ಬೆಂಗಳೂರು: ಬೋಗಸ್ ಬಿಲ್ಗಳಿಗೆ ಅಧಿಕಾರಿಗಳೇ ಹೊಣೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ, ರಸ್ತೆ ಗುಂಡಿಗಳನ್ನು ಮುಚ್ಚಲು ಗಡವು ನಿಗದಿ, ಪಾಲಿಕೆ ಆಯುಕ್ತರಿಗೆ ನಗರ ಸಂಚಾರ ವೇಳಾಪಟ್ಟಿ ನೀಡಲು ಸೂಚಿಸಲಾಗಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಂಗಳವಾರ ಜಿಬಿಎ ಸಭೆ ನಂತರ ಮಾತನಾಡಿದ ಡಿ.ಕೆ ಶಿವಕುಮಾರ್ ಅವರು, ರಸ್ತೆ ಬದಿ ಸೇರಿದಂತೆ ನಗರಾದ್ಯಂತ ಎಲ್ಲೆಂದರಲ್ಲಿ ಕಸ ಎಸೆಯುವವರನ್ನು ಪತ್ತೆ ಹಚ್ಚಿ ಕಠಿಣ ಕ್ರಮ ತೆಗೆದುಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದ್ದೇನೆ. ವಾಹನಗಳಲ್ಲಿ ಕಸ ತಂದು ಎಲ್ಲೆಂದರಲ್ಲಿ ಎಸೆಯಲಾಗುತ್ತಿದೆ. ಇದರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಬೆಂಗಳೂರು ಜಿಲ್ಲಾಧಿಕಾರಿ, ಪೊಲೀಸ್ ಕಮಿಷನರ್ ಹಾಗೂ ಸಂಚಾರಿ ಪೊಲೀಸರೊಟ್ಟಿಗೆ ಚರ್ಚೆ ನಡೆಸಲಾಗಿದೆ ಎಂದಿದ್ದಾರೆ.
ಗಡುವಿನಲ್ಲಿ ರಸ್ತೆಗುಂಡಿಗಳನ್ನು ಮುಚ್ಚಬೇಕು, ಈ ಬಗ್ಗೆ ಗಡುವಿನ ವೇಳಾಪಟ್ಟಿ ತಯಾರಿಸಿ ನನಗೆ ನೀಡಬೇಕು. ಸಂಚಾರಿ ಪೊಲೀಸ್ ವಿಭಾಗದವರು ಸಹ ರಸ್ತೆಗುಂಡಿಗಳ ಬಗ್ಗೆ ಮಾಹಿತಿ ನೀಡಬೇಕು ಹಾಗೂ ಸಾರ್ವಜನಿಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸೂಚಿಸಿದ್ದೇನೆ ಎಂದೂ ಅವರು ಹೇಳಿದ್ದಾರೆ.

ಬೋಗಸ್ ಬಿಲ್ಗಳಿಗೆ ಅಧಿಕಾರಿಗಳೇ ಹೊಣೆ
ಇನ್ನು ಬೆಂಗಳೂರಿನ ಪಾಲಿಕೆಗಳ ಆಯುಕ್ತರು ಪ್ರತಿದಿನ ಬೆಳಿಗ್ಗೆ ನಗರ ಸಂಚಾರದ ಬಗ್ಗೆ ನನಗೆ ಮಾಹಿತಿ ನೀಡಬೇಕು ಎಂದು ಹೇಳಿದ್ದೇನೆ. ಯಾವುದೇ ಕೆಲಸ ತೆಗೆದುಕೊಂಡರೂ ಗುಣಮಟ್ಟ ಕಾಯ್ದುಕೊಳ್ಳಬೇಕು. ಅಲ್ಲಿಂದ ಇಲ್ಲಿ, ಇಲ್ಲಿಂದ ಅಲ್ಲಿ ಕೆಲಸ ಮಾಡಲಾಗಿದೆ ಎಂದು ಯಾರೂ ಬೋಗಸ್ ಬಿಲ್ ಬರೆಯುವಂತಿಲ್ಲ. ಒಂದೊಮ್ಮೆ ಈ ರೀತಿಯಾದರೆ ಇದಕ್ಕೆಲ್ಲಾ ಅಧಿಕಾರಿಗಳೇ ಹೊಣೆ. ಯಾವುದೇ ಇಂಜಿನಿಯರ್ ಗಳನ್ನು ನಂಬಬೇಡಿ ಎಂದು ಹೇಳಿದ್ದೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.
ನ್ಯಾಯಾಲಯದ ಆದೇಶ ಆಶ್ಚರ್ಯ ತಂದಿದೆ: ಇನ್ನು ಮಾಲೂರು ವಿಧಾನಸಭಾ ಕ್ಷೇತ್ರದ ಮರುಮತ ಎಣಿಕೆ ಕುರಿತು ನ್ಯಾಯಾಲಯದ ತೀರ್ಪಿನ ಬಗ್ಗೆ ಕೇಳಿದಾಗ, "ನ್ಯಾಯಲಯದ ಮರು ಎಣಿಕೆ ಆದೇಶ ಆಶ್ಚರ್ಯ ತಂದಿದೆ. ಈ ಬಗ್ಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ. ಮರು ಮತ ಎಣಿಕೆ ನಡೆದರು ನಂಜೇಗೌಡ ಅವರು ಮತ್ತೆ ಗೆಲ್ಲುವ ವಿಶ್ವಾಸವಿದೆ" ಎಂದೂ ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.












Click it and Unblock the Notifications