High Alert For Bengaluru: ಹೋಟೆಲ್ಗಳಿಗೆ ವಿಶೇಷ ಸೂಚನೆ ಕೊಟ್ಟ ಪೊಲೀಸರು
78ನೇ ಸ್ವಾತಂತ್ರ್ಯ ದಿನಾಚರಣೆಗೆ ದೇಶಾದ್ಯಂತ ಸಿದ್ಧತೆ ಮಾಡಿಕೊಳ್ಳುತ್ತಿದೆ. ಪ್ರಮುಖ ನಗರಗಳಲ್ಲಿ ಅದ್ದೂರಿ ಆಚರಣೆಗೆ ಸಿದ್ದತೆ ನಡೆಯುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಕಟ್ಟೆಚ್ಚರವನ್ನು ಕೂಡ ಹೆಚ್ಚಿಸಲಾಗಿದೆ. ಬೆಂಗಳೂರು ನಗರದಲ್ಲಿ ಕೂಡ ಸ್ವಾತಂತ್ರ್ಯ ದಿನಾಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಈ ಬೆನ್ನಲ್ಲೇ ಉಗ್ರರ ದಾಳಿಯ ಆತಂಕ ಶುರುವಾಗಿದ್ದು ಹೈ ಅಲರ್ಟ್ ಘೋಷಿಸಲಾಗಿದೆ.
ಆಗಸ್ಟ್ 15 ರಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ಮಾಡಲಿದ್ದಾರೆ. ಸಕಲ ಸಿದ್ಧತೆ ನಡುವೆ ನಗರದಲ್ಲಿ ಭಯೋತ್ಪಾದಕ ದಾಳಿಯ ಸಾಧ್ಯತೆ ಬಗ್ಗೆ ಎಚ್ಚರಿಕೆ ನೀಡಲಾಗಿದೆ.

ಬೆಂಗಳೂರಿನ ಭಯೋತ್ಪಾದಕ ಕಣ್ಣು ಬಿದ್ದಿದೆ ಎಂದು ಪೊಲೀಸರ ಗಮನಕ್ಕೆ ಬರುತ್ತಲೇ ಕಟ್ಟೆಚ್ಚರ ವಹಿಸಿದ್ದಾರೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಅವರು ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಿಗೆ ನಿರ್ದೇಶನ ನೀಡಿದ್ದು, ಯಾವುದೇ ಅನುಮಾನಾಸ್ಪದ ಚಟುವಟಿಕೆಗಳ ಬಗ್ಗೆ ಜಾಗರೂಕರಾಗಿರಿ ಮತ್ತು ವರದಿ ಮಾಡಿ ಎಂದು ಸೂಚನೆ ಕೊಟ್ಟಿದ್ದಾರೆ.
ಯಾವುದೇ ವಿದೇಶಿ ಪ್ರಜೆಗಳು, ಅನುಮಾನಾಸ್ಪದ ವ್ಯಕ್ತಿಗಳು ಅಥವಾ ಅಪರಿಚಿತ ವ್ಯಕ್ತಿಗಳು ಹೋಟೆಲ್, ಲಾಡ್ಜ್ಗಳಲ್ಲಿ ತಂಗಿರುವುದು ಕಂಡುಬಂದರೆ ತಕ್ಷಣವೇ ಸ್ಥಳೀಯ ಪೊಲೀಸ್ ಠಾಣೆಗೆ ತಿಳಿಸುವಂತೆ ಹೋಟೆಲ್ ಮಾಲೀಕರು ಮತ್ತು ಸಿಬ್ಬಂದಿಗೆ ಸೂಚನೆ ನೀಡಲಾಗಿದೆ.
ಹೋಟೆಲ್, ಲಾಡ್ಜ್ನಲ್ಲಿ ತಂಗುವ ಎಲ್ಲಾ ಅತಿಥಿಗಳ ಗುರುತಿನ ಚೀಟಿ ಮತ್ತು ಫೋಟೊಗಳನ್ನು ಸೇರಿ ನಿಖರ ಮಾಹಿತಿಯನ್ನು ಪಡೆಯಬೇಕು ಎಂದು ಕಮಿಷನರ್ ದಯಾನಂದ ಅವರು ಪತ್ರದಲ್ಲಿ ಸೂಚನೆ ಕೊಟ್ಟಿದ್ದಾರೆ. ಈ ಸೂಕ್ಷ್ಮ ಸಮಯದಲ್ಲಿ ನಗರದ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಮಾಲೀಕರು, ವ್ಯವಸ್ಥಾಪಕರು ಮತ್ತು ಸಿಬ್ಬಂದಿ ಸೇರಿದಂತೆ ಹೋಟೆಲ್ಗಳ ಮಾಲೀಕರು ಸಹಕಾರ ಕೊಡಬೇಕು ಎಂದು ಕೇಳಿದ್ದಾರೆ.
ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಬಳಿಕ ಬೆಂಗಳೂರಿನಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯಂದು ಕೂಡ ನಗರದಲ್ಲಿ ಯಾವುದೇ ಅನಾಹುತ ನಡೆಯದಂತೆ ಪೊಲೀಸರು ಮುನ್ನೆಚ್ಚರಿಕೆ ತೆಗೆದುಕೊಳ್ಳುತ್ತಿದ್ದಾರೆ.












Click it and Unblock the Notifications