ಬೆಂಗಳೂರು ಎರಡನೇ ಏರ್ಪೋರ್ಟ್: ರಾಜ್ಯ ಸರ್ಕಾರಕ್ಕೇ ಸವಾಲು ಹಾಕಿದ 34 ಜನ ಶಾಸಕರು!
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಮೂರು ಜಾಗಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗಿದ್ದರೂ. ಈ ಜಾಗಗಳನ್ನು ಹೊರತುಪಡಿಸಿ ಮತ್ತೊಂದು ಜಾಗದಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು ಎನ್ನುವ ಒತ್ತಡ ಹೆಚ್ಚಾಗಿದ್ದು ಇದೀಗ ಕೇಂದ್ರದ ಮೇಲೆ ಒತ್ತಡ ಹಾಕುವ ತಂತ್ರವನ್ನು ಕರ್ನಾಟಕದ ಶಾಸಕರು ಮಾಡುತ್ತಿದ್ದಾರೆ. ಈಗಾಗಲೇ ಶಾರ್ಟ್ ಲಿಸ್ಟ್ ಮಾಡಿರುವ ಜಾಗಗಳನ್ನು ಬಿಟ್ಟು ತುಮಕೂರು ಜಿಲ್ಲೆಯ ಶಿರಾದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು ಎನ್ನುವ ಬೇಡಿಕೆ ಹೆಚ್ಚಾಗಿದೆ. ಹಿರಿಯ ಕಾಂಗ್ರೆಸ್ ನಾಯಕ, ಶಾಸಕ ಟಿ.ಬಿ. ಜಯಚಂದ್ರ ಅವರು ಇದರ ಮುಂದಾಳತ್ವ ವಹಿಸಿದ್ದು ಇದೀಗ ನೇರವಾಗಿ ಕೇಂದ್ರದ ಮೊರೆ ಹೋಗಲು ನಿರ್ಧರಿಸಲಾಗಿದೆ. ಈ ಮೂಲಕ ಕರ್ನಾಟಕದಲ್ಲೇ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪೈಪೋಟಿ ಹೆಚ್ಚಾಗಿದೆ.
ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಕರ್ನಾಟಕದಲ್ಲಿಯೇ ಪೈಪೋಟಿ ಹೆಚ್ಚಳವಾಗಿದೆ. ಕೇಂದ್ರ ತಂಡವು ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಶಾರ್ಟ್ಲಿಸ್ಟ್ ಮಾಡಿಕೊಂಡಿರುವ ಜಾಗಗಳನ್ನು ಪರಿಶೀಲನೆ ಮಾಡುತ್ತಿರುವಾಗಲೇ ಶಾರ್ಟ್ಲಿಸ್ಟ್ ಮಾಡಲಾಗಿರುವ ಜಾಗದಿಂದ ಅಂದಾಜು 120 ಕಿ.ಮೀ ದೂರದಲ್ಲಿ ಇರುವ ತುಮಕೂರು ಜಿಲ್ಲೆಯ ಶಿರಾದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು ಎನ್ನುವ ಒತ್ತಡ ಹೆಚ್ಚಾಗಿದೆ. ಮೊದಲು ಇಲ್ಲಿ ವಿಮಾನ ನಿಲ್ದಾಣವನ್ನು ನಿರ್ಮಾಣ ಮಾಡಬೇಕು ಎಂದು ಈ ಭಾಗದ ಶಾಸಕರು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು.

ಶಾಸಕ ಟಿ.ಬಿ. ಜಯಚಂದ್ರ ಅವರ ನೇತೃತ್ವದಲ್ಲಿ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿತ್ತು. ಆದರೆ ಅದು ತಿರಸ್ಕೃತವಾಗಿತ್ತು. ಹೀಗಾಗಿ ಇದೀಗ ಕೇಂದ್ರ ಸರ್ಕಾರದ ಮೊರೆ ಹೋಗುವುದಕ್ಕೆ ನಿರ್ಧರಿಸಲಾಗಿದೆ.
