ಬೆಂಗಳೂರು: ಒತ್ತುವರಿ ತೆರವುಗೊಳಿಸಲು ಬಿಬಿಎಂಪಿ ಖಡಕ್ ಸೂಚನೆ
ಬೆಂಗಳೂರು, ಡಿಸೆಂಬರ್ 20: ಬೆಂಗಳೂರಿನಲ್ಲಿ ಬಾಕಿ ಉಳಿದ ಬೃಹತ್ ನೀರುಗಾಲುವೆಗಳ ಒತ್ತುವರಿಗಳನ್ನು ಸರ್ವೇ ಕಾರ್ಯ ತ್ವರಿತವಾಗಿ ಪೂರ್ಣಗೊಳಿಸಿ. ನಂತರ ಸಂಬಂಧಿಸಿದದ ಒತ್ತುವರಿದಾರರಿಗೆ ನೋಟಿಸ್ ನೀಡಿ ಒತ್ತುವರಿ ತೆರವು ಮಾಡುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಖಡಕ್ ಸೂಚನೆ ನೀಡಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಬೃಹತ್ ನೀರುಗಾಲುವೆಗಳ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಪಾಲಿಕೆಯ ಅಧಿಕಾರಿಗಳು, ಬೆಂಗಳೂರು ನಗರ ಜಿಲ್ಲೆಯ ತಹಶೀಲ್ದಾರರು ಹಾಗೂ ಭೂಮಾಪಕರು ಸಮನ್ವಯ ಮಾಡಿಕೊಂಡು ಒತ್ತುವರಿ ತೆರವು ಕಾರ್ಯಾಚರಣೆ ನಡೆಸುವಂತೆ ಅವರು ತಿಳಿಸಿದರು.
ಬೆಂಗಳೂರು: ನಗರದ ಸ್ವಚ್ಚತೆಗಾಗಿ ಪೌರಕಾರ್ಮಿಕರಿಗೆ 815 ಕ್ಲಿನಿಂಗ್ ಯಂತ್ರ ನೀಡಲಿರುವ ಬಿಬಿಎಂಪಿ
ಒತ್ತುವರಿ ತೆರವು ಸಂಬಂಧ ಸರ್ವೇ ಕಾರ್ಯ ಪೂರ್ಣಗೊಳಿಸಿ. ಬೃಹತ್ ನೀರುಗಾಲುವೆಯ ಒತ್ತುವರಿದಾರರಿಗೆ ನೋಟಿಸ್ ಜಾರಿ ಮಾಡಿ ಅಹವಾಲು ಆಲಿಸಿ ಅಗತ್ಯ ಆದೇಶ ಹೊರಡಿಸುವಂತೆ ಸಂಬಂಧಪಟ್ಟ ತಹಶೀಲ್ದಾರರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಮುಖ್ಯವಾಗಿ ಬೃಹತ್ ನೀರುಗಾಲುವೆಗಳ ಒತ್ತುವರಿಗಳನ್ನು ತೆರವುಗೊಳಿಸದಂತೆ ನ್ಯಾಯಾಲಯದಿಂದ ತಡೆ ತಂದ ಪ್ರಕರಣಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥಪಡಿಸಿಕೊಂಡು ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿ. ನೀರುಗಾಲುವೆಗಳಲ್ಲಿ ಸರಾಗವಾಗಿ ನೀರು ಹರಿದುಹೋಗುವಂತೆ ಮಾಡಬೇಕು.
ಬೃಹತ್ ನೀರುಗಾಲುವೆಗಳ ಅಭಿವೃದ್ಧಿಗಾಗಿ ಈಗಾಗಲೇ ವಲಯವಾರು ಪ್ಯಾಕೇಜ್ ಗಳ ಮುಖಾಂತರ ಟೆಂಡರ್ ಕರೆದು ಕಾಮಗಾರಿಯನ್ನು ಪ್ರಾರಂಭಿಸಲಾಗಿದೆ. ಇನ್ನೂ ಪ್ರಾರಂಭವಾಗದ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕಾಮಗಾರಿ ಪ್ರಾರಂಭಿಸಬೇಕು ಎಂದರು.
ಬೃಹತ್ ನೀರುಗಾಲುವೆ ಒತ್ತುವರಿಗಳ ವಿವರ
ಬಿಬಿಎಂಪಿ ವ್ಯಾಪ್ತಿಯಲ್ಲಿ 2015 ಮತ್ತು 2016 ರಿಂದ ಇದುವರೆಗೆ ಒಟ್ಟಾರೆ 2,671 ಬೃಹತ್ ನೀರುಗಾಲುವೆ ಒತ್ತುವರಿಗಳನ್ನು ಗುರುತಿಸಲಾಗಿದೆ. ಈ ಪೈಕಿ 2,073 ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ. ಬಾಕಿ ಉಳಿದಿರುವ 595 ಒತ್ತುವರಿಗಳನ್ನು ತೆರವುಗೊಳಿಸಬೇಕಾಗಿದೆ. ಅದರಲ್ಲಿ 67 ಪ್ರಕರಣಗಳು ನ್ಯಾಯಾಲಯಕ್ಕೆ ಸಂಬಂಧಿಸಿದ್ದಾಗಿದೆ. ಇನ್ನು 470 ಒತ್ತುವರಿಗಳ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಸಮೀಕ್ಷೆ ಕಾರ್ಯವನ್ನು ನಡೆಸುತ್ತಿದ್ದೇವೆ. ಆದಷ್ಟು ಬೇಗ ಸರ್ವೇ ಕಾರ್ಯ ತೆರವುಗೊಳಸಲಾಗುವುದು ಎಂದು ಬಿಬಿಎಂಪಿ ತಿಳಿಸಿದೆ.
ಸಭೆಯಲ್ಲಿ ವಲಯ ಆಯುಕ್ತರಾದ ಡಾ. ತ್ರಿಲೋಕ್ ಚಂದ್ರ, ಡಾ. ಹರೀಶ್ ಕುಮಾರ್, ಬೆಂಗಳೂರು ನಗರ ಜಿಲ್ಲಾಧಿಕಾರಿ ದಯಾನಂದ, ವಲಯ ಜಂಟಿ ಆಯುಕ್ತರಾದ ವೆಂಕಟಾ ಚಲಪತಿ, ಕೃಷ್ಣಮೂರ್ತಿ, ಮುಖ್ಯ ಅಭಿಯಂತರರಾದ ಬಸವರಾಜ್ ಕಬಾಡೆ ಮತ್ತಿತರರು ಪಾಲ್ಗೊಂಡಿದ್ದರು.