Bengaluru 2nd Airport: ಶೀಘ್ರದಲ್ಲೇ ಎರಡನೇ ವಿಮಾನ ನಿಲ್ದಾಣಕ್ಕೆ ಸ್ಥಳ ನಿಗದಿ; ಐದು ಸ್ಥಳಗಳಲ್ಲಿ ಯಾವುದು ಆಯ್ಕೆ?
ಬೆಂಗಳೂರಿಗೆ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸ್ಥಳ ಆಯ್ಕೆ ಮಾಡಲು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ, ಡಿಸಿಎಂ ಡಿ.ಕೆ. ಶಿವಕುಮಾರ್, ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಅಧಿಕಾರಿಗಳು ಸಭೆ ನಡೆಸಿದರು. ಶೀಘ್ರದಲ್ಲೇ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸ್ಥಳವನ್ನು ಅಂತಿಮಗೊಳಿಸಲಾಗುವುದು, ಐದು ಸ್ಥಳಗಳನ್ನು ಗುರುತಿಸಲಾಗಿದ್ದು ಒಂದು ಸ್ಥಳವನ್ನು ಆಯ್ಕೆ ಮಾಡಲಾಗುವುದು ಎಂದು ಎಂಬಿ ಪಾಟೀಲ್ ಹೇಳಿದ್ದಾರೆ.
ಜಾಗತಿಕ ಮಟ್ಟದಲ್ಲಿ ಬೆಂಗಳೂರು ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ಸಾರ್ವಜನಿಕರು ಮತ್ತು ಉದ್ಯಮಗಳ ದೃಷ್ಟಿಯಿಂದ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಅತ್ಯಗತ್ಯವಾಗಿದೆ. ಈಗಾಗಲೇ ಎರಡನೇ ಅಂತಾರಾಷ್ಟ್ರಿಯ ವಿಮಾನ ನಿಲ್ದಾಣಕ್ಕೆ ಐದು ಸ್ಥಳಗಳನ್ನು ಗುರುತಿಸಲಾಗಿದ್ದು, ಇನ್ನೂ ಯಾವುದನ್ನೂ ಅಂತಿಮಗೊಳಿಸಿಲ್ಲ. ಇನ್ನೊಂದು ವಾರದಲ್ಲಿ ಸಭೆ ಸೇರಿ ಅಂತಿಮ ತೀರ್ಮಾನ ತೆಗೆದುಕೊಳ್ಳುವುದಾಗಿ ಎಂಬಿ ಪಾಟೀಲ್ ತಿಳಿಸಿದ್ದಾರೆ.

ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸ್ಥಳವನ್ನು ಅಂತಿಮಗೊಳಿಸಲಾಗಿದೆ ಎಂದು ಕೆಲವು ಕಡೆ ವರದಿಯಾಗಿದೆ, ಆದರೆ ಅದೆಲ್ಲಾ ಸುಳ್ಳು. ಡಾಬಸ್ಪೇಟೆ, ನೆಲಮಂಗಲ, ಬಿಡದಿ, ಹಾರೋಹಳ್ಳಿ ಸೇರಿದಂತೆ ಐದು ಸ್ಥಳಗಳನ್ನು ಗುರುತಿಸಲಾಗಿದೆ. ಇಂದು ನಡೆದ ಸಭೆಯಲ್ಲಿ ಮತ್ತೊಂದು ಸ್ಥಳದ ಬಗ್ಗೆಯೂ ಚರ್ಚೆ ನಡೆದಿದೆ. ಎಲ್ಲಾ ಸ್ಥಳಗಳ ಸಾಧಕ-ಬಾಧಕ ಗಮನಿಸಿ ವರದಿ ಕೊಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇನ್ನೊಂದು ವಾರದಲ್ಲಿ ಮತ್ತೊಂದು ಸುತ್ತಿನ ಸಭೆ ಕರೆದು ಅಂತಿಮ ನಿರ್ಧಾರ ಮಾಡಲಾಗುವುದು ಎಂದರು.
ಯಾರ ಹಿತಾಸಕ್ತಿಯೂ ಇಲ್ಲ
ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸ್ಥಳ ಅಂತಿಮಗೊಳಿಸುವಲ್ಲಿ ಯಾರಿಗೂ ರಾಜಕೀಯ ಹಿತಾಸಕ್ತಿಗಳಿಲ್ಲ. ಬೆಂಗಳೂರು ಮಹಾನಗರಕ್ಕೆ ಅನುಕೂಲವಾಗಬೇಕು, ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಬೇಕು ಎನ್ನುವುದು ಮಾತ್ರ ಮುಖ್ಯ. ಅಭಿವೃದ್ಧಿ ವಿಚಾರದಲ್ಲಿ ನಾವು ರಾಜಿ ಮಾಡಿಕೊಳ್ಳುವುದಿಲ್ಲ. ಬೆಂಗಳೂರು ಅಭಿವೃದ್ಧಿಯ ಮತ್ತೊಂದು ಹಂತಕ್ಕೆ ತಲುಪಬೇಕು. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸ್ಥಳಕ್ಕೇನೂ ಕೊರತೆಯಿಲ್ಲ, ಬೆಂಗಳೂರು ನಗರದ ಸುತ್ತಮುತ್ತ ಜಾಗದ ಲಭ್ಯತೆ ಹೆಚ್ಚಾಗಿದೆ. ಎಲ್ಲಾ ರೀತಿಯಿಂದಲೂ ಆಲೋಚಿಸಿ ಸೂಕ್ತ ಸ್ಥಳ ಆಯ್ಕೆ ಮಾಡಲಾಗುವುದು ಎಂದರು.
ಹೆಚ್ಚಾದ ಕುತೂಹಲ
ಸದ್ಯ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಯಾವ ಜಾಗವನ್ನು ಅಂತಿಮಗೊಳಿಸಲಾಗುತ್ತದೆ ಎನ್ನುವ ಕುತೂಹಲ ಹೆಚ್ಚಾಗಿದೆ. ಮೂಲಗಳ ಪ್ರಕಾರ ನೆಲಮಂಗಲ-ಕುಣಿಗಲ್ ಹೆದ್ದಾರಿಯ ನೆಲಮಂಗಲ ಸಮೀಪದ ಜಾಗವನ್ನೇ ಅಂತಿಮಗೊಳಿಸುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗಿದೆ. ರಸ್ತೆ ಸಂಪರ್ಕ ಉತ್ತಮವಾಗಿದ್ದು, ನೆಲಮಂಗಲದವರೆಗೆ ಮೆಟ್ರೋ ಜಾಲ ವಿಸ್ತರಣೆ ಮಾಡುವ ಯೋಜನೆ ಕೂಡ ಇರುವುದರಿಂದ ಇದನ್ನೇ ಪರಿಗಣಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಮತ್ತೊಂದು ಕಡೆ ತುಮಕೂರು ಸಮೀಪ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಬೇಕು ಎಂದು ಗೃಹ ಸಚಿವ ಜಿ. ಪರಮೇಶ್ವರ ಅಭಿಪ್ರಾಯಪಟ್ಟಿದ್ದಾರೆ.












Click it and Unblock the Notifications