Bengaluru-Mysuru expressway: ಸಂಚಾರಕ್ಕೆ ಸಜ್ಜಾದ ಹೆದ್ದಾರಿ, ಮಾರ್ಚ್ ತಿಂಗಳಲ್ಲಿ ಪ್ರಧಾನಿಯಿಂದ ಉದ್ಘಾಟನೆ
ಬಹುನಿರೀಕ್ಷಿತ 117-ಕಿಮೀ ಉದ್ದದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಮಾರ್ಚ್ನಲ್ಲಿ ಉದ್ಘಾಟನೆಯಾಗಲಿದೆ.
ಬೆಂಗಳೂರು, ಫೆಬ್ರವರಿ. 06: ಬಹುನಿರೀಕ್ಷಿತ ಬೆಂಗಳೂರು-ಮೈಸೂರು ಹೆದ್ದಾರಿ ಉದ್ಘಾಟನೆಗೆ ಸಜ್ಜಾಗಿದ್ದು, ಮಾರ್ಚ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಳ್ಳುವ ಸಾಧ್ಯತೆಯಿದೆ. ಕಳೆದ ವಾರ ಶ್ರೀರಂಗಪಟ್ಟಣ ಬೈಪಾಸ್ ಸಾರ್ವಜನಿಕ ಸೇವೆಗೆ ಮುಕ್ತವಾಗಿದೆ.
ಬೆಂಗಳೂರಿನ ನೈಸ್ ಪ್ರವೇಶದ್ವಾರದಿಂದ ಮೈಸೂರಿನ ರಿಂಗ್ ರೋಡ್ ಜಂಕ್ಷನ್ವರೆಗೆ 117 ಕಿಮೀ ಉದ್ದದ 10 ಪಥಗಳ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಭಿವೃದ್ಧಿಪಡಿಸಿದೆ. ಈ ಹೆದ್ದಾರಿಯಿಂದಾಗಿ ಎರಡು ನಗರಗಳ ನಡುವಿನ ಪ್ರಯಾಣದ ಸಮಯ ಸರಾಸರಿ ಮೂರು ಗಂಟೆಗಳಿಂದ ಕೇವಲ 90 ನಿಮಿಷಗಳಿಗೆ ಕಡಿತಗೊಳಿಸುವ ನಿರೀಕ್ಷೆಯಿದೆ.
ಹೆದ್ದಾರಿಯು ಮಾರ್ಚ್ ಮೊದಲ ವಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಅಧಿಕೃತವಾಗಿ ಉದ್ಘಾಟನೆಗೊಳ್ಳಲಿದೆ ಎಂದು ಮೈಸೂರು, ಕೊಡಗು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. ಎಕ್ಸ್ಪ್ರೆಸ್ವೇಯ ಸ್ಟ್ರೆಚ್ನ ಬಹುತೇಕ ಭಾಗಗಳು ಈಗಾಗಲೇ ತೆರೆದಿದ್ದು, ಕೆಎಸ್ಆರ್ಟಿಸಿ ಬಸ್ಗಳು ಸೇರಿದಂತೆ ಪ್ರಯಾಣಿಸುತ್ತಿರುವ ವಾಹನಗಳು ಸಂಚಾರಕ್ಕೆ ಎರಡು ಗಂಟೆಗಳ ಕಾಲ ತೆಗೆದುಕೊಳ್ಳುತ್ತಿವೆ.

ಟೋಲ್ ಕೂಡ ಆರಂಭವಾಗುವ ಸಾಧ್ಯತೆಯಿದ್ದು, ಟೋಲ್ನ ಪ್ರಮಾಣವನ್ನು ಇನ್ನೂ ನಿಗದಿಪಡಿಸಲಾಗಿಲ್ಲ, ಆದರೆ ವಾಹನ ಸವಾರರು ಈಗಾಗಲೇ ರಸ್ತೆಯನ್ನು ಬಳಸುತ್ತಿರುವುದರಿಂದ ಈ ತಿಂಗಳು ಸಂಗ್ರಹಣೆ ಪ್ರಾರಂಭವಾಗುವ ಸಾಧ್ಯತೆಯಿದೆ.
"ನಾವು ಮಂಡ್ಯ ಮತ್ತು ಶ್ರೀರಂಗಪಟ್ಟಣದಲ್ಲಿ ಬೈಪಾಸ್ಗಳು ತೆರೆಯುವುದನ್ನು ಕಾಯುತ್ತಿದ್ದೆವು, ಅದನ್ನು ಬೈಪಾಸ್ ಸಾರ್ವಜನಿಕರಿಗೆ ಮುಕ್ತವಾಗಿದೆ" ಎಂದು ಎನ್ಎಚ್ಎಐ ಮೂಲಗಳು ತಿಳಿಸಿವೆ.

ಮಾರ್ಚ್ 2014 ರಲ್ಲಿ, ಕೇಂದ್ರ ಮೇಲ್ಮೈ ಸಾರಿಗೆ ಸಚಿವಾಲಯವು ದೇಶಾದ್ಯಂತ ಕೆಲವು ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಗಳಾಗಿ ಮೇಲ್ದರ್ಜೆಗೇರಿಸುವುದಾಗಿ ಘೋಷಿಸಿತ್ತು. ಈ ಘೋಷಣೆಗಳಲ್ಲಿಯೇ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಕೂಡ ಒಂದು. 2014ರಲ್ಲಿ ಈ ಯೋಜನೆಯ ಅಂದಾಜು ವೆಚ್ಚ 4,100 ಕೋಟಿ ರೂ.ಗಳಾಗಿದ್ದು, ಈಗ ಅದು ದುಪ್ಪಟ್ಟಾಗಿದೆ.
ಇನ್ನು, ಈಗಾಗಲೇ ಹೆದ್ದಾರಿಯಲ್ಲಿ ಕಳ್ಳತನದ ಪ್ರಕರಣಗಳು ವರದಿಯಾಗುತ್ತಿದ್ದು, ಸಿಸಿಟಿವಿ ಕ್ಯಾಮೆರಾಗಳು ಮತ್ತು ಹೈವೇ ಪೆಟ್ರೋಲಿಂಗ್ ವ್ಯವಸ್ಥೆ ಮಾಡಲಾಗುತ್ತದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.












Click it and Unblock the Notifications