ಈ ಪ್ರಸ್ತಾವನೆಯನ್ನು ರಾಜ್ಯ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಅವರು ತಳ್ಳಿ ಹಾಕಿದ್ದರು. ಇಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗುವುದರಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಪ್ರದೇಶಿಕ ವಿಮಾನ ನಿಲ್ದಾಣದಂತೆ ಬದಲಾಗುವ ಸಾಧ್ಯತೆ ಇದೆ. ಅಷ್ಟು ಮಾತ್ರವಲ್ಲ ಬೆಂಗಳೂರಿನ ಸಮೀಪದಲ್ಲೇ ಇರುವ ಜಾಗವನ್ನು ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ನೋಡುತ್ತಿದ್ದೇವೆ ಎಂದು ಎಂ.ಬಿ ಪಾಟೀಲ್ ಅವರು ಹೇಳಿದ್ದರು. ಆದರೆ 34 ಜನ ಶಾಸಕರು ರಾಜ್ಯ ಸರ್ಕಾರಕ್ಕೆ ಈ ವಿಚಾರದಲ್ಲಿ ಸವಾಲು ಹಾಕಿದ್ದಾರೆ.
ಇನ್ನು ತುಮಕೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು ಎನ್ನುವುದಕ್ಕೆ ಮೊದಲಿನಿಂದಲೂ ಬೇಡಿಕೆ ಹೆಚ್ಚಾಗಿ ಇದೆ. ಇಲ್ಲಿ ವಿಮಾನ ನಿಲ್ದಾಣ ನಿರ್ಮಿಸಬೇಕು ಎಂದು ಪಕ್ಷಾತೀತವಾಗಿ ಒತ್ತಡ ಹೇರಲಾಗುತ್ತಿದ್ದು ರಾಜ್ಯ ಕಾಂಗ್ರೆಸ್ ನಾಯಕರು ಹಾಗೂ ಬಿಜೆಪಿ ನಾಯಕರು ಒಂದಾಗಿದ್ದಾರೆ. ಇದಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಅವರು ಸಹ ಬೆಂಬಲ ಸೂಚಿಸಿದ್ದಾರೆ. ಹಲವು ಶಾಸಕರು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ಪತ್ರಕ್ಕೆ ಸಹಿ ಹಾಕಿದ್ದಾರೆ. ಹೀಗಾಗಿ ರಾಜ್ಯದ ಸಚಿವರು ನೇರವಾಗಿ ಕೇಂದ್ರ ಸರ್ಕಾರಕ್ಕೇ ಮನವಿ ಸಲ್ಲಿಸಲು ಮುಂದಾಗಿದ್ದಾರೆ. ಈ ಸಂಬಂಧ ಕೇಂದ್ರ ವಿಮಾನಯಾನ ಸಚಿವ ಕೆ. ರಾಮ್ ಮೋಹನ್ ನಾಯ್ಡು ಅವರಿಗೆ ಮನವಿ ಸಲ್ಲಿಸಲಾಗಿದೆ.
ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಶಾರ್ಟ್ಲಿಸ್ಟ್ ಆಗಿರುವ ಜಾಗಗಳು
ಇನ್ನು ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ರಾಜ್ಯ ಸರ್ಕಾರದಿಂದ ಅಧಿಕೃತವಾಗಿ ಮೂರು ಜಾಗಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗಿದೆ. ಅದರ ವಿವರ ಈ ರೀತಿ ಇದೆ.
* ಹಾರೋಹಳ್ಳಿ - ಕನಕಪುರ ರಸ್ತೆಯಲ್ಲಿ ಎರಡು ಜಾಗ
* ನೆಲಮಂಗಲದ ಕುಣಿಗಲ್ ರಸ್ತೆ












Click it and Unblock the Notifications