ರಾಜಕಾಲುವೆ ಒತ್ತುವರಿ ತೆರವು ವಿಳಂಬ: ಬಿಬಿಎಂಪಿ ಕಮೀಷನರ್ಗೆ ಹೈಕೋರ್ಟ್ ತರಾಟೆ
ಬೆಂಗಳೂರು.ಅ.1 ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ರಾಜಕಾಲುವೆ ಒತ್ತುವರಿಗೊಳಿಸಲು ವಿಳಂಬ ಮಾಡುತ್ತಿರುವ ಬಿಬಿಎಂಪಿ ವಿರುದ್ಧ ಹೈಕೋರ್ಟ್ ಹರಿಹಾಯ್ದಿತು. ಅಲ್ಲದೆ, ಒತ್ತುವರಿಗಳನ್ನು ತೆರವುಗೊಳಿಸದೇ ಹೋದಲ್ಲಿ ಪಾಲಿಕೆಯ ಮುಖ್ಯ ಆಯುಕ್ತರ ವಿರುದ್ಧ ಸೂಕ್ತ ಆದೇಶ ಹೊರಡಿಸಬೇಕಾಗುತ್ತದೆ ಎಂದು ಹೈಕೋರ್ಟ್ ವಾರ್ನಿಂಗ್ ನೀಡಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿನ ರಸ್ತೆಗಳ ಗುಂಡಿ ಮುಚ್ಚುವುದಕ್ಕೆ ಸಂಬಂಧ ಕೋರಮಂಗಲದ ವಿಜಯ್ ಮೆನನ್ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯಪೀಠ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತು.
ಅಲ್ಲದೆ ' ಒಂದೂ ರಸ್ತೆ ಗುಂಡಿ ಮುಚ್ಚಿಲ್ಲ, ರಸ್ತೆ ಗುಂಡಿಗಳನ್ನು ತುಂಬುವ ಕಾಮಗಾರಿಯೂ ಸಮರ್ಪಕವಾಗಿಲ್ಲ. ಈ ರಸ್ತೆಗಳು ವಾಹನ ಸವಾರರಿಗೆ ಬಲು ಕಷ್ಟಕರವಾಗಿ ಪರಿಣಮಿಸಿವೆ' ಎಂದು ಅಸಮಾಧಾನ ವ್ಯಕ್ತಪಡಿಸಿ ವಿಚಾರಣೆಯನ್ನು ಅ, 27ಕ್ಕೆ ಮುಂದೂಡಿತು.
ಬಿಬಿಎಂಪಿ ಪರ ವಕೀಲರು ನ್ಯಾಯಪೀಠಕ್ಕೆ ವಸ್ತುಸ್ಥಿತಿ ವರದಿ ಸಲ್ಲಿಸಿ, 2022ರ ಸೆಪ್ಟೆಂಬರ್ 19ರಿಂದ ಈವರೆಗೆ 10 ಒತ್ತುವರಿ ತೆರವುಗೊಳಿಸಲಾಗಿದೆ. ಇನ್ನೂ 592 ಅತಿಕ್ರಮಣ ತೆರವುಗೊಳಿಸಬೇಕಾಗಿದ್ದು, ಅದಕ್ಕೆ ಸ್ವಲ್ಪ ಸಮಯಾವಕಾಶ ನೀಡಬೇಕೆಂದು ಕೋರಿದರು.
ದಾಖಲೆ ಪರಿಶೀಲಿಸಿದ ನ್ಯಾಯಪೀಠ, ವರದಿಯಲ್ಲಿ ಮೇಲ್ನೋಟಕ್ಕೆ ಏನೂ ಪ್ರಗತಿ ಕಾಣುತ್ತಿಲ್ಲ. ಈ ವಿಷಯದಲ್ಲಿ ಬಿಬಿಎಂಪಿ ತನ್ನ ಪ್ರಗತಿಯನ್ನು ತೋರಿಸದೇ ಹೋದಲ್ಲಿ ಎಂಜಿನಿಯರ್ಗಳ ವೇತನ ತಡೆ ಹಿಡಿಯಲು ಆದೇಶಿಸಬೇಕಾಗುತ್ತದೆ' ಎಂದು ಮೌಖಿಕ ಎಚ್ಚರಿಕೆ ನೀಡಿತು.
ಪಾಲಿಕೆ ಸಲ್ಲಿಸಿರುವ ವರದಿಯಲ್ಲಿ, 'ನಗರದ ಪ್ರಮುಖ ರಸ್ತೆಗಳಲ್ಲಿನ 221 ಗುಂಡಿಗಳನ್ನು ಹಾಟ್ ಮಿಕ್ಸ್ ಬಳಸಿ ತುಂಬಲಾಗಿದೆ. ಮಹದೇವಪುರ ವಲಯದ 324 ಕಿ.ಮೀ ರಸ್ತೆಗಳನ್ನು ಮರು ಡಾಂಬರೀಕರಣ ಮಾಡಲಾಗುತ್ತಿದ್ದು, 427 ಕಿ.ಮೀ ಉದ್ದದ ರಸ್ತೆಗಳ ಮರು ಡಾಂಬರೀಕರಣ ಪ್ರಾರಂಭಿಸಲಾಗಿದೆ ಎಂದು ಹೇಳಲಾಗಿದೆ.
