Property: ಬೆಂಗಳೂರಿನ ಈ ಆಸ್ತಿಗಳಿಗೆ ಫೈನಲ್ ನೋಟಿಸ್ ಕೊಡಲಿದೆ ಬಿಬಿಎಂಪಿ!
Property: ಬೆಂಗಳೂರಿನಲ್ಲಿ ಈ ಬಾರಿಯೂ ನೀರಿನ ಸಮಸ್ಯೆ ಉಲ್ಬಣವಾಗುವ ಸಾಧ್ಯತೆ ಇದೆ. ಈಗಾಗಲೇ ಬೆಂಗಳೂರಿನ ಹಲವು ಕಡೆಗಳಲ್ಲಿ ನೀರಿನ ಸಮಸ್ಯೆಯನ್ನು ಪರಿಹರಿಸುವುದಕ್ಕೆ ಜಲಮಂಡಳಿ ಮುಂದಾಗಿದೆ. ಇದೀಗ ಬೆಂಗಳೂರಿನಲ್ಲಿ ನೀರಿನ ಸಮಸ್ಯೆಗೆ ಕಡಿವಾಣ ಹಾಕುವುದಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಹ ಕೈಜೋಡಿಸಿದೆ. ಇದರೊಂದಿಗೆ ನಿಯಮ ಉಲ್ಲಂಘನೆ ಮಾಡಿರುವ ಆಸ್ತಿಗಳಿಗೆ ಫೈನಲ್ ನೋಟಿಸ್ ಕೊಡುವುದಕ್ಕೂ ನಿರ್ಧರಿಸಲಾಗಿದೆ. ಅದೇನು ಎನ್ನುವ ವಿವರ ಇಲ್ಲಿದೆ.
ಬೆಂಗಳೂರಿನಲ್ಲಿ ಕಳೆದ ಬಾರಿ ಭಾರೀ ಬಿಸಿಲಿನಿಂದಾಗಿ ನೀರಿನ ಸಮಸ್ಯೆ ತೀವ್ರವಾಗಿತ್ತು. ಈ ಬಾರಿಯೂ ರಾಜ್ಯದಲ್ಲಿ ಬಿರುಬಿಸಿಲು ಜೋರಾಗಿದ್ದು. ನೀರಿನ ಸಮಸ್ಯೆ ಎದುರಾಗುವ ಆತಂಕ ಇದೆ. ಇದೀಗ ಈ ಸಮಸ್ಯೆಯನ್ನು ಮೂಲ ಹಂತದಲ್ಲೇ ಪರಿಹರಿಸುವುದಕ್ಕೆ ಬಿಬಿಎಂಪಿ ನಿರ್ಧರಿಸಿದ್ದು. ಈ ನಿಟ್ಟಿನಲ್ಲಿ ಮಾಸ್ಟರ್ ಪ್ಲ್ಯಾನ್ವೊಂದನ್ನು ಮಾಡಿಕೊಂಡಿದೆ. ಬೆಂಗಳೂರಿನಲ್ಲಿ ಬಿಬಿಎಂಪಿಯ ವ್ಯಾಪ್ತಿಯಲ್ಲಿ ಬರುವ ಕೆರೆಗಳ ಒತ್ತುವರಿ ತೆರವುಗೊಳಿಸಲು ಸೂಕ್ತ ಕ್ರಮಗಳಲು ಮುಂದಾಗಿರುವುದಾಗಿ ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಹೇಳಿದ್ದಾರೆ. ಈ ನಿಟ್ಟಿನಲ್ಲಿ ಬಿಬಿಎಂಪಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಹೈಕೋರ್ಟ್ನ ರಿಟ್ ಅರ್ಜಿ ಸಂಖ್ಯೆ:38401/2014 ರ ದೈನಂದಿನ ನಿರ್ದೇಶನದಂತೆ, ಬಿಬಿಎಂಪಿ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವಂತಹ ಕೆರೆಗಳ ಒತ್ತುವರಿಯನ್ನು ತೆರವುಗೊಳಿಸುವ ಕುರಿತು ಪಾಲಿಕೆ ಕೇಂದ್ರ ಕಚೇರಿಯ ನೌಕರರ ಭವನದ ಸಂಭಾಗಣದಲ್ಲಿ ಸಭೆಯನ್ನು ನಡೆಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 183 ಕೆರಗಳು ಬರಲಿವೆ. ಈ ಪೈಕಿ ಕಂದಾಯ ಇಲಾಖೆಯ ಭೂಮಾಪಕರು 168 ಕೆರೆಗಳಲ್ಲಿ ಸಮೀಕ್ಷೆ ಮಾಡಿದ್ದಾರೆ. ಈ ಪೈಕಿ 28 ಕೆರೆಗಳಲ್ಲಿ ಯಾವುದೇ ಒತ್ತುವರಿಯಾಗಿರುವುದಿಲ್ಲ ಎಂದು ವರದಿ ನೀಡಿದೆ. 26 ಕೆರೆಗಳಲ್ಲಿ ಸರ್ಕಾರಿ ಒತ್ತುವರಿಗಳಾಗಿರುವ ಕುರಿತು ಮಾಹಿತಿ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.
