ಕೊರೊನಾವೈರಸ್ ಐತ್ರಿ: ಬೆಂಗಳೂರಲ್ಲಿ ಬದುಕುವವರು ಈ ಸ್ಟೋರಿ ಓದಲೇಬೇಕು!
ಬೆಂಗಳೂರು, ಜುಲೈ.22: ಕೊರೊನಾವೈರಸ್ ಸೋಂಕು ಹರಡುವಿಕೆಗೆ ಕಡಿವಾಣ ಹಾಕಲು ಶ್ರಮಿಸುತ್ತಿರುವ ಸರ್ಕಾರಕ್ಕೆ ಸಹಕಾರ ನೀಡಬೇಕು. ಖಾಸಗಿ ಆಸ್ಪತ್ರೆಗಳು ಶೇ.50ರಷ್ಟು ಹಾಸಿಗೆಯನ್ನು ಸರ್ಕಾರಕ್ಕೆ ಒಪ್ಪಿಸಬೇಕು ಎಂಬ ನಿಯಮವನ್ನು ಜಾರಿಗೊಳಿಸಿದರೂ ಈ ಆದೇಶವನ್ನು ಖಾಸಗಿ ಆಸ್ಪತ್ರೆಗಳು ಕಿವಿ ಮೇಲೆ ಹಾಕಿಕೊಳ್ಳುತ್ತಿಲ್ಲ.
Recommended Video
ಸರ್ಕಾರದ ಮಾರ್ಗಸೂಚಿಯನ್ನು ನಿರ್ಲಕ್ಷಿಸಿದ 291 ಖಾಸಗಿ ಆಸ್ಪತ್ರೆಗಳ ವಿರುದ್ಧ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಶೋಕಾಸ್ ನೋಟಿಸ್ ಜಾರಿಗೊಳಿಸಿದೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಲ್ಲಿರುವ 291 ಆಸ್ಪತ್ರೆಗಳಲ್ಲಿ ಇರುವ ಹಾಸಿಗೆಗಳ ಕುರಿತು ಸಂಪೂರ್ಣ ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ. ಒಂದು ವೇಳೆ ಈ ನೋಟಿಸ್ ಬಗ್ಗೆ ನಿರ್ಲಕ್ಷ್ಯ ತೋರಿದ್ದಲ್ಲಿ, ಸರಿಯಾದ ರೀತಿ ಮಾಹಿತಿ ನೀಡದ್ದಲ್ಲಿ ಶಿಸ್ತುಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ಸರ್ಕಾರಕ್ಕೆ ಶೇ.50ರಷ್ಟು ಬೆಡ್ ನೀಡದಿದ್ದರೆ ಕ್ರಮ
ಬೆಂಗಳೂರಿನ ಎಂಟೂ ವಲಯಗಳಲ್ಲಿ ಖಾಸಗಿ ಆಸ್ಪತ್ರೆಗಳ ಮೇಲೆ ನಿಗಾ ವಹಿಸುವುದಕ್ಕೆ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ತಂಡವನ್ನು ರಚಿಸಲಾಗಿದೆ. ಈ ತಂಡವು ಖಾಸಗಿ ಆಸ್ಪತ್ರೆಗಳಲ್ಲಿ ಶೇ.50ರಷ್ಟು ಹಾಸಿಗೆಗಳನ್ನು ಸರ್ಕಾರಿ ಕೋಟಾದ ಅಡಿಯಲ್ಲಿ ಕೊವಿಡ್-19 ಸೋಂಕಿತರ ಚಿಕಿತ್ಸೆಗೆ ಬಳಸಲಾಗುತ್ತಿದೆಯೇ ಇಲ್ಲವೇ ಎನ್ನುವುದನ್ನು ಪರಿಶೀಲನೆ ನಡೆಸಲಿದೆ ಎಂದು ಸ್ವತಃ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದರು.

