ಬೆಂಗಳೂರು ನಗರ, ಗ್ರಾಮಾಂತರ ಎಸಿಬಿ ಪೊಲೀಸ್ ಠಾಣೆ ಉದ್ಘಾಟನೆ
ಬೆಂಗಳೂರು, ಆಗಸ್ಟ್ 10 : ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಪೊಲೀಸ್ ಠಾಣೆಗಳು ಉದ್ಘಾಟನೆಗೊಂಡಿವೆ. ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಎಸಿಬಿ ಪೊಲೀಸ್ ಠಾಣೆಗಳು ಕಾರ್ಯನಿರ್ವಹಿಸುತ್ತಿವೆ.
ಬುಧವಾರ ಬೆಳಗ್ಗೆ ಸರ್ಕಾರದ ಮುಖ್ಯಕಾರ್ಯದರ್ಶಿ ಅರವಿಂದ್ ಜಾಧವ್ ಅವರು, ಬೆಂಗಳೂರಿನ ರೇಸ್ಕೋರ್ಸ್ ರಸ್ತೆಯಲ್ಲಿರುವ ಖನಿಜ ಭವನದ ನೆಲಮಹಡಿಯಲ್ಲಿ ಸ್ಥಾಪನೆಗೊಂಡಿರುವ ಬೆಂಗಳೂರು ನಗರ ಭ್ರಷ್ಟಾಚಾರ ನಿಗ್ರಹ ದಳ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿದರು. [ಭ್ರಷ್ಟಾಚಾರ ನಿಗ್ರಹ ದಳದಿಂದ ವೆಬ್ ಸೈಟ್, ಫೇಸ್ಬುಕ್ ಪುಟ]

ಎಸಿಬಿಯ ಬೆಂಗಳೂರು ನಗರ ವಿಭಾಗದದ ಠಾಣೆಯಲ್ಲಿ ಒಬ್ಬರು ಪೊಲೀಸ್ ಅಧೀಕ್ಷಕರು ಹಾಗೂ 5 ಜನ ಡಿವೈಎಸ್ಪಿ, 13 ಜನ ಪೊಲೀಸ್ ಇನ್ಸ್ಪೆಕ್ಟರ್, ಪೊಲೀಸ್ ಸಿಬ್ಬಂದಿಗಳು ಹಾಗೂ ಲಿಪಿಕ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸಲಿದ್ದಾರೆ.[10 ಲಕ್ಷ ಲಂಚ ಕೇಳಿದ್ದ ಅಧಿಕಾರಿ ಎಸಿಬಿ ಬಲೆಗೆ]
ಬೆಂಗಳೂರು ಗ್ರಾಮಾಂತರ ಎಸಿಬಿ ಠಾಣೆಯಲ್ಲಿ ಒಬ್ಬರು ಡಿವೈಎಸ್ಪಿ ದರ್ಜೆಯ ಅಧಿಕಾರಿಯು ಠಾಣಾಧಿಕಾರಿಯಾಗಿದ್ದು, ಒಬ್ಬರು ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಅಗತ್ಯ ಪೊಲೀಸ್ ಸಿಬ್ಬಂದಿ ಮತ್ತು ಲಿಪಿಕ ಸಿಬ್ಬಂದಿಗಳು ಕರ್ತವ್ಯ ನಿರ್ವಹಣೆ ಮಾಡಲಿದ್ದಾರೆ.[ಶಿವಮೊಗ್ಗದಲ್ಲಿ ಎಸಿಬಿ ಪೊಲೀಸ್ ಠಾಣೆ ಆರಂಭ]
ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸಿಬಿ ಪೊಲೀಸ್ ಠಾಣೆಯ ವ್ಯಾಪ್ತಿಗೆ ಬೆಂಗಳೂರು ಗ್ರಾಮಾಂತರ, ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ ಒಳಪಡಲಿದೆ.
ಜಿಲ್ಲೆಗೊಂದು ಎಸಿಬಿ ಠಾಣೆ : ರಾಜ್ಯದ ಪ್ರತಿಯೊಂದು ಜಿಲ್ಲೆಗೆ ತಲಾ ಒಂದು ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯನ್ನು ಮಂಜೂರು ಮಾಡಲಾಗಿದೆ. ಪ್ರತಿ ಜಿಲ್ಲೆಯ ಪೊಲೀಸ್ ಠಾಣೆಯಲ್ಲಿ ಡಿವೈಎಸ್ಪಿ ದರ್ಜೆಯ ಪೊಲೀಸ್ ಅಧಿಕಾರಿಯು ಠಾಣಾಧಿಕಾರಿಯಾಗಿರುತ್ತಾರೆ ಹಾಗೂ ಇಬ್ಬರು ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಅಗತ್ಯತೆಗನುಗುಣವಾಗಿ ಪೊಲೀಸ್ ಸಿಬ್ಬಂದಿ ಮತ್ತು ಲಿಪಿಕ ಸಿಬ್ಬಂದಿಗಳಿರುತ್ತಾರೆ.
ಭ್ರಷ್ಟಾಚಾರ ನಿಗ್ರಹ ದಳದ ಕೇಂದ್ರ ಕಚೇರಿ ಬೆಂಗಳೂರು ನಗರದ ರೇಸ್ಕೋರ್ಸ್ ರಸ್ತೆಯಲ್ಲಿರುವ ಖನಿಜ ಭವನದ ನೆಲಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಎಸಿಬಿಯ ಸಂಪೂರ್ಣ ಮಾಹಿತಿಯು ಸಾರ್ವಜನಿಕರಿಗೆ ಸುಲಭವಾಗಿ ಲಭ್ಯವಾಗಲು ಅನುಕೂಲವಾಗುವಂತೆ ಎಸಿಬಿ ವೆಬ್ಸೈಟ್ ಆರಂಭಿಸಲಾಗಿದೆ.












Click it and Unblock the Notifications