ಬೆಂಗಳೂರು ಬಂದ್; ವಿಮಾನ ನಿಲ್ದಾಣಕ್ಕೆ ಬಿಎಂಟಿಸಿಯ ಹೆಚ್ಚುವರಿ ಟ್ರಿಪ್
ಬೆಂಗಳೂರು, ಸೆಪ್ಟೆಂಬರ್ 10; ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟ ಸೆಪ್ಟೆಂಬರ್ 11ರ ಸೋಮವಾರ ಬೆಂಗಳೂರು ಬಂದ್ಗೆ ಕರೆ ನೀಡಿದೆ. ಖಾಸಗಿ ವಾಹನಗಳ ಸಂಚಾರ ಬಂದ್ ಆಗುವ ನಿರೀಕ್ಷೆ ಇದೆ. ವಿಮಾನ ನಿಲ್ದಾಣದ ಟ್ಯಾಕ್ಸಿ ಚಾಲಕರು ಸಹ ಬಂದ್ ಬೆಂಬಲಿಸಿದ್ದಾರೆ. ಆದ್ದರಿಂದ ಬಿಎಂಟಿಸಿ ಪ್ರಯಾಣಿಕರ ನೆರವಿಗೆ ಬಂದಿದೆ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಸೆಪ್ಟೆಂಬರ್ 11ರಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ ಟ್ರಿಪ್ಗಳ ವ್ಯವಸ್ಥೆ ಮಾಡಿದೆ. ಪ್ರತಿ ದಿನ ಸಂಚಾರ ನಡೆಸುವುದಕ್ಕಿಂತ ಹೆಚ್ಚಿನ ಟ್ರಿಪ್ಗಳಲ್ಲಿ ಬಸ್ಗಳು ಸಂಚಾರ ನಡೆಸಲಿವೆ. ವಿಮಾನ ಪ್ರಯಾಣಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದೆ.

ಸೋಮವಾರ ಬೆಂಗಳೂರು ಬಂದ್ ಹಿನ್ನಲೆಯಲ್ಲಿ ಬಿಎಂಟಿಸಿಯ 500 ಹೆಚ್ಚುವರಿ ಬಸ್ಗಳು ರಸ್ತೆಗೆ ಇಳಿಯಲಿವೆ. ಬೆಂಗಳೂರು ನಗರದಿಂದ ವಿಮಾನ ನಿಲ್ದಾಣಕ್ಕೆ, ವಿಮಾನ ನಿಲ್ದಾಣದಿಂದ ನಗರಕ್ಕೆ ಹೆಚ್ಚುವರಿ ಟ್ರಿಪ್ ನಡೆಸಬೇಕು ಎಂದು ಚಾಲಕ, ನಿರ್ವಾಹಕರಿಗೆ ಈಗಾಗಲೇ ಸೂಚನೆ ನೀಡಲಾಗಿದೆ.
ವಾಯುವಜ್ರ ಬಸ್ಗಳು; ಬಿಎಂಟಿಸಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಾಯು ವಜ್ರ ಹವಾನಿಯಂತ್ರಿತ ಬಸ್ಗಳನ್ನು ಓಡಿಸುತ್ತದೆ. ಭಾನುವಾರ ಮಧ್ಯರಾತ್ರಿಯಿಂದೇ ಹೆಚ್ಚುವರಿ ಟ್ರಿಪ್ಗಳನ್ನು ಓಡಿಸಲು ಅಧಿಕಾರಿಗಳು ವ್ಯವಸ್ಥೆ ಮಾಡಿದ್ದಾರೆ. ಬಂದ್ನಿಂದ ವಿಮಾನ ಪ್ರಯಾಣಿಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳಲು ಯೋಜನೆ ರೂಪಿಸಿದ್ದಾರೆ.
ಬೆಂಗಳೂರು ವಿಮಾನ ನಿಲ್ದಾಣಕ್ಕೆ ಪ್ರತಿನಿತ್ಯ ಸುಮಾರು 500 ಟ್ರಿಪ್ಗಳಲ್ಲಿ ಬಿಎಂಟಿಸಿ ಬಸ್ಗಳು ಸಂಚಾರ ನಡೆಸುತ್ತವೆ. ಸೋಮವಾರ ಟ್ಯಾಕ್ಸಿಗಳ ಸಂಚಾರ ಬಂದ್ ಆಗುವ ನಿರೀಕ್ಷೆ ಇದ್ದು, ಹೆಚ್ಚುವರಿಯಾಗಿ 100 ಟ್ರಿಪ್ಗಳಲ್ಲಿ ಬಸ್ಗಳು ಸಂಚಾರ ನಡೆಸಲಿವೆ.
