Water Crisis: ಸ್ನಾನಕ್ಕೆ ಜಿಮ್, ಶೌಚಕ್ಕೆ ಮಾಲ್: ಎಲ್ಲಿಗೆ ಬಂತು ಸಿಲಿಕಾನ್ ಸಿಟಿ ಜನರ ಪರಿಸ್ಥಿತಿ..!
ಬೆಂಗಳೂರು, ಮಾರ್ಚ್ 09: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಿಂದೆದೂ ಕಂಡಿರದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ನೀರಿನ ಕೊರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬೆಂಗಳೂರಿನ ನಿವಾಸಿಗಳು ಕುಡಿಯುವ ನೀರು, ದಿನ ಬಳಕೆಯ ನೀರಿಗೆ ಪರದಾಡುತ್ತಿದ್ದಾರೆ. ನೀರಿನ ಸಮಸ್ಯೆ ಎಲ್ಲಿಯವರೆಗೂ ಉಲ್ಬಣಿಸಿದೆ ಎಂದರೆ ಜನರು ಮನೆಯಲ್ಲಿರುವ ನೀರನ್ನು ಉಳಿಸಲು ಅನ್ಯಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ.
ಬೆಂಗಳೂರು ನಗರದ ಅಪಾರ್ಟ್ಮೆಂಟ್ಗಳಲ್ಲಿ ನೀರಿನ ಅಭಾವ ಹೆಚ್ಚಾಗಿದ್ದು, ಜನರು ಶೌಚಾಲಯಗಳನ್ನು ಬಳಸಲು ಹತ್ತಿರದ ಮಾಲ್ಗಳಿಗೆ ಹೋಗುತ್ತಿದ್ದಾರೆ. ಹಾಗೂ ಸ್ನಾನ ಮಾಡಲು ಜಿಮ್ಗಳಿಗೆ ಹೋಗುತ್ತಿದ್ದಾರೆ ಎಂದು ನಗರದ ನಿವಾಸಿಯೊಬ್ಬರು ಹೇಳಿದ್ದಾರೆ. ಈ ಮೂಲಕ ಜನ ಮನೆಯಲ್ಲಿರುವ ನೀರು ಉಳಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ನೀರಿನ ಕೊರತೆ ಉಂಟಾದ ಕಾರಣ ಹೆಚ್ಚಿನ ಬಾಡಿಗೆದಾರರು ಮನೆ ಖಾಲಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ತಾತ್ಕಾಲಿಕ ವಸತಿಗಳಿಗೆ ಹೋಗುತ್ತಿದ್ದಾರೆ. ನೀರಿಲ್ಲದ ಪರಿಣಾಮ ಶೌಚಾಲಯಗಳು ಸ್ವಚ್ಚಗೊಳಿಸದೇ ಗಬ್ಬು ನಾರುತ್ತಿದೆ. ಜನರು 1 ಕೋಟಿ ರೂ. ಇಎಂಐ ಪಾವತಿಸುತ್ತಿದ್ದಾರೆ. ಆದರೆ ಶೌಚಾಲಯದಲ್ಲಿ ಫ್ಲಶ್ ಮಾಡಲು ಸಾಧ್ಯವಾಗುತ್ತಿಲ್ಲ. ಕಾರಣ ನೀರಿಲ್ಲ. ಈ ಸಮಸ್ಯೆಗೆ ದೀರ್ಘಾವಧಿಯ ಪರಿಹಾರವೇನು? ಎಂದು ನಿವಾಸಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ್ದಾರೆ.
ಇನ್ನು ರಾಜ್ಯ ಸರ್ಕಾರ ನಗರದಲ್ಲಿ ನೀರಿನ ಸಮಸ್ಯೆ ಬಗೆ ಹರಿಸಲು ಹರಸಾಹಸ ಪಡುತ್ತಿದೆ. ಜನರಿಗೆ ನೀರು ಪೂರೈಸಲು ಸರ್ಕಾರ ಮುಂದಾಗಿದ್ದು, ಟ್ಯಾಂಕರ್ ನೀರಿಗೆ ದರ ನಿಗದಿ ಮಾಡಲಾಗಿದೆ. ಬೆಂಗಳೂರು ನಗರದ ಎಲ್ಲಾ ಶಾಸಕರಿಗೆ ನೀರಿನ ಸಮಸ್ಯೆ ಬಗೆಹರಿಸಲು 10 ಕೋಟಿ ಅನುದಾನ ನೀಡಲಾಗಿದೆ. ಬಿಬಿಎಂಪಿಗೆ 148 ಕೋಟಿ, ಬಿಡಬ್ಲ್ಯೂ ಎಸ್ಎಸ್ಬಿ ಯಿಂದ 128 ಕೋಟಿ ಒಟ್ಟು 556 ಕೋಟಿ ಹಣವನ್ನು ಕುಡಿಯುವ ನೀರಿನ ಪೂರೈಕೆಗೆ ಮೀಸಲಿಡಲಾಗಿದೆ.
ಕುಡಿಯುವ ನೀರನ್ನು ಪೂರೈಕೆ ಮಾಡುವುದು ಸರ್ಕಾರದ ಜವಾಬ್ದಾರಿ. ಬೆಂಗಳೂರಿನ ಜನತೆ ಗಾಬರಿಯಾಗುವುದು ಬೇಡ. ಪ್ರತಿಯೊಬ್ಬರಿಗೂ ನೀರು ನೀಡುವುದು ನಮ್ಮ ಕರ್ತವ್ಯ ಎಂದು ಸರ್ಕಾರ ತಿಳಿಸಿದೆ. ಇನ್ನು ನಿರುಪಯುಕ್ತ ಹಾಲಿನ ಟ್ಯಾಂಕರ್ಗಳನ್ನು ನೀರು ಸರಬರಾಜಿಗೆ ಬಳಕೆ ಮಾಡಲು ಸರ್ಕಾರ ಮುಂದಾಗಿದೆ. ಕೆಎಂಎಫ್ ವ್ಯಾಪ್ತಿಯ ಎಲ್ಲಾ ಘಟಕಗಳಿಂದ ಟ್ಯಾಂಕರ್ಗಳನ್ನು ತರಿಸಿ ಸ್ವಚ್ಚಗೊಳಿಸಿ ಟ್ಯಾಂಕರ್ ಗಳನ್ನು ನೀರಿನ ಸಮಸ್ಯೆ ಬಗೆಹರಿಯುವ ತನಕ ಬಳಸಿಕೊಳ್ಳಲು ಸೂಚಿಸಲಾಗಿದೆ.












Click it and Unblock the Notifications