Heavy Rain: ಭಾರಿ ಮಳೆಗೆ ತತ್ತರಿಸಿದ ಬೆಂಗಳೂರು; ಹಲವು ಕಂಪನಿಗಳಿಂದ WFH ಘೋಷಣೆ
ಸೋಮವಾರ ಕೂಡ ಬೆಂಗಳೂರಿನಲ್ಲಿ ಭಾರಿ ಮಳೆ ಮುಂದುವರೆದಿದೆ, ಸತತವಾಗಿ ಮೂರು ದಿನಗಳಲ್ಲಿ ನಗರದಲ್ಲಿ ಭಾರಿ ಮಳೆಯಾಗುತ್ತಿದ್ದು ಜನ ಹೈರಾಣಾಗಿದ್ದಾರೆ. ರಸ್ತೆಗಳು ನದಿಯಂತಾಗಿದ್ದು ಹಲವು ತಗ್ಗು ಪ್ರದೇಶಗಳು ಕೆರೆಗಳಾಗಿವೆ. ಈ ಬೆನ್ನಲ್ಲೇ ಹಲವು ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಸೂಚನೆ ಕೊಟ್ಟಿವೆ.
ಸಂಸದ ಪಿಸಿ ಮೋಹನ್ ಕೂಡ ಕಂಪನಿಗಳು ಉದ್ಯೋಗಿಗಳಿಗೆ ಮನೆಯಿಂದ ಕೆಲಸಕ್ಕೆ ಅವಕಾಶ ಕೊಡಬೇಕು ಎಂದು ಒತ್ತಾಯಿಸಿವೆ. ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಇನ್ಫೋಸಿಸ್ ಸೇರಿದಂತೆ ಬೆಂಗಳೂರಿನ ಎಲ್ಲಾ ಕಂಪನಿಗಳು ಎರಡು ದಿನಗಳ ಕಾಲ ತಮ್ಮ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಮನೆಯಿಂದಲೇ ಕೆಲಸಕ್ಕೆ ಅವಕಾಶ
ಹಲವು ಕಂಪನಿಗಳು ಈಗಾಗಲೇ ತಮ್ಮ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡಿವೆ. ಭಾರಿ ಮಳೆಯಿಂದಾಗಿ ಉದ್ಯೋಗಿಗಳಿಗೆ ಮನೆಯಿಂದ ಕಚೇರಿಗೆ, ಕಚೇರಿಯಿಂದ ಮನೆಗೆ ತೆರಳುವುದೇ ದೊಡ್ಡ ಸಾಹಸವಾಗಿರುವ ಕಾರಣ ಅನಿವಾರ್ಯವಾಗಿ ಮನೆಯಿಂದ ಕೆಲಸ ಮಾಡಲು ಅವಕಾಶ ನೀಡಲಾಗಿದೆ.
ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, "ಸಂಜೆ ವೇಳೆ ಸಂಚಾರ ದಟ್ಟಣೆ ಹೆಚ್ಚಿರುವ ಕಾರಣ ವಾಹನ ಸವಾರರಿಗೆ ತೊಂದರೆಯಾಗುತ್ತದೆಯೆಂದು ಇಂದು ಕೆಲವು ಸ್ಥಳಗಳಿಗೆ ಮಾತ್ರ ಭೇಟಿ ನೀಡಿದ್ದೇನೆ. ನಾಡಿದ್ದು ಇಡೀ ದಿನ ಉಪಮುಖ್ಯಮಂತ್ರಿಗಳು ಹಾಗೂ ಬೆಂಗಳೂರಿನ ಶಾಸಕರೊಂದಿಗೆ ನಗರದ ಮಳೆಪೀಡಿತ ಸ್ಥಳಗಳಿಗೆ ಭೇಟಿ ನೀಡುತ್ತೇನೆ, ನಗರದ ಎಲ್ಲ ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನೀಡಿ ಜನರ ಅಹವಾಲುಗಳನ್ನು ಆಲಿಸುತ್ತೇನೆ. ಅಧಿಕಾರಿಗಳು ಯಾವೆಲ್ಲ ಕ್ರಮ ವಹಿಸಿದ್ದಾರೆ ಎನ್ನುವುದನ್ನು ಪರಿಶೀಲಿಸಿ ಅಗತ್ಯ ಸೂಚನೆ ನೀಡುವುದಾಗಿ ತಿಳಿಸಿದರು.
