Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ
ಬೆಂಗಳೂರು: ರಾಜಧಾನಿಯ ಹೃದಯಭಾಗದಲ್ಲಿರುವ ರಾಜಾಜಿನಗರದ ವಸತಿ ಪ್ರದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಾಲೆಯ ವಿರುದ್ಧ ಸ್ಥಳೀಯ ನಿವಾಸಿಗಳು ಅಸಮಾಧಾನಗೊಂಡು ಹೈಕೊರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠವು, ಮೊನ್ನೆ ಮಂಗಳವಾರ ಸರ್ಕಾರ, ಪೊಲೀಸ್ ಹಾಗೂ ಗ್ರೇಟರ್ ಬೆಂಗಳೂರು ಅಥಾರಿಟಿ (GBA)ಗೆ ನೋಟಿಸ್ ಜಾರಿಗೊಳಿಸಿದೆ.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಪೂನಚ್ಚ ಅವರಿದ್ದ ವಿಭಾಗೀಯ ಪೀಠವು, ರಾಜಾಜಿನಗರ 5ನೇ ಬ್ಲಾಕ್ ನಿವಾಸಿಗಳ ಸಂಘ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿ, ಸಂಬಂಧಿಸಿದವರಿಗೆ ನೋಟಿಸ್ ಜಾರಿ ಮಾಡಿ, ಜುಲೈ 2ಕ್ಕೆ ಮುಂದೂಡಿತು.

ಶಾಲೆಯಿಂದ ಸಮಸ್ಯೆ: ಸಾರ್ವಜನಿಕರ ದೂರು
ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ನಿವಾಸಿಗಳು (ಅರ್ಜಿದಾರರು) ಇಲ್ಲಿನ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಕಾರ್ಯಾಚರಣೆಯಿಂದ ಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆ ತಮ್ಮ ಮನವಿಗಳನ್ನು ಪರಿಗಣಿಸಲು ನ್ಯಾಯಾಲಯದಿಂದ ಸೂಚನೆ ನೀಡುವಂತೆ ಅರ್ಜಿಯಲ್ಲಿ ಕೋರಿದ್ದರು.
ಪಿಐಎಲ್ನಲ್ಲಿ, ಶಾಲೆ ದಿನವಿಡೀ ಸಾರ್ವಜನಿಕ ಘೋಷಣಾ ವ್ಯವಸ್ಥೆ (Public Address System) ಬಳಸುವುದರಿಂದ ಸ್ಥಳೀಯರಿಗೆ, ವಿಶೇಷವಾಗಿ ಮನೆಯಿಂದ ಕೆಲಸ ಮಾಡುವವರಿಗೆ ತೊಂದರೆ ಉಂಟಾಗುತ್ತಿದೆ ಎಂದು ಆರೋಪಿಸಲಾಗಿದೆ. ಲೌಡ್ಸ್ಪೀಕರ್ ಬಳಕೆಯಿಂದ ಪ್ರದೇಶದಲ್ಲಿ ಶಾಂತಿ ಭಂಗವಾಗುತ್ತಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ, ಸ್ಥಳೀಯ ಮಕ್ಕಳಿಗೆ ಪ್ರವೇಶದಲ್ಲಿ ಆದ್ಯತೆ ನೀಡಬೇಕಾದ ನಿಯಮ ಪಾಲಿಸಲಾಗುತ್ತಿಲ್ಲ ಎಂದು ಅರ್ಜಿದಾರರು ದೂರಿದ್ದಾರೆ. ಶಾಲಾ ಬಸ್ಗಳನ್ನು ಕ್ಯಾಂಪಸ್ ಹೊರಗೆ ನಿಲ್ಲಿಸುವುದರಿಂದ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಇದರಿಂದ ನಾಗರಿಕರಿಗೆ ನಿತ್ಯ ಕೆಲವು ಕಿರಿ ಕಿರಿ ಅನುಭವಿಸುವಂತಾಗಿದೆ ಎಂದು ಅರ್ಜಿದಾರರು ವಿವರಿಸಿದ್ದಾರೆ.
ಹಾಗೆಯೇ, ಶಾಲಾ ಆಡಳಿತವು ಪೋಷಕರ ಸಭೆಗಳು (PTM) ಹಾಗೂ ಇತರ ಕಾರ್ಯಕ್ರಮಗಳನ್ನು ಸುತ್ತಮುತ್ತಲಿನ ನಿವಾಸಿಗಳಿಗೆ ಮುಂಚಿತವಾಗಿ ತಿಳಿಸದೇ ಆಯೋಜಿಸುತ್ತಿದೆ ಅಂತಲೂ ಅರ್ಜಿಯಲ್ಲಿ ದೂರಲಾಗಿದೆ. ಈ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್ ಪೊಲೀಸ್ ಹಾಗೂ ಗ್ರೇಟರ್ ಬೆಂಗಳೂರು ಅಥಾರಿಟಿ (GBA)ಗೆ ನೋಟಿಸ್ ಜಾರಿಗೊಳಿಸಿ ಅರ್ಜಿ ವಿಚಾರಣೆ ಮುಂದೂಡಿತು.












Click it and Unblock the Notifications