ಸಿಬಿಐನಿಂದ ವಿವೇಕ್ ಹೆಬ್ಬಾರ್ ಬಂಧನ
ಬೆಂಗಳೂರು, ಡಿ. 23 : ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಬಿಐ ಯಲ್ಲಾಪುರ ಶಾಸಕ ಶಿವರಾಮ್ ಪುತ್ರ ವಿವೇಕ್ ಹೆಬ್ಬಾರ್ ಅವರನ್ನು ಸೋಮವಾರ ಬಂಧಿಸಿದ್ದಾರೆ. ಸೋಮವಾರ ಸಿಬಿಐ ಕಚೇರಿಗೆ ವಿಚಾರಣೆಗಾಗಿ ವಿವೇಕ್ ಹೆಬ್ಬಾರ್ ಆಗಮಿಸಿದ್ದರು. ಸದ್ಯ ಅವರನ್ನು ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಡಿ.27ರವರೆಗೆ ಸಿಬಿಐ ವಶಕ್ಕೆ ಒಪ್ಪಿಸಲಾಗಿದೆ.
ಸೋಮವಾರ ವಿವೇಕ್ ಹೆಬ್ಬಾರ್ ಬೆಂಗಳೂರಿನ ಗಂಗಾ ನಗರದಲ್ಲಿರುವ ಸಿಬಿಐ ಕಛೇರಿಗೆ ವಿಚಾರಣೆಗೆ ಹಾಜರಾಗಿದ್ದರು. ಮಧ್ಯಾಹ್ನ 1 ಗಂಟೆ ಸುಮಾರಿಗೆ ಅವರನ್ನು ಬಂಧಿಸಲಾಗಿದ್ದು, ನಂತರ ವಿಕ್ಟೋರಿಯಾ ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯಕೀಯ ಪರೀಕ್ಷೆ ನಡೆಸಿದ ನಂತರ ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಯಿತು.

ಯಲ್ಲಾಪುರದ ಕಾಂಗ್ರೆಸ್ ಶಾಸಕ ಶಿವರಾಮ್ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್ ಅವರನ್ನು ಈಗಾಗಲೇ ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಸಿಬಿಐ ಎರಡು ಬಾರಿ ವಿಚಾರಣೆ ನಡೆಸಿತ್ತು. ಸೋಮವಾರ ವಿಚಾರಣೆಗೆ ಹಾಜರಾದ ಸಮದಯಲ್ಲಿಯೇ ಅವರನ್ನು ಬಂಧಿಸಲಾಗಿದ್ದು, ಡಿ.28ರ ವರೆಗೆ ಸಿಬಿಐ ವಶಕ್ಕೆ ಪಡೆಯಲಾಗಿದೆ. ಡ್ರೀಮ್ ಲಾಜಿಸ್ಟಿಕ್ಸ್ ಕಂಪನಿ ಮಾಲೀಕರಾಗಿರುವ ಹೆಬ್ಬಾರ್ ಸುಮಾರು 8 ಲಕ್ಷ ಮೆಟ್ರಿಕ್ ಟನ್ ಅದಿರು ಸಾಗಣೆ ಮಾಡಿರುವ ಆರೋಪ ಎದುರಿಸುತ್ತಿದ್ದಾರೆ.
ಡಿ.17ರಂದು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಜನಾರ್ದನ ರೆಡ್ಡಿ, ಶಾಸಕರಾದ ಸತೀಶ್ ಸೈಲ್, ನಾಗೇಂದ್ರ, ಸುರೇಶ್ಬಾಬು, ಆನಂದ್ಸಿಂಗ್ ಹಾಗೂ ಅರಣ್ಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಸೇರಿದಂತೆ ಒಟ್ಟು 18 ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿತ್ತು. [ಜನಾರ್ದನ ರೆಡ್ಡಿ ಆರೋಪಿ ನಂ.1]
ಸದ್ಯ ತನಿಖೆಯನ್ನು ಚುರುಕುಗೊಳಿಸಿರುವ ಸಿಬಿಐ ವಿವೇಕ್ ಹೆಬ್ಬಾರ್ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೂಡ್ಲಿಗಿ ಶಾಸಕ ನಾಗೇಂದ್ರ, ಕಂಪ್ಲಿಶಾಸಕ ಸುರೇಶ್ ಬಾಬು, ಕಾರವಾರದ ಶಾಸಕ ಸತೀಶ್ ಸೈಲ್, ಅಂಕೋಲದ ಮಾಜಿ ಅರಣ್ಯಾಧಿಕಾರಿ ನರೇಂದ್ರ ಹಿತಲಮಕ್ಕಿ, ಮಾಜಿ ರೇಂಜ್ ಆಫೀಸರ್ ಜಿ.ಸಿ ನಾಯಕ್, ಬೇಲೇಕೇರಿ ಬಂದರು ಅಧಿಕಾರಿ ಕ್ಯಾಪ್ಟನ್ ಸಿ ಸ್ವಾಮಿ, ಪ್ರೊಪ್ರೆಟರ್ ಲಾಲ್ ಮಹಲ್ ಲಿ. ರಾಜಕುಮಾರ್ ಇವರೆಲ್ಲರ ಜತೆಗೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಬಂಧನವಾಗಿದ್ದು ಎಲ್ಲರೂ ಜೈಲಿನಲ್ಲಿದ್ದಾರೆ.











Click it and Unblock the Notifications