ನಗರದಲ್ಲಿ ಕಟ್ಟಡ ನಿರ್ಮಾಣ ಮಾಡುವವರಿಗೆ ಬಿಬಿಎಂಪಿ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ 1 ಲಕ್ಷ ರೂ. ದಂಡ!
ಬೆಂಗಳೂರಿನಲ್ಲಿ ಬೇಕಾಬಿಟ್ಟಿ ಕಟ್ಟಡ ನಿರ್ಮಾಣ ಮಾಡುವವರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಎಚ್ಚರಿಕೆ ನೀಡಿದೆ. ಅಲ್ಲದೇ ಕಟ್ಟಡ ನಿರ್ಮಾಣ ಮಾಡುವಾಗ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಕಟ್ಟಡ ನಿರ್ಮಾಣ ಮಾಲೀಕರಿಗೆ ಬರೋಬ್ಬರಿ ಬರೋಬ್ಬರಿ 1 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಬೆಂಗಳೂರಿನಲ್ಲಿ ಕಟ್ಟಡಗಳ ನಿರ್ಮಾಣ ಪ್ರಕ್ರಿಯೆ ಪ್ರಾರಂಭವಾದರೆ, ಸುತ್ತಮುತ್ತಲಿನ ಪ್ರದೇಶದಲ್ಲಿ ಜನರಿಗೆ ಓಡಾಡಲು ಸಹ ಆಗದಷ್ಟು ಸಮಸ್ಯೆ ಆಗುತ್ತದೆ. ಅಲ್ಲದೇ ಮನೆ ನಿರ್ಮಾಣಕ್ಕೆ ಬಳಸುವ ವಸ್ತುಗಳನ್ನು ರಸ್ತೆಗಳ ಮೇಲೆಯೇ ಹಾಕಲಾಗುತ್ತದೆ. ಇದೀಗ ಈ ರೀತಿ ಕಟ್ಟಡ ನಿರ್ಮಾಣದ ವಿಷಯದಲ್ಲಿ ಸಮಸ್ಯೆ ಆಗುತ್ತಿರುವುದರಿಂದ ಕೊನೆಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಎಚ್ಚೆತ್ತುಕೊಂಡಿದೆ.
ಬೆಂಗಳೂರಿನಲ್ಲಿ ನಿಯಮ ಉಲ್ಲಂಘನೆ ಮಾಡಿ ಕಟ್ಟಡ ನಿರ್ಮಾಣ ಮಾಡುವವರ ಮೇಲೆ ಬಿಬಿಎಂಪಿ ಕಣ್ಣಿರಿಸಿದೆ. ಇದೀಗ ಬೆಂಗಳೂರಿನ ದಕ್ಷಿಣ ವಲಯ ಬಸವನಗುಡಿ ವ್ಯಾಪ್ತಿಯ ಎಂ.ಎನ್ ಕೃಷ್ಣರಾವ್ ರಸ್ತೆಯಲ್ಲಿ ಕಟ್ಟಡ ನಿರ್ಮಾಣದ ಮುಂಭಾಗದಲ್ಲಿರುವ ಪಾದಾಚಾರಿ ಮಾರ್ಗದಲ್ಲಿ ಸಾರುವೆ (ಅಡ್ಡಗೋಡೆ ಮಾದರಿ) ಅಳವಡಿಸಿ ಸಾರ್ವಜನಿಕರ ಓಡಾಟಕ್ಕೆ ಸಮಸ್ಯೆ ಮಾಡಿದವರಿಗೆ ಬರೋಬ್ಬರಿ 1 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ ಎಂದು ಬಿಬಿಎಂಪಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ದಕ್ಷಿಣ ವಲಯ ಎಂ.ಎನ್ ಕೃಷ್ಣರಾವ್ ರಸ್ತೆ ಸ್ವತ್ತಿನ ಸಂಖ್ಯೆ 16ರಲ್ಲಿ ಕಟ್ಟಡ ನಿರ್ಮಿಸುತ್ತಿದ್ದು, ಪಾದಚಾರಿ ಮಾರ್ಗದಲ್ಲಿ ಸಾರುವೆ ಅಳವಡಿಸಿ ಅದಕ್ಕೆ ಗ್ರೀನ್ ನೆಟ್ ಹಾಕಿ ಸಂಪೂರ್ಣವಾಗಿ ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಾಣ ಮಾಡುತ್ತಿರುತ್ತಾರೆ. ಈ ಪೈಕಿ ಸಂಬಂಧಪಟ್ಟ ಕಟ್ಟಡ ಮಾಲೀಕರಿಗೆ ನೋಟೀಸ್ ನೀಡಿ ದುಪ್ಪಟ್ಟು ದಂಡ ವಿಧಿಸಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಸೂಚನೆ ನೀಡಿದ್ದಾರೆ.