ನಗರದಲ್ಲಿ ರಾಜಕಾಲುವೆಗಳು ಒತ್ತುವರಿಯಾಗಿದ್ದು, ಚರಂಡಿಗಳು ಆಳವಿಲ್ಲದೆ ಚಿಕ್ಕದಾಗಿವೆ, ಜೊತೆಗೆ ಹೂಳು ತುಂಬಿದೆ. ಇದನ್ನು ತೆರವು ಮಾಡಲು ನಗರ ಪಾಲಿಕೆಯವರಿಗೆ ಅನೇಕ ಬಾರಿ ಸೂಚನೆ ನೀಡಲಾಗಿದ್ದು, ಇನ್ನೂ ಕಾಮಗಾರಿಗಳು ನಡೆಯುತ್ತಿವೆ. 859.90 ಕಿ.ಮೀ ಉದ್ದದ ರಾಜಕಾಲುವೆಗಳು ಇವೆ. ಇಲ್ಲಿಯವರೆಗೆ 491 ಕಿ.ಮೀ ಉದ್ದದ ರಾಜಕಾಲುವೆಗಳಿಗೆ ತಡೆಗೋಡೆ ನಿರ್ಮಿಸಲಾಗಿದೆ. 195 ಕಿ.ಮೀ ಉದ್ದದ ತಡೆಗೋಡೆ ನಿರ್ಮಾಣ ಕಾರ್ಯ ಚಾಲ್ತಿಯಲ್ಲಿದ್ದು, 173 ಕಿ.ಮೀ ಉದ್ದದ ರಾಜಕಾಲುವೆಗಳನ್ನು ವರ್ಲ್ಡ್ ಬ್ಯಾಂಕ್ ನೆರವಿನಿಂದ ಕೈಗೊಳ್ಳಲಾಗಿದೆ ಎಂದರು.
ರಾಜಕಾಲುವೆಗಳು ಸರಿಹೋಗದೆ ರಸ್ತೆಗಳಲ್ಲಿ ನೀರು ನಿಲ್ಲುವುದನ್ನು ತಪ್ಪಿಸುವುದು ಕಷ್ಟ. ಬೆಂಗಳೂರು ನಗರದಲ್ಲಿ ಸುಮಾರು 210 ತಗ್ಗು ಪ್ರದೇಶಗಳನ್ನು ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಎಂದು ಗುರುತು ಮಾಡಲಾಗಿದೆ. 166 ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಕಾಮಗಾರಿಗಳನ್ನು ನಿರ್ವಹಿಸಲಾಗಿದೆ. ಬಾಕಿ 44 ಪ್ರದೇಶಗಳಲ್ಲಿ ತಾತ್ಕಾಲಿಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಪೈಕಿ 24 ಕಾಮಗಾರಿ ಪ್ರಗತಿಯಲ್ಲಿದ್ದು, ಇವು ಪೂರ್ಣಗೊಂಡರೆ ಈ ಸಮಸ್ಯೆ ಬಹಳಷ್ಟು ಕಡಿಮೆಯಾಗಲಿದೆ ಎಂದು ಹೇಳಿದರು.
ವೈಟ್ ಫೀಲ್ಡ್ ನಲ್ಲಿ ಮಹಿಳೆಯೊಬ್ಬರು ಸಾವಿಗೀಡಾಗಿದ್ದು ದುಃಖದ ವಿಷಯ. ಸರ್ಕಾರದ ವತಿಯಿಂದ ಅವರ ಕುಟುಂಬಕ್ಕೆ 5 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುವುದು. 4292 ಕಡೆ ಒತ್ತುವರಿಯಾಗಿದ್ದು, ಈ ಪೈಕಿ 2326 ಒತ್ತುವರಿಯನ್ನು ತೆರವುಗೊಳಿಸಲಾಗಿದೆ. ಒತ್ತುವರಿಯಾಗದಂತೆ ನೋಡಿಕೊಳ್ಳಲು ಸೂಚನೆ ನೀಡಿದ್ದೇನೆ ಎಂದರು.












Click it and Unblock the Notifications