ಬೆಂಗಳೂರು ವಿ.ವಿ ನಿವೃತ್ತ ಅಧ್ಯಾಪಕ ಅಶೋಕ್ ಕುಮಾರ್ ಆತ್ಮಹತ್ಯೆಗೆ ಶರಣು
ಬೆಂಗಳೂರು, ನವೆಂಬರ್ 8: ಬೆಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರೊಫೆಸರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಮೈಕೋ ಲೇಔಟ್ ನಲ್ಲಿ ನಡೆದಿದೆ.
ಅಶೋಕ್ ಕುಮಾರ್ ನೇಣಿಗೆ ಶರಣಾದ ನಿವೃತ್ತ ಪ್ರೊಫೆಸರ್ ಆಗಿದ್ದು, ಮೈಕೋ ಲೇಔಟ್ ನ ಕೆಎಎಸ್ ಕಾಲೋನಿಯಲ್ಲಿ ವಾಸವಾಗಿದ್ದರು. ಇವರು ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ಭಾನುವಾರ (ನ.8) ಮೈಕೋ ಲೇಔಟ್ ಠಾಣಾ ವ್ಯಾಪ್ತಿಯ ಸಿಲ್ಕ್ ಬೋರ್ಡ್ ಮನೆಯಲ್ಲಿ ನೇಣು ಬಿಗಿದುಕೊಂಡು ಅತ್ಮಹತ್ಯೆಗೆ ಶರಣಾಗಿದ್ದಾರೆ.
ಮೂಲತಃ ಶಿವಮೊಗ್ಗದವರಾಗಿರುವ ಅಶೋಕ್ ಕುಮಾರ್, ಮೈಸೂರಿನಲ್ಲಿ ವಿದ್ಯಾಭ್ಯಾಸ ಮಾಡಿದ್ದಾರೆ. ನಂತರ ಬೆಂಗಳೂರಿನ ವಿಶ್ವವಿದ್ಯಾಲಯದಲ್ಲಿ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದ ಅಶೋಕ್, ರಾತ್ರಿ ಹನ್ನೆರಡು ಗಂಟೆವರೆಗೂ ಪತ್ನಿ ಜೊತೆಗೆ ಮಾತನಾಡಿದ್ದರು. ಆದರೆ ಬೆಳಗಿನ ಜಾವ 7 ಗಂಟೆಗೆ ಕೊಠಡಿ ಬಾಗಿಲು ತೆರೆದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.

ಮೈಕೋ ಲೇಔಟ್ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿರುವ ಅಶೋಕ್ ಕುಮಾರ್. ""ನನ್ನ ಸಾವಿಗೆ ನಾನೇ ಕಾರಣ'' ಎಂದು ಬರೆದಿದ್ದಾರೆ.
ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೆಂಟ್ ಜಾನ್ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಭಾನುವಾರ ಸಂಜೆ ವೇಳೆ ಬೆಂಗಳೂರಿನಲ್ಲೇ ಅಂತ್ಯಕ್ರಿಯೆ ಮಾಡಲು ನಿರ್ಧಾರ ಮಾಡಲಾಗಿದೆ.

ಅಶೋಕ್ ಕುಮಾರ್ ಅವರಿಗೆ ಅನಾರೋಗ್ಯ, ಹಣಕಾಸಿನ ಯಾವುದೇ ಸಮಸ್ಯೆ ಇರಲಿಲ್ಲ. ಹೀಗಾಗಿ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಗಳಿವೆ ಎಂದು ಪೊಲೀಸ್ ಮೂಲಗಳಿಂದ ಅಂದಾಜಿಸಲಾಗಿದೆ. ಈ ಸಂಬಂಧ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications