ಶಿಥಿಲಗೊಂಡಿರುವ ಕಟ್ಟಡಗಳ ಮರು ಸಮೀಕ್ಷೆ ನಡೆಸಲು ಬಿಬಿಎಂಪಿ ಸೂಚನೆ
ಬೆಂಗಳೂರು, ಸೆಪ್ಟೆಂಬರ್ 30: ನಗರದಲ್ಲಿ ಶಿಥಿಲಗೊಂಡಿರುವ ಎಲ್ಲಾ ಕಟ್ಟಡಗಳ ಮರು ಸಮೀಕ್ಷೆ ನಡೆಸುವಂತೆ ಬಿಬಿಎಂಪಿ ಸೂಚನೆ ನೀಡಿದೆ.
ಮುಂದಿನ 15 ದಿನಗಳಲ್ಲಿ ಸಮೀಕ್ಷೆ ನಡೆಸಿ ನಿಖರ ವರದಿ ನೀಡುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಸೂಚನೆ ನೀಡಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು ಸಮೀಕ್ಷೆ ಮಾಡುವ ಸಂಬಂಧ ವರ್ಚುವಲ್ ಮಾಧ್ಯಮದಲ್ಲಿ ಎಲ್ಲಾ ವಲಯ ಆಯುಕ್ತರು ಮತ್ತು ಜಂಟಿ ಆಯುಕ್ತರ ಸಭೆ ನಡೆಸಿದರು.

ನಗರದಲ್ಲಿ 2019ರಲ್ಲಿ ಸಮೀಕ್ಷೆಯಲ್ಲಿ ಗುರುತಿಸಿದ್ದ 185 ಶಿಥಿಲಾವಸ್ಥೆಯ ಕಟ್ಟಡಗಳ ಪೈಕಿ ಈಗಾಗಲೇ 10 ಕಟ್ಟಡಗಳನ್ನು ನೆಲಸಮ ಮಾಡಿದ್ದು, ಬಾಕಿ 175 ಕಟ್ಟಡಗಳ ಮಾಲೀಕರಿಗೆ ನೋಟಿಸ್ ನೀಡಬೇಕು. ಜೊತೆಗೆ ಆಯಾ ವಲಯಗಳಲ್ಲಿ ಸಂಬಂಧಪಟ್ಟ ಎಂಜಿನಿಯರ್ ಗಳು ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ಸ್ಥಳಕ್ಕೆ ಭೇಟಿ ನೀಡಿ ಮರು ಪರಿಶೀಲಿಸಬೇಕು. ಬಳಿಕ ಆ ಕಟ್ಟಡಗಳನ್ನು ನೆಲಸಮ ಮಾಡುವ ಸಲುವಾಗಿ ವಲಯವಾರು ಗುತ್ತಿಗೆದಾರರನ್ನು ನೇಮಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದಲ್ಲಿ 2019 ಶಿಥಿಲಾವಸ್ಥೆಯಲ್ಲಿ ಇರುವ ಕಟ್ಟಡಗಳನ್ನು ಸಮೀಕ್ಷೆ ಮಾಡಿರುವ ಪ್ರಕಾರ ಇದೂವರೆಗೆ ಎಷ್ಟು ಕಟ್ಟಡಗಳನ್ನು ನೆಲಸಮ ಮಾಡಲಾಗಿದೆ ಎಂಬುದರ ಬಗ್ಗೆ ಆಯುಕ್ತರು ಎಂಟು ವಲಯಗಳಿಂದ ಮಾಹಿತಿ ಪಡೆದರು.
ಈ ಹಿಂದೆ ಗುರುತಿಸಿದ್ದ ಶಿಥಿಲ ಕಟ್ಟಡಗಳನ್ನು ಖಾಲಿ ಮಾಡಿಸಿ ನೆಲಸಮ ಮಾಡುವ ಇಲ್ಲವೇ, ದುರಸ್ತಿ ಮಾಡಿಸುವ ಕೆಲಸ ಹಿಂದೆಯೇ ಆಗಬೇಕಿತ್ತು.
ಆದರೆ, ಕಾರಣಾಂತರಗಳಿಂದ ಅದು ಸಾಧ್ಯವಾಗಿಲ್ಲ. ಅದರ ಸ್ಥಿತಿಗತಿ ಕುರಿತು ಪರಿಶೀಲನೆ ನಡೆಸಲಾಗುತ್ತದೆ. ಹೊಸದಾಗಿ ಅವಶ್ಯಕತೆ ಇರುವ ಕಡೆಗಳಲ್ಲಿ ಸಮೀಕ್ಷೆ ಮಾಡಲಾಗಿಸಲಾಗುವುದು. ಜೊತೆಗೆ ವಾಸಕ್ಕೆ ಯೋಗ್ಯವಾಗಿಲ್ಲದ ಕಟ್ಟಡಗಳನ್ನು ತೆರವುಗೊಳಿಸುವ ಕೆಲಸ ಮಾಡುತ್ತೇವೆಂದು ತಿಳಿಸಿದ್ದಾರೆ.
Recommended Video
2019ರಲ್ಲಿ ನಡೆಸಿರುವ ಸಮೀಕ್ಷೆ ಸರಿಯಾಗಿದ್ದರೆ, ಅದನ್ನೇ ಅನುಸರಿಸುತ್ತೇವೆ. ಇಲ್ಲದಿದ್ದರೆ ಹೊಸದಾಗಿ ಸಮೀಕ್ಷೆ ಮಾಡಿಸಿ ಕ್ರಮ ಕೈಗೊಳ್ಳುತ್ತೇವೆ. ಸಮೀಕ್ಷೆಗೆ ವಲಯಗಳ ಆಯುಕ್ತರು, ಜಂಟಿ ಆಯುಕ್ತರ ನೇತೃತ್ವದಲ್ಲಿ ವಿವಿಧ ವಿಭಾಗಗಳ ಅಧಿಕಾರಿಗಳ ತಂಡ ರಚಿಸಲಾಗುವುದು, ಇನ್ನೆರಡು ದಿನಗಳಲ್ಲಿ ನಡೆಯುವ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳುತ್ತೇವೆಂದು ಹೇಳಿದರು.












Click it and Unblock the Notifications