ಬೆಂಗಳೂರಿನ ಈ ಪಾಲಿಕೆ ವ್ಯಾಪ್ತಿಯಲ್ಲಿ ₹3,800–3,900 ಕೋಟಿ ಅಭಿವೃದ್ಧಿ ಬಜೆಟ್ - ಸರ್ಕಸ್
ಬೆಂಗಳೂರಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ವಿವಿಧ ಪಾಲಿಕೆಗಳು ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿವೆ. ಇದರ ನಡುವೆ ದೊಡ್ಡ ಮಟ್ಟದ ಅಭಿವೃದ್ಧಿ ಯೋಜನೆಗೆ ವಿವಿಧ ಪಾಲಿಕೆಗಳು ಮುಂದಾಗಿವೆ. ಬೆಂಗಳೂರು ಪೂರ್ವ ನಗರ ಪಾಲಿಕೆಯು ₹3,800-3,900 ಕೋಟಿ ಅಭಿವೃದ್ಧಿ ಬಜೆಟ್ ರೂಪಿಸಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೂರ್ವ ನಗರ ಪಾಲಿಕೆಯ ಆಯುಕ್ತರಾದ ಡಿ.ಎಸ್. ರಮೇಶ್ ಅವರು ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಪ್ರಸಕ್ತ ಸಾಲಿನಲ್ಲಿ ಸುಮಾರು ₹3,800 ರಿಂದ ₹3,900 ಕೋಟಿ ಮೊತ್ತದ ಬಜೆಟ್ ರೂಪಿಸಲಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನಗಳೊಂದಿಗೆ ನಗರದ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಆಡಳಿತ ವೆಚ್ಚಗಳನ್ನು ನಿಯಂತ್ರಿಸಿ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಅನುದಾನ ಮೀಸಲಿಡುವುದರೊಂದಿಗೆ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆಯನ್ನು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರು ಪೂರ್ವ ನಗರ ಪಾಲಿಕೆ ಮತ್ತು ವಾರ್ಡ್ ಸಮಿತಿಗಳ ಸಹಯೋಗದಲ್ಲಿ ವೈಟ್ಫೀಲ್ಡ್ ರೈಸಿಂಗ್ ವತಿಯಿಂದ ಆಯೋಜಿಸಿದ್ದ ಹೊಸ ಪೂರ್ವವನ್ನು ನಿರ್ಮಿಸುವುದು - ಬೆಂಗಳೂರು ಪೂರ್ವ ನಗರ ಪಾಲಿಕೆಯಲ್ಲಿ ಆಡಳಿತ, ಹೊಣೆಗಾರಿಕೆ ಮತ್ತು ಸೇವಾ ವಿತರಣೆ ವಿಷಯದ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಆಯುಕ್ತರಾದ ಡಿ.ಎಸ್. ರಮೇಶ್ ಅವರು ಮಾತನಾಡಿದರು. ಗ್ರೇಟರ್ ಬೆಂಗಳೂರು ಆಡಳಿತ ವ್ಯವಸ್ಥೆ ಜಾರಿಯಾದ ಬಳಿಕ ಬೆಂಗಳೂರು ಪೂರ್ವ ನಗರ ಪಾಲಿಕೆಗೆ ಸ್ವತಂತ್ರ ಆಡಳಿತ ವ್ಯವಸ್ಥೆ, ಪ್ರತ್ಯೇಕ ಬಜೆಟ್ ಹಾಗೂ ಸ್ಥಳೀಯ ಅಗತ್ಯಗಳಿಗೆ ತ್ವರಿತವಾಗಿ ಸ್ಪಂದಿಸುವ ಅವಕಾಶ ದೊರೆತಿದ್ದು, ಪಾರದರ್ಶಕ, ಹೊಣೆಗಾರಿಕೆಯ ಹಾಗೂ ಜನಸ್ನೇಹಿ ಆಡಳಿತವನ್ನು ರೂಪಿಸುವತ್ತ ನಗರ ಪಾಲಿಕೆ ಬದ್ಧವಾಗಿದೆ ಎಂದರು.
ಡಿಜಿಟಲ್ ಡ್ಯಾಶ್ಬೋರ್ಡ್ ಮೂಲಕ ಸಂಪೂರ್ಣ ಪಾರದರ್ಶಕತೆ
ನಗರದಲ್ಲಿ ನಡೆಯುವ ಪ್ರತಿಯೊಂದು ಅಭಿವೃದ್ಧಿ ಕಾಮಗಾರಿಯ ವೆಚ್ಚ, ಪ್ರಗತಿ, ಗುಣಮಟ್ಟ ಹಾಗೂ ಅನುಷ್ಠಾನದ ಮಾಹಿತಿಯನ್ನು ಸಾರ್ವಜನಿಕರಿಗೆ ಲಭ್ಯವಾಗುವಂತೆ ಡಿಜಿಟಲ್ ಡ್ಯಾಶ್ಬೋರ್ಡ್ ಅಭಿವೃದ್ಧಿಪಡಿಸಲಾಗುತ್ತಿದೆ. ಇದರಿಂದ ನಾಗರಿಕರು ಕಾಮಗಾರಿಗಳ ಮೇಲ್ವಿಚಾರಣೆಯಲ್ಲಿ ನೇರವಾಗಿ ಭಾಗವಹಿಸುವ ಅವಕಾಶ ಸಿಗಲಿದೆ ಎಂದು ಅವರು ತಿಳಿಸಿದರು. ಜಲಮಂಡಳಿ, ಬೆಸ್ಕಾಂ, ಕೆಪಿಟಿಸಿಎಲ್, ಗೇಲ್, ಸಂಚಾರಿ ಪೊಲೀಸ್ ಹಾಗೂ ಇನ್ನಿತರೆ ಸೇವಾ ಪೂರೈಕೆದಾರ ಸಂಸ್ಥೆಗಳು ಸೇರಿದಂತೆ ವಿವಿಧ ಇಲಾಖೆಗಳ ಕಾಮಗಾರಿಗಳನ್ನು ಸಮನ್ವಯಗೊಳಿಸಲು ಹೊಸ ಡಿಜಿಟಲ್ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ಉತ್ತಮ ಮೂಲಸೌಕರ್ಯ ಕಲ್ಪಿಸಲು ಸಾಧ್ಯವಾಗಲಿದೆ ಎಂದು ಮಾಹಿತಿ ನೀಡಿದರು.
