Bengaluru Waste: ಬೆಂಗಳೂರಿನಲ್ಲಿ ಕಸ ನಿವರ್ಹಣೆಯಲ್ಲಿ ಮಹತ್ವದ ಬದಲಾವಣೆ: ಹೋಟೆಲ್ - ವಾಣಿಜ್ಯ ಉದ್ದಿಮೆಗಳಿಗೆ ಎಚ್ಚರಿಕೆ
ಬೆಂಗಳೂರು: ಬೆಂಗಳೂರಿನಲ್ಲಿ ಕಸ ನಿರ್ವಹಣೆಗೆ ಸಂಬಂಧಿಸಿದಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಮಹತ್ವದ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಪಾಲಿಕೆಯ ವ್ಯಾಪ್ತಿಯಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಅದರಲ್ಲಿ ಮುಖ್ಯವಾಗಿ ಬೆಂಗಳೂರಿನ ವಾಣಿಜ್ಯ ಉದ್ದಿಮೆಗಳು ಹಾಗೂ ಹೋಟೆಲ್ಗಳ ಮಾಲೀಕರಿಗೆ ಮಹತ್ವದ ನಿರ್ದೇಶನ ನೀಡಲಾಗಿದೆ. ಅಲ್ಲದೆ ಕಸ ನಿರ್ವಹಣೆಯಲ್ಲಿ ಲೋಪವೆಸಗಿದರೆ ದಂಡ ವಿಧಿಸುವ ಎಚ್ಚರಿಕೆಯನ್ನೂ ನೀಡಲಾಗಿದೆ.
ಘನತ್ಯಾಜ್ಯ ನಿರ್ವಹಣೆಯಲ್ಲಿ ಆರೋಗ್ಯ ಮೇಲ್ವಿಚಾರಕರು ಮತ್ತು ಹಿರಿಯ ಆರೋಗ್ಯ ಪರಿವೀಕ್ಷಕರಿಗೆ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಿರ್ವಹಿಸುವ ಉದ್ದೇಶದಿಂದ ಸಾರ್ವಜನಿಕ ಆರೋಗ್ಯ ವಿಭಾಗದ ಆರೋಗ್ಯ ಮೇಲ್ವಿಚಾರಕರು ಹಾಗೂ ಹಿರಿಯ ಆರೋಗ್ಯ ಪರಿವೀಕ್ಷಕರಿಗೆ ಹೆಚ್ಚುವರಿ ಜವಾಬ್ದಾರಿಗಳನ್ನು ನೀಡಲಾಗಿದೆ.

ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಅವರು ಪ್ರತ್ಯೇಕ ಕಚೇರಿ ಆದೇಶ ಹೊರಡಿಸಿ, ನಗರ ಪಾಲಿಕೆಯ ವಲಯ-1 ಮತ್ತು ವಲಯ-2 ವ್ಯಾಪ್ತಿಯ ಎಲ್ಲಾ ಆರೋಗ್ಯ ಮೇಲ್ವಿಚಾರಕರು ಹಾಗೂ ಹಿರಿಯ ಆರೋಗ್ಯ ಪರಿವೀಕ್ಷಕರು ತಕ್ಷಣದಿಂದಲೇ ಹೊಸ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಿದ್ದಾರೆ.
Bengaluru Waste: ಹೋಟೆಲ್ - ವಾಣಿಜ್ಯ ಉದ್ದಿಮೆಗಳಿಗೆ ಎಚ್ಚರಿಕೆ
ಪ್ರತಿದಿನ ಬೆಳಿಗ್ಗೆ ವಾಣಿಜ್ಯ ಉದ್ದಿಮೆಗಳು, ಅಂಗಡಿ ಮುಂಗಟ್ಟುಗಳು ಹಾಗೂ ಬೃಹತ್ ತ್ಯಾಜ್ಯ ಉತ್ಪಾದಕರ ಸ್ಥಳಗಳಿಗೆ ಭೇಟಿ ನೀಡಿ, ತ್ಯಾಜ್ಯವನ್ನು ಸಮರ್ಪಕವಾಗಿ ವಿಂಗಡಿಸಿ, ನಿಯಮಾನುಸಾರ ವಿಲೇವಾರಿ ಮಾಡುತ್ತಿರುವುದರ ಬಗ್ಗೆ ಖಚಿತಪಡಿಸಿಕೊಳ್ಳಲು ಸೂಚಿಸಲಾಗಿದೆ. ನಿಯಮ ಉಲ್ಲಂಘನೆ ಕಂಡುಬಂದಲ್ಲಿ ನೋಟಿಸ್ ಜಾರಿ ಮಾಡಿ ದಂಡ ವಿಧಿಸುವಂತೆ ನಿರ್ದೇಶಿಸಲಾಗಿದೆ.
