Sports City in Bengaluru: 60 ಎಕರೆ ವಿಸ್ತೀರ್ಣದಲ್ಲಿ ತಲೆ ಎತ್ತಲಿದೆ ಸ್ಪೋರ್ಟ್ಸ್ ಸಿಟಿ
ಸಿಲಿಕಾನ್ ಸಿಟಿ, ಸ್ಟಾರ್ಟಪ್ ಕ್ಯಾಪಿಟಲ್, ಹಸಿರು ನಗರಿ, ಉದ್ಯಾನ ನಗರಿ ಎಂದೆಲ್ಲಾ ಹೆಸರು ಪಡೆದಿರುವ ಬೆಂಗಳೂರಿಗೆ ಇದೀಗ ಮತ್ತೊಂದು ಹೆಸರು ಬರುವ ಸೂಚನೆ ಸಿಕ್ಕಿದೆ. ದೇವನಹಳ್ಳಿ ಬಳಿ 60 ಎಕರೆ ವಿಸ್ತೀರ್ಣದಲ್ಲಿ ಕ್ರೀಡಾ ನಗರವನ್ನು ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗುತ್ತಿದ್ದು, ಕ್ರೀಡಾ ನಗರಿ ಎನ್ನುವ ಹೆಸರು ಕೂಡ ಬರಲಿದೆ. ಗೃಹ ಸಚಿವ ಡಾ. ಜಿ ಪರಮೇಶ್ವರ ಕ್ರೀಡಾ ನಗರ ಅಭಿವೃದ್ಧಿ ಬಗ್ಗೆ ಮಾಹಿತಿ ನೀಡಿದ್ದಾರೆ.
ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮದಲ್ಲಿ ಹಾಕಿ ದಿಗ್ಗಜ ಧ್ಯಾನ್ಚಂದ್ ಅವರ ಜನ್ಮ ದಿನಾಚರಣೆ ಹಾಗೂ ರಾಷ್ಟ್ರಾಭಿವೃದ್ಧಿಯಲ್ಲಿ ಕ್ರೀಡೆಯ ಪಾತ್ರವನ್ನು ಸ್ಮರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗೃಹ ಸಚಿವ ಡಾ. ಜಿ ಪರಮೇಶ್ವರ, ಕ್ರೀಡಾ ನಗರಿ ಅಭಿವೃದ್ಧಿ ಬಗ್ಗೆ ಈಗಾಗಲೇ ಯೋಜನೆ ರೂಪಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಇಂದಿನ ಯುವ ಪೀಳಿಗೆಯಲ್ಲಿ ಕ್ರೀಡೆಯನ್ನು ವೃತ್ತಿಜೀವನವನ್ನಾಗಿ ತೆಗೆದುಕೊಳ್ಳುವವರ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಹೇಳಿದರ ಅವರು, ಭಾರತೀಯ ಕ್ರೀಡಾಪಟುಗಳಿಗೆ ಎಲ್ಲಾ ರೀತಿಯ ಸೌಲಭ್ಯ ಸಿಗುತ್ತಿದ್ದರು ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಹೆಚ್ಚು ಪದಕ ಗೆಲ್ಲಲು ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ದಕ್ಷಿಣ ಆಫ್ರಿಕಾ ಸೇರಿದಂತೆ ಹಲವು ದೇಶಗಳಲ್ಲಿ ಕಡಿಮೆ ಸೌಲಭ್ಯ ಇದ್ದರೂ ಒಲಿಂಪಿಕ್ಸ್ನಲ್ಲಿ ಪದಕಗಳನ್ನು ಗೆಲ್ಲುತ್ತಿವೆ ಎಂದು ಅವರು ಹೇಳಿದರು.
ಕ್ರೀಡಾಪಟುಗಳ ಮೂಲಸೌಕರ್ಯದಲ್ಲಿ ಸುಧಾರಣೆಯಾಗಿದೆ ಎಂದು ಹೇಳಿದ ಸಚಿವ ಪರಮೇಶ್ವರ್, ಕಂಠೀರವ ಕ್ರೀಡಾಂಗಣದಲ್ಲಿ ಸಿಂಡರ್ ಟ್ರ್ಯಾಕ್ನಿಂದ ಸಿಂಥೆಟಿಕ್ ಟ್ರ್ಯಾಕ್ಗೆ ಮೇಲ್ದರ್ಜೆಗೇರಿದೆ ಎಂದು ಹೇಳಿದರು. ರಾಜ್ಯದ 18 ಜಿಲ್ಲೆಗಳಲ್ಲಿ ಈಗ ಸಿಂಥೆಟಿಕ್ ಟ್ರ್ಯಾಕ್ ಇರುವ ಕ್ರೀಡಾಂಗಣಗಳನ್ನು ಹೊಂದಿದೆ ಎಂದರು. ಯುವ ಜನತೆ ಮಾದಕ ವ್ಯಸನ ಮತ್ತು ಮದ್ಯದ ಚಟದಿಂದ ದೂರಾಗಲು ಕ್ರೀಡೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕು ಎಂದು ಹೇಳಿದರು. 2036 ರಲ್ಲಿ ಭಾರತ ಒಲಿಂಪಿಕ್ಸ್ ಆಯೋಜನೆ ಮಾಡಲು ಪ್ರಯತ್ನಿಸುತ್ತಿದೆ ಎಂದರು.
ರಾಜ್ಯದ ಕ್ರೀಡಾಪಟುಗಳಿಗೆ ಸನ್ಮಾನ
ಈ ಬಾರಿ ನಡೆದ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತವನ್ನು ಪ್ರತಿನಿಧಿಸಿದ ರಾಜ್ಯದ ಕ್ರೀಡಾಪಟುಗಳನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಸೂಕ್ತ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ದೈಹಿಕ ಶಿಕ್ಷಣ ತಜ್ಞರು ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಿದರು.












Click it and Unblock the Notifications