Bengaluru Tunnel Road Project: ಎಕ್ಸ್ಪ್ರೆಷನ್ ಆಫ್ ಇಂಟರೆಸ್ಟ್ ಅವಧಿ ಆ.17 ರವರೆಗೆ ವಿಸ್ತರಣೆ
ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಟನಲ್ ರಸ್ತೆ, ಮೇಲ್ಸೇತುವೆ ಸೇರಿದಂತೆ ಪರಿಹಾರ ಯೋಜನೆಗಳ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ಇದಕ್ಕಾಗಿ ಬಿಡಿಎ ಹಾಗೂ ಬಿಬಿಎಂಪಿ ಮೂಲಕ ಎಕ್ಸ್ಪ್ರೆಷನ್ ಆಫ್ ಇಂಟರೆಸ್ಟ್ ಅನ್ನು ಕರೆಯಲಾಗಿತ್ತು. ಅದರ ಅವಧಿ ಆಗಸ್ಟ್ 7ರಂದು ಮುಕ್ತಾಯಗೊಂಡಿತ್ತು. ಆದರೆ ಇನ್ನು ಹೆಚ್ಚಿನ ಸಂಸ್ಥೆಗಳು ಇದರಲ್ಲಿ ಭಾಗವಹಿಸಲು ಆಸಕ್ತಿ ತೋರಿರುವ ಹಿನ್ನೆಲೆಯಲ್ಲಿ ಈ ಅವಧಿಯನ್ನು ಆಗಸ್ಟ್ 17 ರವರೆಗೆ ವಿಸ್ತರಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದರು.
ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮೆಟ್ರೋ ಸುರಂಗದಲ್ಲಿ ಕೇವಲ ಒಂದು ಮಾರ್ಗದಲ್ಲಿ ಮಾತ್ರ ಚಲಿಸಬಹುದಾಗಿದೆ. ಹೀಗಾಗಿ ಟನಲ್ ರಸ್ತೆಯಲ್ಲಿ ದ್ವಿಮುಖ ಮಾರ್ಗ ಇರಬೇಕು ಎಂದು ಸಲಹೆ ನೀಡಿದ್ದೇನೆ. ಅನೇಕ ಸಂಸ್ಥೆಗಳು ವಿನ್ಯಾಸ, ಆರ್ಥಿಕ ಸಾಮರ್ಥ್ಯದ ಬಗ್ಗೆ ಚರ್ಚೆ ಮಾಡಲು ಮುಂದೆ ಬಂದಿವೆ ಎಂದು ಹೇಳಿದರು.

ಬ್ರ್ಯಾಂಡ್ ಬೆಂಗಳೂರು ಹಾಗೂ ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆಯನ್ನು ಹೇಗೆ ಬಗೆಹರಿಸಬಹುದು ಎಂಬ ವಿಚಾರವಾಗಿ ಸಾಕಷ್ಟು ಚರ್ಚೆ ಮಾಡಿದ್ದೇವೆ, ಸಾರ್ವಜನಿಕರಿಂದ 70 ಸಾವಿರಕ್ಕೂ ಹೆಚ್ಚು ಸಲಹೆಗಳು ಬಂದಿದ್ದು, ಇನ್ನು ಕೆಲವರ ಜತೆ ಚರ್ಚೆ ಮಾಡಿ ಸಲಹೆ ಪಡೆಯಲಿದ್ದೇನೆ ಎಂದು ಹೇಳಿದರು.
ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಮನವಿ
ಶಾಲಾ ಮಕ್ಕಳಿಂದ, ಹಿರಿಯ ನಾಗರೀಕರು, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದವರಿಂದ ಸಲಹೆಗಳನ್ನು ಪಡೆದಿದ್ದು, ಇವನ್ನು ನಾಲ್ಕೈದು ವಿಭಾಗಗಳಲ್ಲಿ ಪರಿಶೀಲನೆ ಮಾಡಿ ವರದಿ ನೀಡುವ ಜವಾಬ್ದಾರಿಯನ್ನು ಕೆಲವು ಸಂಸ್ಥೆಗಳಿಗೆ ವಹಿಸಲಾಗಿದೆ.