ಮುಂದುವರಿದು ರಸ್ತೆ ಬದಿ, ಫುಟ್ಪಾತ್ ಹಾಗೂ ಖಾಲಿ ನಿವೇಶನಗಳಲ್ಲಿ ಕಸ ಎಸೆಯುವ ಹೋಟೆಲ್ಗಳು, ಖಾನಾವಳಿಗಳು, ಚಾಟ್ಸ್ ಗಾಡಿಗಳು ಹಾಗೂ ಇತರೆ ವ್ಯಾಪಾರಸ್ಥರನ್ನು ಗುರುತಿಸಿ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಮಾರ್ಷಲ್ಗಳು ಹಾಗೂ ಕಿರಿಯ ಆರೋಗ್ಯ ಪರಿವೀಕ್ಷಕರ ಸಹಯೋಗದೊಂದಿಗೆ ದಂಡ ವಿಧಿಸಿ ಸಾರ್ವಜನಿಕರಲ್ಲಿ ತ್ಯಾಜ್ಯ ವಿಂಗಡಣೆ ಬಗ್ಗೆ ಅರಿವು ಮೂಡಿಸಲು ತಿಳಿಸಲಾಗಿದೆ.
"Own Your Footpath" ಪರಿಕಲ್ಪನೆಯಡಿ ಎಲ್ಲಾ ವಾಣಿಜ್ಯ ಸಂಸ್ಥೆಗಳು ತಮ್ಮ ಅಂಗಡಿ ಮುಂಭಾಗದ ಪಾದಚಾರಿ ಮಾರ್ಗವನ್ನು ಸ್ವಚ್ಛವಾಗಿ ನಿರ್ವಹಿಸುವುದು, ಅತಿಕ್ರಮಣ ಮಾಡದಿರುವುದು ಹಾಗೂ ಇತರರಿಂದಲೂ ಅತಿಕ್ರಮಣವಾಗದಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಹೊರುವಂತೆ ತಿಳಿಸಲಾಗಿದೆ.
ಇದಲ್ಲದೆ, ಬೃಹತ್ ತ್ಯಾಜ್ಯ ಉತ್ಪಾದಕರು (bulk geberators)empanelled ವಾಹನಗಳಲ್ಲಿ ತ್ಯಾಜ್ಯ ವಿಲೇವಾರಿ ಮಾಡದೇ ಪಾಲಿಕೆಯ ಮನೆ ಮನೆ ಕಸ ಸಂಗ್ರಹಣೆ ವಾಹನಗಳನ್ನು (door to door collection vehicles) ದುರುಪಯೋಗಪಡಿಸಿಕೊಂಡು ನಿಯಮಬಾಹಿರವಾಗಿ ತ್ಯಾಜ್ಯ ವಿಲೇವಾರಿ ಮಾಡುತ್ತಿರುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಹಾಗೂ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಪ್ರತಿ ವಾರ ಕ್ಷೇತ್ರಮಟ್ಟದಲ್ಲಿ ಕಾರ್ಯಕ್ಷಮತೆ ಪರಿಶೀಲನೆ ನಡೆಸಿ ವರದಿ ಸಲ್ಲಿಸಲು ಆರೋಗ್ಯಾಧಿಕಾರಿಗಳಿಗೆ ಸೂಚಿಸಲಾಗಿದ್ದು, ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಉತ್ತರ ನಗರ ಪಾಲಿಕೆಯು ಪ್ರಕಟಣೆಯಲ್ಲಿ ತಿಳಿಸಿದೆ.












Click it and Unblock the Notifications