ಸಚಿವ ಬೈರತಿ ಬಸವರಾಜ್ ಗೆ ಬಿಗ್ ರಿಲೀಫ್;
ಭೂ ಕಬಳಿಕೆ ಪ್ರಕರಣ ಸಂಬಂಧ ಸಚಿವ ಭೈರತಿ ಬಸವರಾಜ್ ವಿರುದ್ಧದ ಖಾಸಗಿ ದೂರನ್ನು ರದ್ದುಪಡಿಸಿ ಹೈಕೋರ್ಟ್ ಶುಕ್ರವಾರ ಆದೇಶಿಸಿದೆ.
ಭೂ ಕಬಳಿಕೆ ಆರೋಪ ಸಂಬಂಧಿಸಿದ ಖಾಸಗಿ ದೂರು ಮತ್ತು 42ನೇ ಎಸಿಎಂಎಂ ನ್ಯಾಯಾಲಯದ ವಿಚಾರಣೆ ರದ್ದು ಕೋರಿ ಸಚಿವ ಭೈರತಿ ಬಸವರಾಜ್ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿರುವ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯಪೀಠ ಈ ಆದೇಶ ಮಾಡಿದೆ.
ಪ್ರಕರಣವು ಸಿವಿಲ್ ವ್ಯಾಜ್ಯವಾಗಿರುವುದರಿಂದ ಕ್ರಿಮಿನಲ್ ಪ್ರಕರಣ ದಾಖಲಿಸಲು ಅವಕಾಶವಿಲ್ಲ ಎಂದು ತಿಳಿಸಿ ಅರ್ಜಿದಾರರ ವಿರುದ್ಧದ ಖಾಸಗಿ ದೂರು ಮತ್ತು ವಿಚಾರಣಾ ನ್ಯಾಯಾಲಯದ ವಿಚಾರಣೆ ರದ್ದುಪಡಿಸಿದೆ.
ಪ್ರಕರಣದ ಹಿನ್ನೆಲೆ:
ಬೆಂಗಳೂರು ಪೂರ್ವ ತಾಲೂಕಿನ ಕೆ.ಆರ್.ಪುರ ಹೋಬಳಿಯ ಕಲ್ಕೆರೆ ಗ್ರಾಮದ ಸರ್ವೇ ನಂಬರ್ 375.2 ರಲ್ಲಿನ 22.43 ಎಕರೆ ಜಾಗ ಅದೂರ್ ಅಣ್ಣೈಯಪ್ಪಗೆ ಎಂಬುವರಿಗೆ ಸೇರಿದೆ. 2007ರ ಮೇ 21ರಂದು ಸಂಬಂಧಿಕರಾದ ಮಾದಪ್ಪ ಮತ್ತು ಪಿಳ್ಳಮಾದಪ್ಪ ಅವರು ಖಾಲಿ ಕಾಗದಗಳ ಮೇಲೆ ಅದೂರ್ ಅಣ್ಣೈಯಪ್ಪ ಅವರ ಸಹಿ ಮತ್ತು ಹೆಬ್ಬೆಟ್ಟು ಪಡೆದುಕೊಂಡರು. ನಂತರ ಪಾಲುದಾರಿಕೆ ಕರಾರು ಸಿದ್ಧಪಡಿಸಿಕೊಂಡು ಶಾಸಕ ಬೈರತಿ ಬಸವರಾಜ್ ಅವರಿಗೆ 2009ರ ಮೇ 21ರಂದು ಅಕ್ರಮವಾಗಿ 22.43ಎಕರೆ ಜಮೀನು ಮಾರಾಟ ಮಾಡಿದ್ದಾರೆ ಹಾಗೂ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನೋಂದಣಿ ಮಾಡಿಕೊಟ್ಟಿದ್ದಾರೆ' ಎಂದು ಆರೋಪಿಸಿ ಅಣ್ಣೈಯಪ್ಪ ಪುತ್ರ ಮಾದಪ್ಪ ಖಾಸಗಿ ದೂರು ದಾಖಲಿಸಿದ್ದರು.
ಈ ದೂರನ್ನು ವಿಚಾರಣೆಗೆ ಅಂಗೀಕರಿಸಿದ್ದ ನಗರದ 42ನೇ ಎಸಿಎಂಎಂ ನ್ಯಾಯಾಲಯವು ೨೦೨೧ರ ನ.೨೫ರಂದು ಭೈರತಿ ಬಸವರಾಜ್ಗೆ ಅವರಿಗೆ ಸಮನ್ಸ್ ಜಾರಿ ಮಾಡಿತ್ತು. ಅದನ್ನು ಅವರು ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದರು.