ಬೆಂಗಳೂರಿನಲ್ಲಿ ಸಾವು, ನೋವಿಗೆ ಅಧಿಕಾರಿಗಳೆ ಹೊಣೆ: ಸಿಎಂ ಯಡಿಯೂರಪ್ಪ ಎಚ್ಚರಿಕೆ
ಬೆಂಗಳೂರು, ಮೇ 30: ಕೊರೊನಾವೈರಸ್ ಸಂಕಷ್ಟದಿಂದ ಪಾರಾಗುವ ಮೊದಲೇ ಬೆಂಗಳೂರಿನಲ್ಲಿ ಮಳೆ ಶುರುವಾಗಿದೆ. ಆ ಮೂಲಕ ಮತ್ತೊಂದು ಸಮಸ್ಯೆ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಗೆ ಎದುರಾಗಿದೆ. ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ಲಾಕ್ಡೌನ್ ಜಾರಿಯಲ್ಲಿದೆ. ಮಳೆಗಾಲ ಶುರುವಾದ ನಂತರ ಜನರು ಕೈಯಲ್ಲಿ ಜೀವ ಹಿಡಿದುಕೊಂಡು ಓಡಾಡುವ ಪರಿಸ್ಥಿತಿಯಿದೆ. ಇದೀಗ ಕೊರೊನಾವೈರಸ್ ಜೊತೆಗೆ ಮಳೆಗಾಲವೂ ಬಂದಿರುವುದು ಬೆಂಗಳೂರಿಗರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಆದರೆ ಕೊರೊನಾವೈರಸ್ ನೆಪದಲ್ಲಿ ಅಧಿಕಾರಿಗಳು ಯಾವುದೇ ಕುಂಟು ನೆಪ ಹೇಳದೆ, ಸಾರ್ವಜನಿಕರಿಗೆ ತೊಂದರೆ ಆಗದಂತೆ ಕರ್ತವ್ಯ ನಿರ್ವಹಿಸಬೇಕು ಎಂದು ಸ್ವತಃ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬಿಬಿಎಂಪಿ ಅಧಿಕಾರಿಗಳಿಗೆ ಗೃಹಕಚೇರಿ ಕೃಷ್ಣಾದಲ್ಲಿ ಎಚ್ಚರಿಕೆ ಕೊಟ್ಟಿದ್ದಾರೆ..

ದೂರು ಬಂದಲ್ಲಿ ಕಠಿಣ ಕ್ರಮ
ಬೆಂಗಳೂರಿನಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಬಿಬಿಎಂಪಿ ನಿಯಂತ್ರಣಾ ಕೊಠಡಿ ಹಾಗೂ ಸಹಾಯವಾಣಿಗಳಿಗೆ ಸಾರ್ವಜನಿಕರಿಂದ ಬರುವ ಕರೆಗಳನ್ನು ಸ್ವೀಕರಿಸಿ ತಕ್ಷಣ ಸ್ಪಂದಿಸಬೇಕು. ಕರೆ ಸ್ವೀಕರಿಸದೇ ಇರುವ ಬಗ್ಗೆ ದೂರುಗಳು ಬಂದಲ್ಲಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಸಿಎಂ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.
ಮುಂಗಾರು ಮಳೆ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಅಧಿಕಾರಿಗಳ ಸಭೆಯನ್ನು ಯಡಿಯೂರಪ್ಪ ಮಾಡಿದ್ದಾರೆ.

ಸಾವಿಗೆ ಅಧಿಕಾರಿಗಳೆ ಹೊಣೆ
ಇದೇ ಸಂದರ್ಭದಲ್ಲಿ ಅಕಾಲಿಕ ಮಳೆಯಿಂದ ಸಾವೀಗೀಡಾದ ಇಬ್ಬರು ಹೆಣ್ಣು ಮಕ್ಕಳ ಕುಟುಂಬಕ್ಕೆ ಬಿಬಿಎಂಪಿ ವತಿಯಿಂದ ತಲಾ 5 ಲಕ್ಷ ರೂ.ಗಳ ಪರಿಹಾರ ಕೊಡಲಾಯಿತು. ಅಪಾಯಕಾರಿ ರೆಂಬೆ ಕೊಂಬೆಗಳನ್ನು ಗುರುತಿಸಿ ಕತ್ತರಿಸುವ ಕೆಲಸ ನಿರಂತರವಾಗಿ ಆಗಬೇಕು ಎಂದು ಸಿಎಂ ಸೂಚಿಸಿದ್ದಾರೆ.
ಎರಡು ದಿನಗಳಲ್ಲಿ ನಗರದಲ್ಲಿ ಮಳೆಯಿಂದ ಬಿದ್ದ ಮರಗಳನ್ನು ತೆರವುಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು. ನಗರ ಸಂಚಾರಕ್ಕೆ ಬಂದ ಸಂದರ್ಭದಲ್ಲಿ ಯಾವುದೇ ಲೋಪ ಕಂಡುಬಂದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ನಗರದಲ್ಲಿ ಯಾವುದೇ ಸಾವು, ನೋವು ಸಂಭವಿಸದಂತೆ ಅಗತ್ಯವಿರುವ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಯಡಿಯೂರಪ್ಪ ಸೂಚಿಸಿದರು.