ಪಾಲಿಕೆ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ಉಳಿದ 114 ಕೆರೆಗಳಿಗೆ ಸಂಬಂಧಿಸಿದಂತೆ ಆಯಾ ವಲಯ ವ್ಯಾಪ್ತಿಯ ಕಾರ್ಯಪಾಲಕ ಎಂಜಿನಿಯರ್ಗಳಿಗೆ ಜವಾಬ್ದಾರಿ ನೀಡಲಾಗಿದೆ. 114 ಕೆರೆಗಳ ಪೈಕಿ ವಲಯಗಳ ಕಾರ್ಯಪಾಲಕ ಅಧಿಕಾರಿಗಳಿಗೆ ಆಯಾ ವಲಯವಾರು ಕೆರೆಗಳ ನಕ್ಷೆ ನೀಡಲಾಗಿದೆ. ಅದರಂತೆ ಕೆರೆಗಳನ್ನು ಒತ್ತುವರಿ ಮಾಡಿರುವವರಿಗೆ ನೋಟಿಸ್ ಜಾರಿ ಮಾಡಿ, ತೆರವು ಕಾರ್ಯಾಚರಣೆ ನಡೆಸಲು ಸೂಚನೆ ನೀಡಲಾಗಿದೆ ಎಂದಿದ್ದಾರೆ.

ಫೈನಲ್ ನೋಟಿಸ್ ಜಾರಿ: ಬೆಂಗಳೂರಿನಲ್ಲಿ ನಿಯಮ ಉಲ್ಲಂಘನೆ ಹಾಗೂ ಕೆರೆಗಳನ್ನು ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಾಣ ಮಾಡಿರುವ ಆಸ್ತಿಗಳ ಆಸ್ತಿದಾರರಿಗೆ ಫೈನಲ್ ನೋಟಿಸ್ ಕೊಡುವುದಕ್ಕೆ ರಾಜ್ಯ ಸರ್ಕಾರವು ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಎಲ್ಲಾ ವಲಯದ ಅಧಿಕಾರಿಗಳು ಸಹ ಕ್ರಮ ತೆಗೆದುಕೊಳ್ಳುವಂತೆ ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಬಿಬಿಎಂಪಿಯ ಅಧಿಕಾರಿಗಳಿಗೆ ಖಡಕ್ ನಿರ್ದೇಶನ ನೀಡಿದ್ದಾರೆ.
ಈ ವೇಳೆ ಅರಣ್ಯ, ಪರಿಸರ ಹಾಗೂ ಹವಾಮಾನ ವೈಪರೀತ್ಯ ವಿಭಾಗದ ವಿಶೇಷ ಆಯುಕ್ತರಾದ ಪ್ರೀತಿ ಗೆಹ್ಲೋಟ್, ವಲಯ ಆಯುಕ್ತರಾದ ಸತೀಶ್, ದಿಗ್ವಿಜಯ್ ಬೋಡ್ಕೆ, ಕೆರೆಗಳ ವಿಭಾಗದ ಮುಖ್ಯ ಎಂಜಿನಿಯರ್ ವಿಜಯ್ ಕುಮಾರ್ ಹರಿದಾಸ್, ಕಾರ್ಯಪಾಲಕ ಎಂಜಿನಿಯರ್, ಕಂದಾಯ ವಿಭಾಗದ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.












Click it and Unblock the Notifications