ಬೆಂಗಳೂರಿನ ಪ್ರಮುಖ ಮೇಲ್ಸೇತುವೆ ಕಾಮಗಾರಿ 15 ಪೂರ್ಣ: ತುಷಾರ್ ಗಿರಿನಾಥ್
ಬೆಂಗಳೂರಿನ ಕೆಲವೊಂದು ಯೋಜನೆಗಳ ಜಾರಿ / ಅನುಷ್ಠಾನ ವಿಳಂಬವಾಗುತ್ತಿದ್ದು, ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು ಎಂದು ಬೆಂಗಳೂರಿಗರು ಆಗ್ರಹಿಸುತ್ತಿದ್ದಾರೆ. ಈ ರೀತಿ ಇರುವಾಗಲೇ ಗ್ರೇಟರ್ ಬೆಂಗಳೂರು ಆಡಳಿತವು ಪ್ರಮುಖ ಯೋಜನೆಯೊಂದಕ್ಕೆ ಮಹತ್ವದ ಗಡವು ನಿಗದಿ ಮಾಡಿದೆ. ಬೆಂಗಳೂರಿನ ಈ ಪ್ರಮುಖ ಯೋಜನೆ ಇನ್ನು ಕೇವಲ 15 ದಿನಗಳಲ್ಲಿ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಇದರ ಸಂಪೂರ್ಣ ವಿವರ ಇಲ್ಲಿದೆ.
ಬೆಂಗಳೂರಿನ ಪ್ರಮುಖ ಯೋಜನೆ ಪೂರ್ಣಗೊಳಿಸುವುದಕ್ಕೆ ಡೆಡ್ಲೈನ್ ನಿಗದಿ ಮಾಡಲಾಗಿದೆ. ಹೊಸಕೆರೆಹಳ್ಳಿ ಜಂಕ್ಷನ್ ಮೇಲ್ಸೇತುವೆ ಬಾಕಿ ಕಾಮಗಾರಿಯನ್ನು ಮುಂದಿನ 15 ದಿನಗಳಲ್ಲಿ ಪೂರ್ಣಗೊಳಿಸಲು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ಗಿರಿ ನಾಥ್ ಅವರು ಗುತ್ತಿಗೆದಾರರಿಗೆ ಸೂಚನೆ ನೀಡಿದ್ದಾರೆ. ಈ ಮೂಲಕ ಈ ಭಾಗದಲ್ಲಿ ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ಅನುಕೂಲ ಆಗಲಿದೆ ಎಂದು ನಿರೀಕ್ಷೆ ಮಾಡಲಾಗಿದೆ.

ಪಶ್ಚಿಮ ನಗರ ಪಾಲಿಕೆಯ ರಾಜರಾಜೇಶ್ವರಿ ನಗರ ವ್ಯಾಪ್ತಿಯ ಹೊರ ವರ್ತುಲ ರಸ್ತೆಯ ಪಿ.ಇ.ಎಸ್ ಕಾಲೇಜು ಬಳಿಯ ಹೊಸಕೆರೆಹಳ್ಳಿ ಜಂಕ್ಷನ್ನಲ್ಲಿ ಕೈಗೆತ್ತಿಕೊಳ್ಳಲಾದ ಮೇಲ್ಸೇತುವೆಯ ಬಾಕಿ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಹೊಸಕೆರೆಹಳ್ಳಿ ಜಂಕ್ಷನ್ನಲ್ಲಿನ 500 ಮೀಟರ್ ಉದ್ದದ ಮೇಲ್ಸೇತುವೆ ಕಾಮಗಾರಿಯು ಬಹುತೇಕ ಪೂರ್ಣಗೊಂಡಿದ್ದು, ಒಂದು ಭಾಗದಲ್ಲಿ ಡೌನ್ರ್ಯಾಂಪ್ಗೆ ವೆಟ್ ಮಿಕ್ಸ್ ಹಾಕಿದ್ದು, ಡಾಂಬರೀಕರಣ ಮಾಡುವ ಕೆಲಸ ಬಾಕಿಯಿದೆ.