ದಂಡದ ಮೊತ್ತದಲ್ಲಿ ಐದು ಪಟ್ಟು ಹೆಚ್ಚಳಕ್ಕೆ ತೀರ್ಮಾನ
ಬೆಂಗಳೂರಿನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದ ಮತ್ತು ಮಾಸ್ಕ್ ಧರಿಸದಿದ್ದರೆ ಬಿಬಿಎಂಪಿ ವತಿಯಿಂದ 200 ರೂಪಾಯಿ ದಂಡವನ್ನು ವಿಧಿಸಲಾಗುತ್ತಿದೆ. ಈ ದಂಡದ ಮೊತ್ತವನ್ನು ಐದು ಪಟ್ಟು ಹೆಚ್ಚಿಸುವುದಕ್ಕೆ ತೀರ್ಮಾನಿಸಲಾಗಿದೆ. ಅಂದರೆ 1,000 ರೂಪಾಯಿ ದಂಡ ವಿಧಿಸುವ ಬಗ್ಗೆ ತೀರ್ಮಾನಿಸಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.

ಕೊರೊನಾವೈರಸ್ ನಿಂದ ಮೃತಪಟ್ಟವರ ಅಂತ್ಯಕ್ರಿಯೆಗೆ ವ್ಯವಸ್ಥೆ
ಬೆಂಗಳೂರಿನಲ್ಲಿ ಕೊರೊನಾವೈರಸ್ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ 11 ವಿದ್ಯುತ್ ಶವಾಗಾರವನ್ನು ಸಿದ್ಧಪಡಿಸಲಾಗಿದೆ. ಪ್ರತಿಯೊಂದು ಶವಾಗಾರದಲ್ಲಿ ದಿನಕ್ಕೆ 192 ಮೃತದೇಹಗಳ ಅಂತ್ಯಕ್ರಿಯೆ ನೆರವೇರಿಸುವ ಸಾಮರ್ಥ್ಯವನ್ನು ಹೊಂದಿರುತ್ತವೆ. ಯಲಹಂಕದ ಮೋದಿ ಅಗ್ರಹಾರ, ಬೊಮ್ಮನಹಳ್ಳಿಯ ಕುಡ್ಲು, ಮಹದೇವಪುರ ಮತ್ತು ಕೆಂಗೇರಿಯಲ್ಲಿ ವಿದ್ಯುತ್ ಶವಾಗಾರಗಳಿದ್ದು, ರಾತ್ರಿ 8 ಗಂಟೆವರೆಗೂ ಈ ಶವಾಗಾರಗಳು ಕಾರ್ಯನಿರ್ವಹಿಸಲಿವೆ.

ಕಂಟೇನ್ಮೆಂಟ್ ಝೋನ್ ಗಳಲ್ಲಿ ಆಹಾರದ ಕಿಟ್ ವಿತರಣೆ
ಬೆಂಗಳೂರಿನ ಕಂಟೇನ್ಮೆಂಟ್ ಝೋನ್ ಗಳಲ್ಲಿ ವಾಸಿಸುವ ಬಡ ಮತ್ತು ಆರ್ಥಿಕವಾಗಿ ದುರ್ಬಲರಾಗಿರುವ ಕುಟುಂಬಗಳಿಗೆ ಆಹಾರದ ಕಿಟ್ ಗಳನ್ನು ವಿತರಣೆ ಮಾಡಲಾಗುತ್ತಿದೆ. ಈ ಆಹಾರದ ಕಿಟ್ ಗಳನ್ನು ಅಜೀಮ್ ಪ್ರೇಮ್ ಜೀ ಪೌಂಡೇಶನ್ ಒದಗಿಸುವ ಭರವಸೆ ನೀಡಿದೆ ಎಂದು ಬಿಬಿಎಂಪಿ ಆಯುಕ್ತರಾದ ಎನ್.ಮಂಜುನಾಥ್ ಪ್ರಸಾದ್ ಅವರು ತಿಳಿಸಿದ್ದಾರೆ.












Click it and Unblock the Notifications