ಅದರಂತೆ, ವಲಯ ಮುಖ್ಯ ಎಂಜಿನಿಯರ್ ಬಸವರಾಜ್ ಕಬಾಡೆ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳ ಪರಿಶೀಲನೆ ನಡೆಸಲು ಸೂಚಿಸಿರುತ್ತಾರೆ. ಪರಿಶೀಲನೆಯ ವೇಳೆ ಪಾದಚಾರಿ ಮಾರ್ಗದಲ್ಲಿ ಸಾರುವೆ ಅಳವಡಿಸಿ, ಅದಕ್ಕೆ ಗ್ರೀನ್ ನೆಟ್ ಹಾಕಿ ಜನರು ಓಡಾಡುವುದಕ್ಕೆ ಸಮಸ್ಯೆ ಎದುರಾಗುವ ಪರಿಸ್ಥಿತಿ ಉಂಟಾಗಿದೆ. ಪಾದಚಾರಿ ಮಾರ್ಗದಲ್ಲಿ ಸಾರುವೆ ಅಳವಡಿಸಿರುವ ಪರಿಣಾಮ ಸಾರ್ವಜನಿಕರ ಓಡಾಟಕ್ಕೆ ಅನಾನುಕೂಲವಾಗಿರುತ್ತದೆ. ಪಾಲಿಕೆಯಿಂದ ಯಾವುದೇ ಅನುಮತಿ ಪಡೆಯದೆ ರಸ್ತೆ/ಪಾದಚಾರಿ ಮಾರ್ಗವನ್ನು ಒತ್ತುವರಿ ಮಾಡಿಕೊಂಡು ಸಾರುವೆ ಅಳವಡಿಸಿ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗಿರುತ್ತದೆ. ಆದ್ದರಿಂದ ಕಟ್ಟಡ ಮಾಲೀಕರಾದ ರಾಜೇಂದ್ರ ಕುಮಾರ್ ಅವರಿಗೆ ಸೂಚನಾ ಪತ್ರ ನೀಡಿ ಪಾದಚಾರಿ ಮಾರ್ಗ ಒತ್ತುವರಿ ಮಾಡಿರುವುದಕ್ಕೆ 1 ಲಕ್ಷ ರೂ. ದಂಡವನ್ನು ಪಾವತಿಸಲು ಸೂಚಿಸಲಾಗಿರುತ್ತದೆ ಎಂದು ಬಿಬಿಎಂಪಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮುಂದುವರಿದು, ಕಟ್ಟಡ ಮಾಲೀಕರು 1 ಲಕ್ಷ ರೂ. ಮೊತ್ತದ ಚೆಕ್ ಅನ್ನು ಪಾಲಿಕೆಯ ಮುಖ್ಯ ಆಯುಕ್ತರ ಹೆಸರಿಗೆ ನೀಡಿದ್ದು, ಮತ್ತೆ ಈ ರೀತಿ ಸಾರ್ವಜನಿಕರಿಗೆ ತೊಂದರೆ ಆಗುವ ಕೆಲಸ ಮಾಡದಿರಲು ಕಟ್ಟಡ ಮಾಲೀಕರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.












Click it and Unblock the Notifications