ಫೆ.16 ರ ಬಜೆಟ್ ದಿನ ವಿಧಾನಸೌಧದ ಸುತ್ತಾ ನಿಷೇಧಾಜ್ಞೆ
ಬೆಂಗಳೂರು, ಫೆಬ್ರವರಿ 13: ಫೆಬ್ರವರಿ 16 ರಂದು ರಾಜ್ಯ ಬಜೆಟ್ ಮಂಡನೆ ಆಗಲಿದ್ದು, ಅಂದು ವಿವಿಧ ಸಂಘಟನೆಗಳು ಪ್ರತಿಭಟನೆ ಮಾಡಿ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡುತ್ತವಾದ್ದರಿಂದ ಪ್ರತಿಭಟನೆಗಳಿಂದ ಬಜೆಟ್ ಕಲಾಪಗಳಿಗೆ ಅಡಚಣೆ ಆಗದಂತೆ ತಡೆಯಲು ಪೊಲೀಸರು ಕಠಿಣ ಕ್ರಮಗಳನ್ನು ಅನುಸರಿಸಲು ಮುಂದಾಗಿದ್ದಾರೆ.
ಪ್ರತಿಭಟನೆಗಳಿಂದಾಗಿ ಅಧಿವೇಶನದ ಕಾರ್ಯಕಲಾಪಗಳಿಗೆ ಅಡಚಣೆ ಉಂಟಾಗುವುದಲ್ಲದೆ ಸಾರ್ವಜನಿಕ ನೆಮ್ಮದಿಗೆ ಭಂಗ ಹಾಗೂ ಸುಗಮ ಸಂಚಾರಕ್ಕೆ ತೊಂದರೆ ಉಂಟಾಗುವ ಸಾಧ್ಯತೆಗಳು ಇರುವುದಾಗಿ ಗುಪ್ತವಾರ್ತಾ ಮಾಹಿತಿಯನ್ನು ಬೆಂಗಳೂರು ಪೊಲೀಸ್ ಇಲಾಖೆ ಪಡೆದಿದ್ದು ಶಾಂತಿ ಹಾಗೂ ಕಾನೂನು ಸುವಸ್ಥೆ ಕಾಪಾಡಲು ಕಠಿಣ ಕ್ರಮಗಳನ್ನು ಅನುಸರಿಸಲು ಮುಂದಾಗಿದೆ.
62% ಬಜೆಟ್ ಹಣ ಬಳಸಿದ್ದೇವೆ, ಮಾಧ್ಯಮ ವರದಿಗಳಿಗೆ ಸಿಎಂ ತಿರುಗೇಟು
ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಐಪಿಸಿ 144 ಸೆಕ್ಷನ್ ಅಡಿ ಅಧಿಕಾರ ಉಪಯೋಗಿಸಿ ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ಕುಮಾರ್ ಹಲವು ಆದೇಶಗಳನ್ನು ಹೊರಡಿಸಿದ್ದು ಫೆಬ್ರವರಿ 16ರಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ವಿಧಾನಸೌಧ ಕಟ್ಟಡದ ಸುತ್ತಲೂ ಎರಡು ಕಿ.ಮೀ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಿದ್ದಾರೆ.
ನಿಷೇಧಾಜ್ಞೆ ಅನ್ವಯ ಕಾನೂನುಭಂಗ ಉಂಟು ಮಾಡುವ ಉದ್ದೇಶದಿಂದ 5 ಅಥವಾ ಅದಕ್ಕಿಂತ ಹೆಚ್ಚು ಜನರ ಗುಂಪು ಸೇರುವುದನ್ನು, ವ್ಯಕ್ತಿಗಳ ಅಥವಾ ಅವರ ಶವಗಳ ಪ್ರತಿಕೃತಿಗಳ ಪ್ರದರ್ಶನ ಮಾಡುವುದನ್ನು, ಪ್ರಚೋದಿಸಬಹುದಾದ ಬಹಿರಂಗ ಘೋಷಣೆಗಳನ್ನು ಕೂಗುವುದು, ಸಂಜ್ಞೆ ಮಾಡುವುದು, ಹಾಡುವುದು, ಸಂಗೀತ ನುಡಿಸುವುದು, ಚಿತ್ರಗಳನ್ನು, ಸಂಕೇತಗಳನ್ನು, ಭಿತ್ತಿ ಪತ್ರ ಅಥವಾ ಇತರೆ ಯಾವುದೇ ವಸ್ತುಗಳನ್ನು ಅಥವಾ ಪದಾರ್ಥಗಳನ್ನು ಪ್ರದರ್ಶಿಸುವುದನ್ನು ನಿಷೇಧಿಸಲಾಗಿದೆ.
ಮೆರವಣಿಗೆ ಮತ್ತು ಸಭೆಗಳನ್ನು ನಡೆಸುವುದನ್ನು, ಶಸ್ತ್ರಗಳನ್ನು, ದೊಣ್ಣೆಗಳನ್ನು, ಕತ್ತಿಗಳು, ಈಟಿಗಳು, ಗದೆಗಳು, ಕಲ್ಲು, ಇಟ್ಟಿಗೆ, ಚಾಕು ಇನ್ನೂ ಮುಂತಾದ ಮಾರಕಾಸ್ತ್ರಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಯಾವುದೇ ವಸ್ತುಗಳನ್ನು ಒಯ್ಯುವುದು ನಿಷಿದ್ದವಾಗಿದ್ದು ಅಂತಹವರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ.
ಫೆ. 16ರಂದು ಸಿದ್ದರಾಮಯ್ಯ ಅವರಿಂದ ಕೊನೆಯ ಬಜೆಟ್ ಮಂಡನೆ
ಅಷ್ಟೆ ಅಲ್ಲದೆ ಯಾವುದೇ ಸ್ಪೋಟಕ ವಸ್ತುಗಳನ್ನು ಸಿಡಿಸುವುದು, ಕಲ್ಲುಗಳನ್ನು, ಕ್ಷಿಪಣಿಗಳನ್ನು ಎಸೆಯುವ ಸಾಧನಗಳ ಅಥವಾ ಉಪಕರಣಗಳ ಒಯ್ಯುವಿಕೆಯನ್ನು ಮತ್ತು ಶೇಖರಿಸುವುದು ಕಂಡು ಬಂದಲ್ಲಿ ಕೂಡಲೇ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.