ಆಗಸ್ಟ್.15ರವರೆಗೂ ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿಯಲ್ಲಿ ನಿಷೇಧಾಜ್ಞೆ
ಬೆಂಗಳೂರು, ಆಗಸ್ಟ್.13: ಬೆಂಗಳೂರಿನ ಕಾಡುಗೊಂಡನಹಳ್ಳಿ (ಕೆ.ಜಿ.ಹಳ್ಳಿ) ಮತ್ತು ದೇವರ ಜೀವನಹಳ್ಳಿ(ಡಿ.ಜೆ.ಹಳ್ಳಿ)ಯಲ್ಲಿ ನಡೆದ ದಾಂಧಲೆ ಹಿನ್ನೆಲೆ ಎರಡೂ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಬೆಂಗಳೂರಿನ ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿಯಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಗಸ್ಟ್.15ರ ಬೆಳಗ್ಗೆ 6 ಗಂಟೆವರೆಗೂ ನಿಷೇಧಾಜ್ಞೆ ಮುಂದುವರಿಸುವ ಬಗ್ಗೆ ನಗರ ಪೊಲೀಸ್ ಮಹಾನಿರ್ದೇಶಕ ಕಮಲ್ ಪಂತ್ ಆದೇಶಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂಸಾಚಾರ: ನಗರದಾದ್ಯಂತ 24 ಗಂಟೆ ನಿಷೇಧಾಜ್ಞೆ ಜಾರಿ
ಬೆಂಗಳೂರಿನಲ್ಲಿ ನಡೆದ ಹಿಂಸಾಚಾರದ ತನಿಖೆಯನ್ನು ಜಿಲ್ಲಾ ಮ್ಯಾಜಿಸ್ಟ್ರೇಟರ್ ನೇತೃತ್ವದ ತಂಡ ನಡೆಸಲಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಹಿರಿಯ ಅಧಿಕಾರಿಗಳ ಜೊತೆಗೆ ನಡೆಸಿದ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿಯಲ್ಲಿ ನಿಷೇಧಾಜ್ಞೆ:
1. ಯಾವುದೇ ವ್ಯಕ್ತಿಗಳು ಸಾರ್ವಜನಿಕರಿಗೆ ಧಕ್ಕೆ ಉಂಟಾಗುವಂತೆ ಯಾವುದೇ ಕೃತ್ಯದಲ್ಲಿ ತೊಡಗುವಂತಿಲ್ಲ
2. ಎರಡಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ, ಅನಗತ್ಯವಾಗಿ ಸಂಚರಿಸುವಂತಿಲ್ಲ
3. ಮೆರವಣಿಗೆ ಮತ್ತು ಸಭೆಗಳನ್ನು ನಡೆಸುವುದನ್ನು ನಿರ್ಬಂಧಿಸಲಾಗಿದೆ
4. ಶಸ್ತ್ರಗಳನ್ನು, ದೊಣ್ಣೆಗಳನ್ನು, ಕತ್ತಿಗಳು, ಈಟಿಗಳು, ಗದೆಗಳು, ಕಲ್ಲು, ಇಟ್ಟಿಗೆ, ಚಾಕು ಇನ್ನೂ ಮುಂತಾದ ಮಾರಕಾಸ್ತ್ರಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ
5. ಯಾವುದೇ ಸ್ಫೋಟಕ ವಸ್ತುಗಳನ್ನು ಸಿಡಿಸುವುದು, ಕಲ್ಲುಗಳನ್ನು ಕ್ಷಿಪಣಿಗಳನ್ನು ಎಸೆಯುವ ಸಾಧನಗಳು ಅಥವಾ ಉಪಕರಣಗಳ ಒಯ್ಯುವಿಕೆಯನ್ನು ಮತ್ತು ಶೇಖರಿಸುವುದನ್ನು ನಿಷೇಧಿಸಲಾಗಿದೆ
6. ವ್ಯಕ್ತಿಗಳ ಅಥವಾ ಅವರ ಶವಗಳ ಪ್ರತಿಕೃತಿಗಳ ಪ್ರದರ್ಶನ ಮಾಡುವುದನ್ನು, ಪ್ರಚೋದಿಸಬಹುದಾದ ಬಹಿರಂಗ ಘೋಷಣೆಗಳನ್ನು ಕೂಗುವುದು. ಸಂಜ್ಞೆ ಮಾಡುವುದು, ಹಾಡುವುದು, ಸಂಗೀತ ನುಡಿಸುವುದು, ಚಿತ್ರಗಳನ್ನು ಸಂಕೇತಗಳನ್ನು ಭಿತ್ತಿಪತ್ರ ಅಥವಾ ಪದಾರ್ಥಗಳನ್ನು ಪ್ರದರ್ಶಿಸುವುದನ್ನು ನಿಷೇಧಿಸಲಾಗಿದೆ