ಬೆಂಗಳೂರು ಗಲಭೆ; 309 ಜನರ ಬಂಧನ, 52 ಎಫ್ಐಆರ್
ಬೆಂಗಳೂರು, ಆಗಸ್ಟ್ 17 : ಬೆಂಗಳೂರು ನಗರದಲ್ಲಿ ಮಂಗಳವಾರ ರಾತ್ರಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 309 ಜನರನ್ನು ಇದುವರೆಗೂ ಬಂಧಿಸಲಾಗಿದೆ. 52 ಎಫ್ಐಆರ್ ದಾಖಲು ಮಾಡಲಾಗಿದೆ.
Recommended Video
ಗಲಭೆ ನಡೆದ ಕಾವಲ್ ಭೈರಸಂದ್ರ, ಡಿ. ಜೆ. ಹಳ್ಳಿ, ಕೆ. ಜಿ. ಹಳ್ಳಿ ಪ್ರದೇಶಗಳಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಬೆಂಗಳೂರು ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 18ರ ತನಕ ನಿಷೇಧಾಜ್ಞೆಯನ್ನು ಮುಂದುವರೆಸಿ ಆದೇಶ ಹೊರಡಿಸಿದ್ದಾರೆ.
ಆಗಸ್ಟ್ 11ರಂದು ನಡೆದ ಗಲಭೆಗೆ ಸಂಬಂಧಿಸಿದಂತೆ ಭಾನುವಾರ ರಾತ್ರಿ ತನಕ 309 ಆರೋಪಿಗಳನ್ನು ಬಂಧಿಸಲಾಗಿದೆ. ಸಿಸಿಬಿ ಮತ್ತು ಬೆಂಗಳೂರು ಪೊಲೀಸರು ಜಂಟಿಯಾಗಿ ತನಿಖೆ ನಡೆಸುತ್ತಿದ್ದಾರೆ.

ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ 5 ಎಫ್ಐಆರ್ ದಾಖಲು ಮಾಡಲಾಗಿದೆ. ಇದುವರೆಗೂ ಒಟ್ಟು 52 ಎಫ್ಐಆರ್ ದಾಖಲಾಗಿದ್ದು, 38 ಎಫ್ಐಆರ್ ಡಿ. ಜೆ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಯೇ ದಾಖಲಾಗಿದೆ.
ಪ್ರಕರಣದ ತನಿಖೆ ಮುಂದುವರೆದಂತೆ ಬಂಧಿತರ ಸಂಖ್ಯೆ ಹೆಚ್ಚಾಗಲಿದೆ ಎಂದು ಪೊಲೀಸರು ಹೇಳಿದ್ದಾರೆ. ಪ್ರಾಥಮಿಕ ಮಾಹಿತಿ ಅನ್ವಯ ಬಂಧನ ಮಾಡಲಾಗುತ್ತಿದೆ. ಅವರ ಪಾತ್ರ ಇಲ್ಲ ಎಂದು ತಿಳಿದರೆ ಬಿಡುಗಡೆ ಮಾಡಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
6 ಸೈಬರ್ ಕ್ರೈಂ ಪೊಲೀಸ್ ತಂಡ ಮತ್ತು ವಿಧಿ ವಿಜ್ಞಾನ ಪ್ರಯೋಗಾಲಯದ ತಂಡ ಸಹ ತನಿಖೆಗೆ ಕೈ ಜೋಡಿಸಿದೆ. ಮೊಬೈಲ್ ಕರೆಗಳ ಮಾಹಿತಿ, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಡಿಜಿಟಲ್ ಸಾಕ್ಷಿಗಳ ಆಧಾರದ ಮೇಲೆಯೂ ಕೆಲವರನ್ನು ಬಂಧಿಸಲಾಗಿದೆ.
ಬೆಂಗಳೂರಿನ ಪುಲಿಕೇಶಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸೋದರಳಿಯ ನವೀನ್ ಒಂದು ಸಮುದಾಯದ ವಿರುದ್ಧ ಫೇಸ್ ಬುಕ್ ಪೋಸ್ಟ್ ಹಾಕಿದ್ದಾರೆ ಎಂದು ಆರೋಪಿಸಿ ಆರಂಭವಾದ ಗಲಭೆ ತೀವ್ರ ಸ್ವರೂಪ ಪಡೆದುಕೊಂಡಿತ್ತು.












Click it and Unblock the Notifications