ಸಮನ್ವಯ ಸಾಧಿಸಿ
ಮಳೆಗಾಲ ಮುಗಿಯುವವರೆಗೆ ಬಿಬಿಎಂಪಿ, ಪೊಲೀಸ್, ಅರಣ್ಯ, ಸಾರಿಗೆ ಹಾಗೂ ಅಗ್ನಿಶಾಮಕ ಇಲಾಖೆಗಳು ಸಮನ್ವಯ ಸಾಧಿಸಿ ಕೆಲಸ ಮಾಡಬೇಕು ಎಂದು ಸಿಎಂ ಆದೇಶಿಸಿದರು. ಮರಗಳ ಕೆಳಗೆ ಯಾವುದೇ ವಾಹನಗಳನ್ನು ನಿಲ್ಲಿಸದಂತೆ ಮುನ್ನೆಚ್ಚರಿಕೆ ವಹಿಸಿ ಅನಾಹುತವಾಗುವುದನ್ನು ತಡೆಗಟ್ಟಬೇಕು. ನಗರದ 8 ವಲಯಗಳಲ್ಲಿ ಮ್ಯಾನ್ ಹೋಲ್ಗಳನ್ನು ಮುಚ್ಚಬೇಕು. ಜೆಟ್ಟಿಂಗ್ ಮೆಶೀನ್ಗಳು ಲಭ್ಯವಿರಬೇಕು ಎಂದು ಆದೇಶ ಮಾಡಿದ್ದಾರೆ.

ಅನಾಹುತಕ್ಕೆ ಅಭಿಯಂತರರು ಹೊಣೆ
ಇನ್ನು ಸಭೆಯಲ್ಲಿದ್ದ ಕಂದಾಯ ಸಚಿವ ಆರ್.ಅಶೋಕ್ ಮಾತನಾಡಿ, ಬೆಂಗಳೂರು ನಗರದ ಎಲ್ಲ ಎಂಟು ವಲಯಗಳಲ್ಲಿ ಬಿ.ಬಿ.ಎಂ.ಪಿ, ಬೆಸ್ಕಾಂ, ಒಳಚರಂಡಿ ಮಂಡಳಿ ಹಾಗೂ ಪೋಲೀಸ್ ಇಲಾಖೆ ಹಾಗೂ ಅಗ್ನಿಶಾಮಕ ಇಲಾಖೆಗಳ ಅಧಿಕಾರಿ/ಸಿಬ್ಬಂದಿಗಳನ್ನು ಒಳಗೊಂಡ ತಂಡವನ್ನು ರಚಿಸಿ ಮಳೆ ಸಂಬಂಧಿ ದೂರುಗಳು ಬಂದಲ್ಲಿ ತಕ್ಷಣವೇ ಕ್ರಮವಹಿಸಬೇಕು ಎಂದರು. ಅನಾಹುತಗಳು ಸಂಭವಿಸಿದಲ್ಲಿ ಸಹಾಯಕ ಅಭಿಯಂತರರನ್ನು ಹೊಣೆ ಮಾಡಲಾಗುವುದು ಎಂದು ತಿಳಿಸಿದರು.

ಸಿಎಂ ನಗರ ಪ್ರದಕ್ಷಿಣೆ
ಇದೇ ಬರುವ ಬುಧವಾರ ಅಥವಾ ಗುರುವಾರ (ಜೂನ್ 3 ಅಥವಾ 4) ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಗರ ಪ್ರದಕ್ಷಿಣೆ ಮಾಡಲಿದ್ದಾರೆ. ಆ ಮೂಲಕ ಮಳೆಗಾಲ ಆರಂಭ ಹಿನ್ನೆಲೆ, ಕೊರೊನಾವೈರಸ್ ನಿಯಂತ್ರಣದ ಪರಿಶೀಲನೆಯನ್ನು ಅವರು ಮಾಡಲಿದ್ದಾರೆ ಎಂದು ವಿಧಾನಸೌಧದಲ್ಲಿ ಸಿಎಂ ನಗರ ಪ್ರದಕ್ಷಿಣೆ ಬಗ್ಗೆ ಕಂದಾಯ ಸಚಿವ ಆರ್. ಅಶೋಕ್ ಮಾಹಿತಿ ಕೊಟ್ಟಿದ್ದಾರೆ.












Click it and Unblock the Notifications