ದೆಹಲಿಯಲ್ಲಿ ಕೇಂದ್ರ ಭೂಸಾರಿಗೆ ಸಚಿವರಾದ ನಿತೀನ್ ಗಡ್ಕರಿ ಅವರನ್ನು ಭೇಟಿ ಮಾಡಿದ್ದೇನೆ. ನೆಲಮಂಗಲ, ಬಳ್ಳಾರಿ, ಕೋಲಾರ, ಹೊಸೂರು, ಮೈಸೂರು ಮಾರ್ಗದ ರಾಷ್ಟ್ರೀಯ ಹೆದ್ದಾರಿಗಳು ಸೇರುವ ಬೆಂಗಳೂರು ನಗರದ ರಸ್ತೆಗಳು ಸಂಚಾರದಟ್ಟಣೆಗೆ ಕಾರಣವಾಗಿವೆ. ಇದರ ಪರಿಹಾರಕ್ಕೆ ಕೇಂದ್ರ ಸರ್ಕಾರ ಕೂಡ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಸಚಿವರಿಗೆ ಮನವಿ ಮಾಡಿದ್ದೇನೆ. ಯೋಜನೆ ರೂಪಿಸಿಕೊಂಡು ಬನ್ನಿ ಎಂದು ಅವರು ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದರು.
ಗುತ್ತಿಗೆದಾರರು ಪತ್ರ ಬರೆಯುವುದರಲ್ಲಿ ತಪ್ಪಿಲ್ಲ
ಗುತ್ತಿಗೆದಾರರು ರಾಜ್ಯಪಾಲರಿಗೆ ಪತ್ರಬರೆದಿರುವುದರಲ್ಲಿ ಯಾವುದೇ ತಪ್ಪಿಲ್ಲ. ಅವರು ರಾಜ್ಯಪಾಲರಿಗಾದರೂ ಪತ್ರ ಬರೆಯಲಿ, ವಿರೋಧ ಪಕ್ಷ ಅಥವಾ ಆಡಳಿತ ಪಕ್ಷದವರನ್ನು ಕೇಳಲಿ. ಅವರಿಗೆ ನೋವಾಗಿದೆ. ಕೇಳುವುದರಲ್ಲಿ ತಪ್ಪಿಲ್ಲ. ನಮಗೆ ಯಾರಿಗೂ ತೊಂದರೆ ನೀಡುವ ಉದ್ದೇಶ ಇಲ್ಲ. ಸರಿಯಾಗಿ ಕೆಲಸ ಮಾಡಿರುವ ಗುತ್ತಿಗೆದಾರರಿಗೆ ಹಣ ಸಿಗಬೇಕು ಎಂಬುದು ನಮ್ಮ ಉದ್ದೇಶ ಎಂದು ಹೇಳಿದರು.
ಕೆಲವು ಗುತ್ತಿಗೆದಾರರು ನಮ್ಮ ಮೇಲೆ ಪ್ರೀತಿ ಅಭಿಮಾನ ತೋರಿಸುತ್ತಿದ್ದಾರೆ. ಅದನ್ನು ಬ್ಲ್ಯಾಕ್ ಮೇಲ್ ಎನ್ನುವುದಿಲ್ಲ. ನಮಗೆ ಅನೇಕ ವರದಿಗಳು ಬಂದಿದ್ದು, ಅವುಗಳ ನೈಜತೆ ಪರಿಶೀಲನೆ ಮಾಡುತ್ತಿದ್ದೇವೆ. ಯಾರು ಸರಿಯಾಗಿ ಕೆಲಸ ಮಾಡಿದ್ದಾರೋ ಅವರಿಗೆ ಹಣ ಕೊಡಲು ನಾವು ಬದ್ಧರಾಗಿದ್ದೇವೆ. ಈ ವಿಚಾರವಾಗಿ ನಾನು ಖಾಲಿ ಮಾತನಾಡುವುದಿಲ್ಲ. ಈ ಬಗ್ಗೆ ಪ್ರತ್ಯೇಕವಾಗಿ ಮಾಧ್ಯಮಗಳ ಮುಂದೆ ದಾಖಲೆಗಳ ಸಮೇತ ಮಾತನಾಡುತ್ತೇನೆ ಎಂದು ತಿಳಿಸಿದರು.












Click it and Unblock the Notifications