೆಸ್ ಪಕ್ಷಕ್ಕೆ ಸರಳ ಬಹುಮತ ಬರುತ್ತದೆ ಎಂಬ ವಿಶ್ವಾಸವಿತ್ತು. ಪಾಲಿಕೆಯಲ್ಲಿ ಬಿಜೆಪಿಯ ಐದು ವರ್ಷಗಳ ಆಡಳಿತ ನೋಡಿಯೂ ಜನರು ಅವರಿಗೆ ಮತ ಹಾಕಿದ್ದಾರೆ ಎಂದರೆ ಅವರ ತಪ್ಪುಗಳನ್ನು ನಾವು ಜನರಿಗೆ ತಲುಪಿಸಲು ವಿಫಲವಾಗಿದ್ದೇವೆ ಎಂದು ಅನ್ನಿಸುತ್ತಿದೆ' ಎಂದು ಬೆಂಗಳೂರು ನಗರ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.