ಸಂಚಾರ ದಟ್ಟಣೆ ನಿವಾರಣೆಗೆ ಸಂಪರ್ಕ ರಸ್ತೆಗಳಿಗೆ ಆದ್ಯತೆ
ಇನ್ನು ಬೆಂಗಳೂರಿನ ಪಣತ್ತೂರು, ಗುಂಜೂರು, ಕಾರ್ಮೇಲರಾಂ ಸೇರಿದಂತೆ ಪ್ರಮುಖ ಸಂಪರ್ಕ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಭೂಸ್ವಾಧೀನ, ಟಿಡಿಆರ್ ಪ್ರಕ್ರಿಯೆಗೆ ವೇಗ ನೀಡುವ ಮೂಲಕ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ. ಪ್ರಮುಖ ರಸ್ತೆ ಅಭಿವೃದ್ಧಿಗೆ ವಿಶೇಷ ಅನುದಾನ ಮೀಸಲಿಟ್ಟು ಸಂಚಾರ ದಟ್ಟಣೆ ಕಡಿಮೆ ಮಾಡುವ ಕಾರ್ಯಕ್ಕೆ ಆದ್ಯತೆ ನೀಡಲಾಗಿದೆ ಎಂದರು.
ಪ್ರವಾಹ ಸಮಸ್ಯೆಗೆ ಶಾಶ್ವತ ಪರಿಹಾರ
ಪೂರ್ವ ಬೆಂಗಳೂರಿನಲ್ಲಿ ಹಲವು ಕಡೆ ಮಳೆನೀರು ಕಾಲುವೆಗಳು ಅತಿಕ್ರಮಣಕ್ಕೆ ಒಳಗಾಗಿರುವುದರಿಂದ ಪ್ರವಾಹ ಸಮಸ್ಯೆ ಉಂಟಾಗುತ್ತಿದೆ ಸಾಕಷ್ಟು ಜಲಾವೃತ ಪ್ರದೇಶಗಳಲ್ಲಿ ಈ ಹಿಂದೆ ಇದ್ದಂತಹ ಕಾಲುವೆಗಳು ಕಿರಿದಾಗಿದೆ ಅಥವಾ ಇಲ್ಲದಂತಾಗಿದೆ. ವಿಶ್ವ ಬ್ಯಾಂಕ್ ನೆರವಿನ ಯೋಜನೆಗಳಡಿ ರಾಜಕಾಲುವೆ ಹಾಗೂ ಮಳೆನೀರು ಹರಿವಿನ ವ್ಯವಸ್ಥೆಯನ್ನು ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಿ ನೈಸರ್ಗಿಕ ಕಾಲುವೆಗಳ ಮೂಲ ಅಗಲವನ್ನು ಪುನಃಸ್ಥಾಪಿಸುವ ಮೂಲಕ ಶಾಶ್ವತ ಪರಿಹಾರ ಕಲ್ಪಿಸಲು ನಗರ ಪಾಲಿಕೆ ಕಾರ್ಯಪ್ರವೃತ್ತವಾಗಿದೆ ಎಂದು ತಿಳಿಸಿದರು.
ಮೂಲದಲ್ಲೇ ಕಸದ ವಿಂಗಡಣೆಗೆ ಒತ್ತು
ನಗರದ ಜನಸಂಖ್ಯೆ ಹೆಚ್ಚಳಕ್ಕೆ ಅನುಗುಣವಾಗಿ ಮನೆ-ಮನೆಯಿಂದ ಕಸ ಸಂಗ್ರಹಣೆಗೆ ವಾಹನಗಳ ಕೊರತೆ ಇದ್ದು, ಹೊಸ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡ ತಕ್ಷಣ ಹೆಚ್ಚಿನ ಆಟೋ ಟಿಪ್ಪರ್ ವಾಹನಗಳನ್ನು ನಿಯೋಜಿಸಿ ಕಸ ಸಂಗ್ರಹಣೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಿಯಂತ್ರಿಸಲಾಗುವುದು. ಪ್ರಸ್ತುತ ಸುಮಾರು ಶೇಕಡ 40-50%ರಷ್ಟು ಮಾತ್ರ ಮೂಲದಲ್ಲಿಯೇ ಕಸದ ವಿಂಗಡಣೆ ನಡೆಯುತ್ತಿದ್ದು, ಈ ಪ್ರಮಾಣವನ್ನು ಗಣನೀಯವಾಗಿ ಹೆಚ್ಚಿಸಲು ಹೊಸ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ. ಸಂಗ್ರಹಿಸಿದ ಕಸ ಮತ್ತೆ ಮಿಶ್ರಣವಾಗದಂತೆ ವೈಜ್ಞಾನಿಕ ವ್ಯವಸ್ಥೆ ರೂಪಿಸಲಾಗುತ್ತಿದೆ. ಈ ಕಾರ್ಯದಲ್ಲಿ ನಾಗರಿಕರ ಸಹಕಾರ ಅತ್ಯಗತ್ಯವಾಗಿದೆ ಎಂದೂ ಹೇಳಿದರು.













Click it and Unblock the Notifications