ಬೆಡ್ ಬ್ಲಾಕಿಂಗ್ ದಂಧೆ: ಸಂಸದ ತೇಜಸ್ವಿ ಸೂರ್ಯ, ಶಾಸಕ ಸತೀಶ್ ರೆಡ್ಡಿ ಬಂಧಿಸುವಂತೆ ದೂರು
ಬೆಂಗಳೂರು, ಮೇ 26: ಸಿಲಿಕಾನ್ ಸಿಟಿಯ ದಕ್ಷಿಣ ವಲಯದಲ್ಲಿ ನಡೆದಿರುವ ಕೊವಿಡ್-19 ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ತೇಜಸ್ವಿ ಸೂರ್ಯ ಮತ್ತು ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಬಂಧಿಸುವಂತೆ ಆಗ್ರಹಿಸಿದ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ರಿಗೆ ದೂರು ನೀಡಲಾಗಿದೆ.
ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಆಪ್ತ ಬಾಬು ಎಂಬ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಆಪ್ತನ ಬಂಧನದ ಬೆನ್ನಲ್ಲೇ ಶಾಸಕ ಸತೀಶ್ ರೆಡ್ಡಿ ಮತ್ತು ಸಂಸದ ತೇಜಸ್ವಿ ಸೂರ್ಯ ಬಂಧನಕ್ಕೆ ಆಗ್ರಹಿಸಿದ ಬ್ಲಾಕ್ ಕಾಂಗ್ರೆಸ್ ಸಮಿತಿಯು ಪೊಲೀಸರಿಗೆ ದೂರು ಸಲ್ಲಿಸಿದೆ.
ಬೆಡ್ ಬ್ಲಾಕಿಂಗ್ ದಂಧೆ: ಶಾಸಕ ಸತೀಶ್ ರೆಡ್ಡಿ ಆಪ್ತ ಬಾಬು ಸೆರೆ
ಸಿಸಿಬಿ ಅಧಿಕಾರಿಗಳ ವಿಚಾರಣೆ ವೇಳೆ ಶಾಸಕರು ತಮಗೆ ಬೇಕಾದವರಿಗೆ ಬೆಡ್ ವ್ಯವಸ್ಥೆ ಮಾಡಿಸಿಕೊಂಡಿರುವುದು ಅದಕ್ಕಾಗಿ ತಮ್ಮನ್ನು ಬಳಸಿಕೊಂಡಿರುವ ಬಗ್ಗೆ ಆರೋಪಿ ಹೇಳಿಕೆ ನೀಡಿದ್ದಾನೆ ಎಂದು ತಿಳಿದು ಬಂದಿದೆ. ಆರೋಪಿ ಬಾಬು ನೀಡಿರುವ ಹೇಳಿಕೆ ಮತ್ತು ಸಿಸಿಟಿವಿ ಕ್ಯಾಮರಾ ದೃಶ್ಯಾವಳಿ ಆಧಾರದ ಮೇಲೆ ಸಿಸಿಬಿ ಪೊಲೀಸರು ಶಾಸಕ ಸತೀಶ್ ರೆಡ್ಡಿಯನ್ನು ವಿಚಾರಣೆಗೊಳಪಡಿಸುವ ಸಾಧ್ಯತೆಯಿದೆ.
ಏನಿದು ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣ:
Recommended Video
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ದಕ್ಷಿಣ ವಲಯದ ವಾರ್ ರೂಂನಲ್ಲಿ ನಡೆಯುತ್ತಿದ್ದ ಬೆಡ್ ಬ್ಲಾಕಿಂಗ್ ದಂಧೆಯನ್ನು ಸಂಸದ ತೇಜಸ್ವಿ ಸೂರ್ಯ ಬಯಲಿಗೆಳೆದಿದ್ದರು. ಅದೇ ಪ್ರಕರಣ ಸಂಬಂಧ ಕೆ ಎಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಮುಖ ಆರೋಪಿ ಮಂಜುನಾಥ್ ಎಂಬಾತನನ್ನು ಬಂಧಿಸಲಾಗಿತ್ತು. ಕಳೆದ ಮೇ 12ರಂದು ಇಸ್ರೋ ಲೇಔಟ್ ನಲ್ಲಿ ಬೆಡ್ ಬ್ಲಾಕಿಂಗ್ ದಂಧೆ ನಡೆಸಿ ಹಣ ಪಡೆಯಲು ಆರೋಪಿ ಸಂಚು ರೂಪಿಸಿದ್ದನು ಎಂದು ತಿಳಿದು ಬಂದಿದೆ. ಬೆಡ್ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಳ್ಳಲು ಮನೆಗೆ ತೆರಳಿದ್ದ ಮತ್ತೊಬ್ಬ ಆರೋಪಿ ನವೀನ್ ಅನ್ನು ಪೊಲೀಸರು ಮೊದಲು ಬಂಧಿಸಿದ್ದರು. ಈ ನವೀನ್ ನೀಡಿರುವ ಹೇಳಿಕೆ ಆಧಾರದ ಮೇಲೆ ಪ್ರಕರಣದ ಪ್ರಮುಖ ಆರೋಪಿ ಮಂಜುನಾಥ್ ಅನ್ನು ಅರೆಸ್ಟ್ ಮಾಡಲಾಗಿತ್ತು.