'ಗುಂಡಿಕ್ಕಿ ಕಾನೂನು ತನ್ನಿ' ಕೆಎಸ್ ಈಶ್ವರಪ್ಪ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ, ನಿವಾಸಕ್ಕೆ ಮುತ್ತಿಗೆ!
ಬೆಂಗಳೂರು ಫೆಬ್ರವರಿ 10: ದೇಶ ವಿಭಜನೆ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರಬೇಕು ಎಂದು ಬಿಜೆಪಿ ಹಿರಿಯ ಮುಖಂಡ ಕೆ. ಎಸ್. ಈಶ್ವರಪ್ಪ ಹೇಳಿದ ಹೇಳಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿದರು. ಈ ವೇಳೆ ಬೆಂಗಳೂರಿನ ಕೆ. ಎಸ್. ಈಶ್ವರಪ್ಪ ನಿವಾಸಕ್ಕೆ ಯುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ಕಾರ್ಯಕರ್ತರು ಮುತ್ತಿಗೆ ಹಾಕಲು ಮುಂದಾದರು.
ಈ ಸಂಬಂಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಇನ್ನೂ ಕೆ. ಎಸ್. ಈಶ್ವರಪ್ಪ ವಿರುದ್ಧ ಆರ್ ಆರ್ನಗರದಲ್ಲಿ ಯುವ ಕೈ ಅಧ್ಯಕ್ಷ ಶಶಾಂಕ್, ಸಂಜಯ್ ದೂರು ನೀಡಿದ್ದಾರೆ. ಗುಂಡಿಕ್ಕಿ ಕಾನೂನು ತನ್ನಿ ಎಂದಿದ್ದ ಈಶ್ವರಪ್ಪ ನಿವಾಸ ಮುಂದೆ ಇಂದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿದರು. ಈ ವೇಳೆ ಪೊಲೀಸರು ಅವರನ್ನು ವಾಹನದಲ್ಲಿ ಕರೆದೊಯ್ದರು. ಸ್ಥಳದಲ್ಲಿ ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜೊತೆಗೆ ಶಿವಮೊಗ್ಗದ ಮಲ್ಲೇಶ್ವರಂ ಬಡಾವಣೆಯಲ್ಲಿ ಇರುವ ಕೆ. ಎಸ್. ಈಶ್ವರಪ್ಪ ನಿವಾಸಕ್ಕೂ ದಾವಣಗೆರೆ ಪೊಲೀಸರು ಭೇಟಿ ನೀಡಿ ನೋಟೋಸ್ ನೀಡಿದ್ದಾರೆ. ದಾವಣಗೆರೆಯಲ್ಲೂ ಕೆ. ಎಸ್. ಈಶ್ವರಪ್ಪ ಹೇಳಿಕೆ ವಿರುದ್ಧ ದೂರು ದಾಖಲಾಗಿದೆ.
ಇನ್ನೂ ನಿಜಲಿಂಗಪ್ಪ ಬಡಾವಣೆಯ ಕಾಂಗ್ರೆಸ್ ಮುಖಂಡ ಹನುಮಂತ ಎಂಬುವರು ನೀಡಿದ ದೂರನ್ನು ಆಧರಿಸಿ ದಾವಣಗೆರೆ ಬಡಾವಣೆ ಠಾಣೆಯಲ್ಲಿ ಐಪಿಸಿ ಸೆಕ್ಷನ್ 505 (1) (ಸಿ), 505 (2) ಮತ್ತು 506 ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಗುರುವಾರ ನಡೆದ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಕೆಎಸ್ ಈಶ್ವರಪ್ಪ ನೀಡಿರುವ ಹೇಳಿಕೆ ಜನ, ಸಮುದಾಯ, ಗುಂಪುಗಳ ನಡುವೆ ದ್ವೇಷ ಭಾವನೆ ಉಂಟುಮಾಡುತ್ತದೆ. ಗಲಭೆಗಳು ಜರುಗಬಹುದೆಂದು ಗೊತ್ತಿದ್ದರೂ ಪ್ರಚೋದನಾಕಾರಿ ಹೇಳಿಕೆ ನೀಡಿದ್ದು, ಜನರ ಮಧ್ಯೆ ಗಲಭೆಗಳಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಂಭವವಿದ್ದು, ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹನುಮಂತ ದೂರು ನೀಡಿದ್ದರು.












Click it and Unblock the Notifications