ಬೆಂಗಳೂರು ನಮ್ಮ ಮೆಟ್ರೋ ಹೊಸಕೋಟೆಗೆ ವಿಸ್ತರಣೆ: ಇಲ್ಲಿದೆ ಭರ್ಜರಿ ಗುಡ್ನ್ಯೂಸ್
ಬೆಂಗಳೂರಿನಿಂದ ವಿವಿಧ ಪ್ರದೇಶಗಳಿಗೆ ಮೆಟ್ರೋ ವಿಸ್ತರಣೆ ಆಗುತ್ತಿದೆ. ಬೆಂಗಳೂರಿನ ಒಳಭಾಗದಲ್ಲಿ ಅಥವಾ ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಮೆಟ್ರೋ ವಿಸ್ತರಣೆಗೆ ಈಗಾಗಲೇ ನೀಲನಕ್ಷೆ ಸಿದ್ಧವಾಗಿದೆ. ಆದರೆ ಇದೀಗ ಬೆಂಗಳೂರು - ತುಮಕೂರು ಹಾಗೂ ಬೆಂಗಳೂರಿನಿಂದ ಹೊಸಕೋಟೆ ಮಾರ್ಗಗಳಿಗೂ ಮೆಟ್ರೋ ವಿಸ್ತರಣೆಯ ಬಗ್ಗೆ ಭಾರೀ ಚರ್ಚೆಗಳು ನಡೆದಿವೆ. ಇದೀಗ ಹೊಸಕೋಟೆಗೆ ಮೆಟ್ರೋ ವಿಸ್ತೀರ್ಣವಾಗುವುದರ ಬಗ್ಗೆ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಅವರು ಮಹತ್ವದ ಅಪ್ಡೇಟ್ಸ್ ಕೊಟ್ಟಿದ್ದಾರೆ.
ಬೆಂಗಳೂರಿನ ನಮ್ಮ ಮೆಟ್ರೋ ಮಾರ್ಗವನ್ನು ಬೆಂಗಳೂರಿನ ಒಳಭಾಗ ಹಾಗೂ ವಿವಿಧ ಪ್ರಮುಖ ಪ್ರದೇಶಗಳಿಗೂ ವಿಸ್ತರಣೆ ಮಾಡುವುದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಇನ್ನು ನಮ್ಮ ಮೆಟ್ರೋ ಮಾರ್ಗವನ್ನು ಹೊಸಕೋಟೆಗೆ ವಿಸ್ತರಣೆ ಮಾಡುವ ಬಗ್ಗೆ ಕಳೆದ ವರ್ಷ ಬಜೆಟ್ನಲ್ಲಿ ಪ್ರಸ್ತಾಪಿಸಲಾಗಿತ್ತು.

ಬೆಂಗಳೂರು ಮೆಟ್ರೋವನ್ನು ವಿವಿಧ ಪ್ರದೇಶಗಳಿಗೆ ವಿಸ್ತರಣೆ ಮಾಡಲಾಗುವುದು ಇದರಿಂದ ಬೆಂಗಳೂರು ಟ್ರಾಫಿಕ್ ಜಾಮ್ ಸಮಸ್ಯೆಗೆ ಪರಿಹಾರ ಸಿಗುವುದರೊಂದಿಗೆ ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಅಲ್ಲದೇ ರಿಯಲ್ ಎಸ್ಟೇಟ್ಗೂ ಪೂರಕವಾಗಿ ಇರಲಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಈಗಾಗಲೇ ಹೇಳಿದ್ದರು.
ರಾಜ್ಯ ಕಾಂಗ್ರೆಸ್ ಸರ್ಕಾರವು ಈಗಾಗಲೇ ಬೆಂಗಳೂರಿನಿಂದ ಹೊಸಕೋಟೆಗೆ ಮೆಟ್ರೋ ವಿಸ್ತರಣೆ ಮಾಡುವುದಾಗಿ ಘೋಷಣೆ ಮಾಡಿದೆ. ಈ ಯೋಜನೆಯನ್ನು ಇನ್ನಷ್ಟು ವೇಗಗೊಳಿಸಬೇಕು ಎಂದು ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಅವರು ಹೇಳಿದ್ದು.
ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ. ಚರ್ಚೆಯ ಬಳಿಕ ಡಿಕೆ ಶಿವಕುಮಾರ್ ಅವರು ಗುಡ್ನ್ಯೂಸ್ ಕೊಟ್ಟಿದ್ದಾರೆ. ಕಾಂಗ್ರೆಸ್ ಸರ್ಕಾರ ಅವಧಿಯಲ್ಲೇ ಹೊಸಕೋಟೆಗೆ ಮೆಟ್ರೋ ವಿಸ್ತರಿಸುವ ಯೋಜನೆ ಅನುಷ್ಠಾನಕ್ಕೆ ಬರಲಿದೆ ಎಂದು ಶರತ್ ಬಚ್ಚೇಗೌಡ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಟಿನ್ ಫ್ಯಾಕ್ಟರಿ - ಕೃಷ್ಣರಾಜಪುರ ಮೂಲಕ ಹೊಸಕೋಟೆ
ಬೆಂಗಳೂರಿನ ಟಿನ್ ಫ್ಯಾಕ್ಟರಿಯಿಂದ ಕಾಡುಗೋಡಿವರೆಗೆ ಮೆಟ್ರೋ ಸೇವೆ ಈಗಾಗಲೇ ಇದೆ. ಈ ಮೆಟ್ರೋ ಮಾರ್ಗಕ್ಕೆ ಉತ್ತಮ ಪ್ರತಿಕ್ರಿಯೆ ಇದೆ. ಅಲ್ಲದೇ ಈ ಮಾರ್ಗದಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆಗೂ ಕಡಿವಾಣ ಬಿದ್ದಿದೆ. ಇದೀಗ ಟಿನ್ ಫ್ಯಾಕ್ಟರಿಯಿಂದ ಕೆಆರ್ಪುರ ಮೂಲಕ ಹೊಸಕೋಟೆಗೆ ನಮ್ಮ ಮೆಟ್ರೋ ಸೇವೆ ವಿಸ್ತರಿಸುವಂತೆ ಸರ್ಕಾರದ ಮೇಲೆ ಒತ್ತಡ ಹಾಕಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಈ ವಿಚಾರದಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶಾಸಕರು ಅಭಿಪ್ರಾಯಪಟ್ಟಿದ್ದಾರೆ.
ಭೂಮಿ / ಪ್ರಾಪರ್ಟಿ ಬೆಲೆ ಹೆಚ್ಚುವ ನಿರೀಕ್ಷೆ
ಇನ್ನು ಹೊಸಕೋಟೆಗೆ ನಮ್ಮ ಮೆಟ್ರೋ ವಿಸ್ತರಣೆ ವಿಚಾರ ಚರ್ಚೆಯಾದಾಗಿನಿಂದಲೂ ಈ ಭಾಗದಲ್ಲಿ ಗಣನೀಯವಾಗಿ ಭೂಮಿ ಬೆಲೆ ಹೆಚ್ಚಳವಾಗುತ್ತಿದೆ. ಐಟಿ - ಬಿಟಿ ಕಂಪನಿಗಳಿಗೆ ಕೆಲವೇ ಕಿ.ಮೀ ದೂರದಲ್ಲಿರುವ ಈ ಪ್ರದೇಶದಲ್ಲಿ ಭೂಮಿ ಬೆಲೆ ಹೆಚ್ಚಾಗುತ್ತಿದೆ.
ಕೃಷ್ಣರಾಜಪುರ ಹಾಗೂ ಬೂದಿಗೆರೆ ಕ್ರಾಸ್ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಪಾರ್ಟ್ಮೆಂಟ್ಗಳ ನಿರ್ಮಾಣ ಪ್ರಕ್ರಿಯೆಯು ಜೋರಾಗಿದೆ. ಅಲ್ಲದೇ ಈಗಾಗಲೇ ಈ ಪ್ರದೇಶಗಳಲ್ಲಿ ನೂರಾರು ಅಪಾರ್ಟ್ಮೆಂಟ್ಗಳ ನಿರ್ಮಾಣವಾಗಿದೆ. ಹೀಗಾಗಿ ಈ ಭಾಗದಲ್ಲಿ ಮುಂದಿನ ದಿನಗಳಲ್ಲಿ ಭೂಮಿ ಬೆಲೆ ಇನ್ನಷ್ಟು ಹೆಚ್ಚಳವಾಗುವ ನಿರೀಕ್ಷೆ ಇದೆ.
ಬೆಂಗಳೂರಿನ ವಿವಿಧ ಭಾಗದಲ್ಲಿ ಈಗಾಗಲೇ ಆಸ್ತಿ ಬೆಲೆ ಹೆಚ್ಚಳವಾಗಿದ್ದು ಹೊಸಕೋಟೆಗೆ ಮೆಟ್ರೋ ಮಾರ್ಗ ವಿಸ್ತರಣೆ ಮಾಡುವುದರಿಂದ ಈ ಭಾಗದಲ್ಲೂ ಭೂಮಿ ಬೆಲೆ ಹೆಚ್ಚಳವಾಗುವ ನಿರೀಕ್ಷೆ ಇದೆ.












Click it and Unblock the Notifications