ಬೆಂಗಳೂರಿನ ರಸ್ತೆಗುಂಡಿ ಮುಚ್ಚಲು ಟ್ರಾಫಿಕ್ ಪೊಲೀಸರ ಸಹಕಾರಕ್ಕೆ ಸೂಚನೆ
ಬೆಂಗಳೂರಿನ ರಸ್ತೆ ಗುಂಡಿ ಸಮಸ್ಯೆಯ ಬಗ್ಗೆ ವ್ಯಾಪಕವಾದ ಚರ್ಚೆ ನಡೆಯುತ್ತಿದೆ. ಬೆಂಗಳೂರು ರಸ್ತೆ ಗುಂಡಿಗಳನ್ನು ಕರ್ನಾಟಕ ಸರ್ಕಾರ ಹಾಗೂ ಗ್ರೇಟರ್ ಬೆಂಗಳೂರು ಆಡಳಿತ ಶೀಘ್ರ ಮುಚ್ಚಬೇಕು ಎನ್ನುವ ಆಗ್ರಹ ಕೇಳಿ ಬರುತ್ತಿದೆ. ಈ ರೀತಿ ಇರುವಾಗಲೇ ಬೆಂಗಳೂರು ರಸ್ತೆಗುಂಡಿಗಳನ್ನು ಮುಚ್ಚುವುದಕ್ಕೆ ಗ್ರೇಟರ್ ಬೆಂಗಳೂರು ಆಡಳಿತದ ಪ್ರಮುಖ ಪಾಲಿಕೆಯು ಟ್ರಾಫಿಕ್ ಪೊಲೀಸರ ಸಹಾಯ ಪಡೆದುಕೊಳ್ಳುವುದಕ್ಕೆ ಮುಂದಾಗಿದೆ.
ಬೆಂಗಳೂರಿನ ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯ ರಸ್ತೆ ಗುಂಡಿ ಸಮಸ್ಯೆ ಹಾಗೂ ಪ್ರಗತಿಯಲ್ಲಿರುವ ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ಆಯುಕ್ತರ ಸಭೆ ಮತ್ತು ಸೂಕ್ತ ನಿರ್ದೇಶನ ನೀಡಿದ್ದಾರೆ. ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ಆಯುಕ್ತರಾದ ಡಾ.ರಾಜೇಂದ್ರ ಕೆ.ವಿ ಅವರು ನಗರ ಪಾಲಿಕೆ ವ್ಯಾಪ್ತಿಯಲ್ಲಿನ ರಸ್ತೆ ಗುಂಡಿಗಳ ಸಮಸ್ಯೆ ಹಾಗೂ ಪ್ರಗತಿಯಲ್ಲಿರುವ ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕೆಲವೊಂದು ಪ್ರಮುಖ ಸೂಚನೆಗಳನ್ನು ಕೊಟ್ಟಿದ್ದಾರೆ. ಈ ವೇಳೆ ಬೆಂಗಳೂರಿನ ರಸ್ತೆಗುಂಡಿಗಳನ್ನು ಮುಚ್ಚುವುದಕ್ಕೆ ಟ್ರಾಫಿಕ್ ಪೊಲೀಸರ ಸಹಕಾರ ಪಡೆದುಕೊಳ್ಳುವ ಬಗ್ಗೆಯೂ ಚರ್ಚೆ ನಡೆಸಲಾಗಿದೆ.

1. ಹೈ ಡೆನ್ಸಿಟಿ ಕಾರಿಡಾರ್ಗಳು, ಪ್ರಮುಖ ರಸ್ತೆಗಳು ಸೇರಿದಂತೆ ಅರ್ಟೀರಿಯಲ್, ಸಬ್-ಅರ್ಟೀರಿಯಲ್ ಮತ್ತು ವಾರ್ಡ್ ಮಟ್ಟದ ಎಲ್ಲಾ ರಸ್ತೆಗಳಲ್ಲಿನ ರಸ್ತೆ ಗುಂಡಿಗಳನ್ನು ಮುಚ್ಚಿ, ಪಾಲಿಕೆಯ ರಸ್ತೆಗಳನ್ನು ಗುಂಡಿ ರಹಿತ ರಸ್ತೆಗಳಾಗಿ ಮಾಡಲು ಮುಖ್ಯ ಅಭಿಯಂತರರಿಗೆ ಹಾಗೂ ಕಾರ್ಯಪಾಲಕ ಅಭಿಯಂತರರಿಗೆ ಸೂಚಿಸಿದರು.
2. ಸಂಬಂಧಪಟ್ಟ ಅಧಿಕಾರಿಗಳ ದೂರವಾಣಿ ಡೈರೆಕ್ಟರಿ ಸಿದ್ಧಪಡಿಸುವಂತೆ ತಿಳಿಸಿದರು.
3. ಟ್ರಾಫಿಕ್ ಪೋಲಿಸ್ ಇಲಾಖೆಯ ಸಹಯೋಗದೊಂದಿಗೆ ರಸ್ತೆ ಗುಂಡಿಗಳನ್ನು ಗುರುತಿಸಿ, ತ್ವರಿತವಾಗಿ ಅವುಗಳನ್ನು ಮುಚ್ಚುವಂತೆ ಕ್ರಮ ಕೈಗೊಳ್ಳಲು ತಿಳಿಸಿದರು.
4. ವಾರ್ಡ್ ಮಟ್ಟದಲ್ಲಿ ತ್ಯಾಜ್ಯ ಹಾಗೂ ಕಟ್ಟಡ ಭಗ್ನಾವಶೇಷಗಳು ಕಾಣದಂತೆ ಸ್ವಚ್ಛತೆ ಕಾಪಾಡಲು ತಿಳಿಸಿದರು.
5. ಸಹಾಯಕ ಇಂಜಿನಿಯರ್ (AE) ಹಾಗೂ ಜೂನಿಯರ್ ಇಂಜಿನಿಯರ್ (JE) ಗಳು ಖುದ್ದಾಗಿ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲು ಸೂಚನೆ ನೀಡಿದರು.
6. ಪ್ರತಿಯೊಂದು ರಸ್ತೆ ಗುಂಡಿಗೆ ಸಂಬಂಧಿಸಿದಂತೆ ರಸ್ತೆ ಗುಂಡಿ ಮುಚ್ಚುವ ಮೊದಲು, ಕಾಮಗಾರಿ ನಡೆಯುವಾಗ ಮತ್ತು ಗುಂಡಿ ಮುಚ್ಚಿದ ನಂತರದ ಫೋಟೋಗಳನ್ನು ದಾಖಲಾತಿಗಾಗಿ ತೆಗೆದುಕೊಳ್ಳಬೇಕಾಗಿ ತಿಳಿಸಿದರು.
ಈ ಸಭೆಯಲ್ಲಿ ಅಭಿವೃದ್ಧಿ ವಿಭಾಗದ ಅಪರ ಆಯುಕ್ತರಾದ ದಿಗ್ವಿಜಯ್ ಬೋಡ್ಕೆ, ಜಂಟಿ ಆಯುಕ್ತರಾದ ಆರತಿ ಆನಂದ, ಮುಖ್ಯ ಎಂಜಿನಿಯರ್ ರಾಜೇಶ್, ಸ್ವಯಂ ಪ್ರಭಾ, ಆರೋಗ್ಯಾಧಿಕಾರಿ ಮನೋರಂಜನ್ ಹೆಗ್ಡೆ, ಕಾರ್ಯಪಾಲಕ ಎಂಜಿನಿಯರ್ ಸೇರಿದಂತೆ ಇತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ಆಯುಕ್ತರಿಂದ ವಿವಿಧ ಸ್ಥಳಗಳಿಗೆ ಭೇಟಿ ಹಾಗೂ ಪರಿಶೀಲನೆ: ಇನ್ನು ಆಯುಕ್ತರು ಪಾಲಿಕೆ ವ್ಯಾಪ್ತಿಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಅಗತ್ಯ ಸೂಚನೆಗಳನ್ನು ನೀಡಿದರು.
ಮತ್ತಿಕೆರೆ ವಾರ್ಡಿನ ಮಸ್ಟರಿಂಗ್ ಕೇಂದ್ರ ಪರಿಶೀಲನೆ: ಮತ್ತಿಕೆರೆ ವಾರ್ಡಿನ ನೇತಾಜಿ ವೃತ್ತದಲ್ಲಿ ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ಕೊಟ್ಟ ಆಯುಕ್ತರು ಪೌರಕಾರ್ಮಿಕರ ಹಾಜರಾತಿ ಪರಿಶೀಲಿಸಿ ಸಮಯಪಾಲನೆ ಮಾಡಲು ತಿಳಿಸಿ ಇತರೆ ಅಗತ್ಯ ಸೂಚನೆಗಳನ್ನು ನೀಡಿದ್ದಾರೆ. ಮುಂದುವರಿದು ಸ್ಥಳೀಯರು ರಸ್ತೆ ಬದಿಗಳಲ್ಲಿ ಕಸ ಎಸೆಯುವವರನ್ನು ಗುರುತಿಸಿ, ಸಹಕರಿಸಿದಲ್ಲಿ ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ ಸಾಧ್ಯ ಎಂದು ತಿಳಿಸಿದ್ದಾರೆ.
ತ್ಯಾಜ್ಯ ಹಾಗೂ ಕಟ್ಟಡ ಭಗ್ನಾವಶೇಷ ತೆರವುಗೊಳಿಸಿ: ಪರಿಶೀಲನೆ ವೇಳೆ ರಸ್ತೆಯ ಇಕ್ಕೆಲಗಳಲ್ಲಿನ ತ್ಯಾಜ್ಯ ಹಾಗೂ ಕಟ್ಟಡ ಭಗ್ನಾವಶೇಷಗಳನ್ನು ಗಮನಿಸಿದ ಆಯುಕ್ತರು, ಅವುಗಳನ್ನು ತೆರವುಗೊಳಿಸಿ, ಸ್ವಚ್ಛತೆ ಕಾಪಾಡಲು ಸೂಚಿಸಿದರು.
ಪಾದಚಾರಿ ಮಾರ್ಗ ದುರಸ್ತಿಗೆ ಸೂಚನೆ: ಮತ್ತಿಕೆರೆಯ 1ನೇ ಬಿ ಮುಖ್ಯರಸ್ತೆಯ ಪಾದಚಾರಿ ಮಾರ್ಗದಲ್ಲಿ ನಡಿಗೆಯ ಮೂಲಕ ಸಂಚರಿಸಿದ ಆಯುಕ್ತರು, ಪಾದಚಾರಿ ಮಾರ್ಗದ ದುರಸ್ತಿ ಕಾರ್ಯ ನಡೆಸಿ ಸಾರ್ವಜನಿಕರಿಗೆ ಅನುಕೂಲವಾಗುವಂತಹ ಪಾದಚಾರಿ ಮಾರ್ಗ ನಿರ್ಮಿಸಲು ಸೂಚಿಸಿದರು. ವಾರ್ಡ್ 45 ರ ಅಟಲ್ ಜಿ ಉದ್ಯಾನವನಕ್ಕೆ ಭೇಟಿ ಕೊಟ್ಟ ಆಯುಕ್ತರು, ಅಲ್ಲಿನ ನಾಗರಿಕರಿಗೆ ನೀಡಿರುವ ಸೌಲಭ್ಯಗಳನ್ನು ಪರಿಶೀಲಿಸಿ ಜಿಮ್ ಉಪಕರಣಗಳನ್ನು ತ್ವರಿತವಾಗಿ ಸರಿಪಡಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.












Click it and Unblock the Notifications