Bengaluru rain: ಭಾರೀ ಮಳೆ, ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಿಗೆ ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು, ನವೆಂಬರ್, 07: ಈಗಾಗಲೇ ಮುಂಗಾರು ಕೈಕೊಟ್ಟಿದ್ದು, ಇದೀಗ ಹಿಂಗಾರು ಚುರುಕು ಪಡೆದಿದೆ. ಇಷ್ಟು ದಿನ ಬಿಸಿಲಿನ ಬೇಗೆಯಿಂದ ಬೆಂದಿದ್ದ ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆರಾಯ ತಂಪೆರೆದಿದ್ದಾನೆ. ಹಾಗೆಯೇ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಭಾರೀ ಮಳೆ ಹಿನ್ನೆಲೆ ಸುರಕ್ಷತೆ ದೃಷ್ಟಿಯಿಂದ ಜನರಿಗೆ ರೈನ್ಕೋಟ್ಗಳು, ಹಾಗೂ ಚಳಿಯಿಂದ ತಮ್ಮ ಆರೋಗ್ಯವನ್ನು ರಕ್ಷಿಸಿಕೊಳ್ಳಲು ಉಣ್ಣೆಯ ಜಾಕೆಟ್ಗಳನ್ನು ಧರಿಸುವಂತೆ ಭಾರತೀಯ ಹವಾಮಾನ ಇಲಾಖೆ ಜಾಗೃತಿ ಸಂದೇಶವನ್ನು ರವಾನಿಸಿದೆ.

ಬೆಂಗಳೂರು ಸೇರಿದಂತೆ ದಕ್ಷಿಣ ಮತ್ತು ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದೆ. ಬೆಂಗಳೂರು, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಶಿವಮೊಗ್ಗ, ಹಾಸನ, ಮಂಡ್ಯ ಮತ್ತು ಮೈಸೂರು ಹಾಗೂ ಎಲ್ಲಾ ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಈ ಜಿಲ್ಲೆಗಳಿಗೆ ಮುಂದಿನ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇದ್ದು, ಸಂಜೆ ವೇಳೆಗೆ ಬೆಂಗಳೂರಿನಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯುವ ಮುನ್ಸೂಚನೆ ಇದೆ.
ಮುಂದಿನ 3-5 ದಿನಗಳಲ್ಲಿ ಭಾರೀ ಮಳೆ
ರಾಜ್ಯದಲ್ಲಿ 54% ಮಳೆ ಕೊರತೆ ಎದುರಾಗಿದ್ದು, ಈ ಪೈಕಿ ದಕ್ಷಿಣ ಒಳನಾಡಿನ ಕರ್ನಾಟಕವು 43% ನಷ್ಟು ಮಳೆ ಕೊರತೆಯನ್ನು ಎದುರಿಸುತ್ತಿದೆ. ಮತ್ತೊಂದೆಡೆ ಮುಂದಿನ 3-5 ದಿನಗಳಲ್ಲಿ ಭಾರೀ ಮಳೆ ಸುರಿಯುವ ನಿರೀಕ್ಷೆಯಿದೆ. ಇನ್ನು ಸೋಮವಾರ ಸುರಿದ ಮಳೆಗೆ ಬೆಂಗಳೂರು ನಗರದ ಹಲವು ಅಂಡರ್ಪಾಸ್ಗಳು ಜಲಾವೃತಗೊಂಡ ಘಟನೆಗಳು ನಡದಿವೆ.
ಇನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಡರಾತ್ರಿ ಬಿಬಿಎಂಪಿ ಕೇಂದ್ರ ನಿಯಂತ್ರಣ ಕೊಠಡಿಗೆ ಭೇಟಿ ನೀಡಿ ಹಾನಿಯನ್ನು ಪರಿಶೀಲನೆ ನಡೆಸಿದರು. ನಗರದಲ್ಲಿ ತಾಪಮಾನವೂ ಕಡಿಮೆಯಾಗುವ ಸಾಧ್ಯತೆಯಿದೆ ಎನ್ನಲಾಗಿದ್ದು, ಗರಿಷ್ಠ 28 ರಿಂದ 29 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಕನಿಷ್ಠ 19 ರಿಂದ 20 ಡಿಗ್ರಿ ತಾಪಮಾನ ದಾಖಲಾಗುವ ಸಾಧ್ಯತೆಯಿದೆ ಎಂದು ಐಎಂಡಿ ಅಧಿಕಾರಿಗಳು ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹಲವೆಡೆ ಮಳೆ
ಬರದ ಬೇಗೆಯಿಂದ ಕಂಗಾಲಾಗಿದ್ದ ಚಿತ್ರದುರ್ಗದ ಜನತೆಗೆ ಮಳೆರಾಯ ತಂಪೆರೆದಿದ್ದಾನೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದ್ದು, ಅಲ್ಲಿಲ್ಲಿ ಸಣ್ಣಪುಟ್ಟ ಗುಂಡಿಗಳಲ್ಲಿ ನೀರು ತುಂಬಿದೆ. ಇದರಿಂದ ರೈತರ ಮೊಗದಲಿ ಕೊಂಚ ಮಂದಹಾಸ ಮೂಡಿಸಿದೆ.
ಈಗಾಗಲೇ ಬಹುತೇಕ ಬೆಳೆಗಳು ಕೊಯ್ಲಿಯಿಂದ ಮುಗಿದಿವೆ. ಒಂದೆರಡು ದಿನಗಳಲ್ಲಿ ಮತ್ತೊಷ್ಟು ಮಳೆ ಬಂದರೆ ಎರೆ (ಕಪ್ಪು ) ನೆಲದಲ್ಲಿ ಕಡಲೆ ಬಿತ್ತನೆಗೆ ಸಿದ್ದತೆ ನಡೆಯಲಿದೆ.
ಹಿರಿಯೂರು ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದ್ದು,ಇಕ್ಕನೂರಿನಲಗಲಿ ಅತೀ ಹೆಚ್ಚು 88.8 ಮಿಲಿ ಮೀಟರ್ ಮಳೆಯಾಗಿದೆ. ಈಶ್ವರಗೆಯಲ್ಲಿ 66.2 ಮಿ.ಮೀ, ಹಿರಿಯೂರು-38.6 ಮಿ.ಮೀ, ಬಬ್ಬೂರು -30.8 ಮಿ.ಮೀ, ಈಶ್ವರಗೆರೆ-66.2 ಮಿ.ಮೀ, ಸೂಗೂರು-64.3 ಮಿ.ಮೀ ಹಾಗೂ ಜವನಗೊಂಡನಹಳ್ಳಿಯಲ್ಲಿ ಸುಸ್ಥಿತಿಯಲ್ಲಿಲ್ಲ ಎಂದು ವರದಿಯಾಗಿದೆ.












Click it and Unblock the Notifications