ಯಾವ-ಯಾವ ಮಾರ್ಗದಿಂದ ಪ್ರಯಾಣಿಕರ ದಟ್ಟಣೆ ಹೆಚ್ಚಿರಲಿದೆ ಎಂಬುದನ್ನು ಡಿಪೋಗಳ ವ್ಯವಸ್ಥಾಪಕರು ನೋಡಿಕೊಂಡು ಹೆಚ್ಚುವರಿ ಟ್ರಿಪ್ಗಳಲ್ಲಿ ಬಸ್ ಓಡಿಸಲು ತೀರ್ಮಾನಿಸಲಿದ್ದಾರೆ. ವಿಮಾನ ನಿಲ್ದಾಣಕ್ಕೆ ಸಂಚಾರ ನಡೆಸುವ ಪ್ರಯಾಣಿಕರು ಬಸ್ ಸೇವೆಯ ಉಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಲಾಗಿದೆ.
ಬಂದ್ ಕರೆ ಹಿನ್ನಲೆಯಲ್ಲಿ ಬೆಂಗಳೂರು ನಗರದಲ್ಲಿ ಪೊಲೀಸ್ ಬಂದೋಬಸ್ತ್ ಸಹ ಹೆಚ್ಚಿಸಲಾಗಿದೆ. ಬಸ್ಗಳಿಗೆ ಕಲ್ಲು ತೂರುವುದು ಸೇರಿದಂತೆ ಇತರ ಅಹಿತಕರ ಘಟನೆಗಳು ನಡೆಯಂತೆ ನಗರ ಪೊಲೀಸರು ಎಚ್ಚರವಹಿಸಿದ್ದಾರೆ.
ಈ ಕುರಿತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಮಾತನಾಡಿ, "ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಸೂಕ್ತ ಭದ್ರತೆ ನಿಯೋಜನೆ ಮಾಡಲಾಗಿದೆ. ಭದ್ರತೆಗೆ ಕೆಎಸ್ಆರ್ಪಿ, ಸಿಎಆರ್ ತುಕಡಿ ನಿಯೋಜಿಸಲಾಗುವುದು. ಶಾಂತಿ ಕದಡುವ ಯತ್ನ ಮಾಡಿದರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ" ಎಂದು ಎಚ್ಚರಿಕೆ ನೀಡಿದ್ದಾರೆ.
ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟ ಕರೆ ನೀಡಿರುವ ಬಂದ್ಗೆ 32 ಸಂಘಟನೆಗಳು ಬೆಂಬಲ ನೀಡಿವೆ. ಇದರಲ್ಲಿ ಆಟೋ, ಟ್ಯಾಕ್ಸಿ, ಖಾಸಗಿ ಬಸ್ ಚಾಲಕರ ಸಂಘ, ಐಟಿ ಕಂಪನಿಗಳ ಉದ್ಯೋಗಿಗಳನ್ನು ಕರೆದೊಯ್ಯುವ ಬಸ್ಗಳು ಹೀಗೆ ಹಲವಾರು ಸೇರಿವೆ. ಭಾನುವಾರ ಮಧ್ಯರಾತ್ರಿಯಿಂದ ಖಾಸಗಿ ವಾಹನಗಳ ಸಂಚಾರ ಬಂದ್ ಮಾಡಲಾಗುತ್ತದೆ ಎಂದು ಒಕ್ಕೂಟ ಹೇಳಿದೆ.
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟ ಕರೆ ನೀಡಿರುವ ಬಂದ್ ಬಗ್ಗೆ ಮಾತನಾಡಿದ್ದಾರೆ, "ಬಂದ್ನಿಂದ ಸಾರ್ವಜನಿಕರ ಸಂಚಾರಕ್ಕೆ ಯಾವುದೇ ತೊಂದರೆ ಉಂಟಾಗದಂತೆ ಕ್ರಮ ಕೈಗೊಳ್ಳಲಾಗುತ್ತದೆ" ಎಂದು ಭರವಸೆ ನೀಡಿದ್ದಾರೆ.
ಬೆಂಗಳೂರು ನಗರದಲ್ಲಿ ಬಿಎಂಟಿಸಿ ಬಸ್, ನಮ್ಮ ಮೆಟ್ರೊ ಸೇವೆ ಇರುವುದರಿಂದ ಖಾಸಗಿ ವಾಹನಗಳ ಸಂಚಾರ ಬಂದ್ ಆದರೂ ಸಹ ಜನರ ಸಂಚಾರಕ್ಕೆ ತೊಂದರೆ ಉಂಟಾಗುವ ಸಾಧ್ಯತೆ ಕಡಿಮೆ ಇದೆ. ಐಟಿ ಕಂಪನಿಗಳು ಮನೆಯಿಂದಲೇ ಕೆಲಸ ಮಾಡುವ ಆಯ್ಕೆಯನ್ನು ನೀಡಲಿದ್ದು, ಉದ್ಯೋಗಿಗಳಿಗೆ ಸಂಚಾರದ ಸಮಸ್ಯೆ ಇರುವುದಿಲ್ಲ.












Click it and Unblock the Notifications