ಮತ್ತೊಂದು ಬದಿಯ (downramp) ಡೌನ್ರ್ಯಾಂಪ್ನಲ್ಲಿ ವೆಟ್ ಮಿಕ್ಸ್ ಹಾಕಿ ಡಾಂಬರೀಕರಣ ಮಾಡುವ ಕಾರ್ಯ ಬಾಕಿಯಿದೆ. ಮಳೆಯ ಕಾರಣದಿಂದ ಈ ಕಾರ್ಯಕ್ಕೆ ವಿಳಂಬವಾಗುತ್ತಿದ್ದು, ಅಗತ್ಯ ಕ್ರಮಗಳನ್ನು ಕೈಗೊಂಡು ಬಾಕಿ ಇರುವ ಕಾಮಗಾರಿಯನ್ನು ಕೂಡಲೇ ಪೂರ್ಣಗೊಳಿಸುವಂತೆ ಅವರು ಸೂಚಿಸಿದ್ದಾರೆ.
ಇನ್ನು ಈ ವಿಷಯದ ಬಗ್ಗೆ ಮಾತನಾಡಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಮಾತನಾಡಿ, ಮೇಲ್ಸೇತುವೆಯ ಎರಡೂ ಬದಿಯ ಸರ್ವೀಸ್ ರಸ್ತೆಯಲ್ಲಿ ಹಾಳಾದ ಭಾಗಗಳನ್ನು ಕೂಡಲೇ ದುರಸ್ತಿಪಡಿಸಲು ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ. ಮೇಲ್ಸೇತುವೆ ಕಾಮಗಾರಿ ಪೂರ್ಣಗೊಂಡ ಬಳಿಕ, ಸರ್ವೀಸ್ ರಸ್ತೆ ಹಾಗೂ ಮೇಲ್ಸೇತುವೆ ಕೆಳಭಾಗದಲ್ಲಿನ ಡೆಬ್ರೀಸ್ ಮತ್ತು ಇತರೆ ತ್ಯಾಜ್ಯವನ್ನು ಸಂಪೂರ್ಣವಾಗಿ ತೆರವುಗೊಳಿಸಿ ಸ್ವಚ್ಛಗೊಳಿಸುವಂತೆ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಈ ವೇಳೆ ಮುಖ್ಯ ಎಂಜಿನಿಯರ್ ರಾಘವೇಂದ್ರ ಪ್ರಸಾದ್, ಸ್ವಯಂಪ್ರಭಾ, ಕಾರ್ಯಪಾಲಕ ಎಂಜಿನಿಯರ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.
ವಾಹನ ಸವಾರರಿಗೆ ನಿರಾಳತೆ: ಇನ್ನು ಬೆಂಗಳೂರಿನ ವಿವಿಧ ಭಾಗದಲ್ಲಿ ಜಲಮಂಡಳಿ, ಜಿಬಿಎ ಹಾಗೂ ಮೆಟ್ರೋ ಕಾಮಗಾರಿಗಳು ನಡೆಯುತ್ತಿದ್ದು ಇದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಸಮಸ್ಯೆ ಎದುರಿಸುತ್ತಿದ್ದಾರೆ. ಇದೀಗ ಗ್ರೇಟರ್ ಬೆಂಗಳೂರು ಆಡಳಿತದಲ್ಲಿ ಕೆಲವೊಂದು ಪ್ರಮುಖ ಯೋಜನೆಗಳಿಗೆ ಡೆಡ್ಲೈನ್ ನಿಗದಿ ಮಾಡಲಾಗುತ್ತಿದ್ದು, ಇದು ಸಾರ್ವಜನಿಕರಲ್ಲಿ ನಿರಾಳತೆ ಮೂಡಿಸಿದೆ.












Click it and Unblock the Notifications