Bengaluru's Second Airport Updates: ಬಿಡದಿ - ಶಿರಾದಲ್ಲಿ ವಿಮಾನ ನಿಲ್ದಾಣ: ಡಿ.ಕೆ ಶಿವಕುಮಾರ್ ಹೇಳಿದ್ದೇನು ?
Bengaluru's Second Airport Updates: ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರಲ್ಲೇ ಪೈಪೋಟಿ ನಡೆದಿದೆ. ಇದರಲ್ಲಿ ಮುಖ್ಯವಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹಾಗೂ ಗೃಹ ಸಚಿವ ಜಿ. ಪರಮೇಶ್ವರ್ ಅವರ ನಡುವೆ ಮುಸುಕಿನ ಗುದ್ದಾಟ ನಡೆದಿದೆ. ಇದರ ನಡುವೆ ಪ್ರಭಾವಿ ಶಾಸಕ ಟಿ.ಬಿ ಜಯಚಂದ್ರ ಅವರು ಸೇರಿದಂತೆ ಒಟ್ಟು 34 ಜನ ಶಾಸಕರು ಶಿರಾದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪ್ರಯತ್ನಿಸುತ್ತಿದ್ದಾರೆ. ಈ ರೀತಿ ಇರುವಾಗಲೇ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟಿದ್ದಾರೆ.
ವಿಮಾನ ನಿಲ್ದಾಣ ನಿರ್ಮಾಣದ ವಿಚಾರದಲ್ಲಿ ಲಾಬಿ ನಡೆದಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕರ್ನಾಟಕದ ಯಾವುದೇ ಭಾಗಕ್ಕೆ ಬಂದರೂ ಭರ್ಜರಿ ಲಾಭವೇ ಆಗಲಿದೆ. ಹೀಗಾಗಿ, ಲೆಕ್ಕಾಚಾರಗಳು ಜೋರಾಗಿವೆ. ಇನ್ನು ವಿಮಾನ ನಿಲ್ದಾಣದ ವಿಚಾರವಾಗಿ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದೇನು ಅಂತ ನೋಡೋಣ.

ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆ ಭಾರೀ ದೊಡ್ಡ ಮಟ್ಟದ ಚರ್ಚೆಗಳು ನಡೆದಿವೆ. ಈಗಾಗಲೇ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ತಂಡದ ಸದಸ್ಯರು ಬಂದು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಶಾರ್ಟ್ ಲಿಸ್ಟ್ ಮಾಡಿರುವ ಜಾಗಗಳನ್ನು ಪರಿಶೀಲನೆ ಮಾಡಿದ್ದಾರೆ. ಈ ರೀತಿ ಇರುವಾಗಲೇ ಜಿ ಪರಮೇಶ್ವರ್ ಹಾಗೂ ಡಿ.ಕೆ ಶಿವಕುಮಾರ್ ಅವರ ನಡುವೆ ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ವಿಚಾರವಾಗಿ ಲಾಬಿ ನಡೆದಿರುವುದು ಬಹಿರಂಗವಾಗಿದೆ. ಇಬ್ಬರೂ ನಾಯಕರು ನೀಡುತ್ತಿರುವ ಹೇಳಿಕೆಗಳಿಂದಲೇ ಇದು ಬಹಿರಂಗವಾಗಿದೆ. ಈಚೆಗೆ ಜಿ.ಪರಮೇಶ್ವರ್ ಅವರು, ವಿಮಾನ ನಿಲ್ದಾಣ ನಿರ್ಮಾಣಕ್ಕೆ ಬಿಡದಿಯಲ್ಲಿ ಅಷ್ಟೊಂದು ಜಾಗ ಎಲ್ಲಿದೆ ಪ್ರಶ್ನೆ ಮಾಡಿದ್ದರು. ಇದೀಗ ಡಿ.ಕೆ ಶಿವಕುಮಾರ್ ಅವರು ಪರೋಕ್ಷವಾಗಿ ತಿರುಗೇಟು ಕೊಟ್ಟಿದ್ದಾರೆ.

ಬೆಂಗಳೂರು ಎರಡನೇ ವಿಮಾನ ನಿಲ್ದಾಣ: ಡಿ.ಕೆ ಶಿವಕುಮಾರ್ ಹೇಳಿದ್ದೇನು ?
ಇನ್ನು ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮಾತನಾಡಿದ್ದಾರೆ. ವಿಮಾನ ನಿಲ್ದಾಣ ನಿರ್ಮಾಣದ ಜಾಗದ ವಿಚಾರದಲ್ಲಿ ಡಿ.ಕೆ ಶಿವಕುಮಾರ್ ಅವರ ಪ್ರಭಾವ ಹೆಚ್ಚಾಗಿದೆ ಎನ್ನುವ ಆರೋಪವು ವಿಮಾನ ನಿಲ್ದಾಣದ ಜಾಗ ಆಯ್ಕೆ ಪ್ರಕ್ರಿಯೆ ಅಥವಾ ಜಾಗಗಳನ್ನು ಶಾರ್ಟ್ಲಿಸ್ಟ್ ಮಾಡುವುದಕ್ಕಿಂತ ಮುಂಚಿನಿಂದಲೂ ಇದೆ.
ಇದೀಗ ಈ ವಿಷಯಗಳ ಬಗ್ಗೆ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಮುಕ್ತವಾಗಿಯೇ ಮಾತನಾಡಿದ್ದಾರೆ. ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಗ್ಗೆ ನನಗೆ ಏನೂ ಗೊತ್ತಿಲ್ಲ ಅಂತ ಅವರು ಜಾರಿಕೊಂಡಿದ್ದಾರೆ. ಆದರೆ, ಮುಂದುರಿದು ಚಾಮರಾಜನಗರ, ಬೀದರ್ ಸೇರಿದಂತೆ ಎಲ್ಲವೂ ನಮಗೆ ಒಂದೇ. ಯಾವ ಶಿರಾ ಇಲ್ಲ ಬಿಡದಿನೂ ಗೊತ್ತಿಲ್ಲ. ನಮಗೆ ಅಖಂಡ ಕರ್ನಾಟಕ ಮುಖ್ಯ ಅಂತ ಅವರು ಹೇಳಿದ್ದಾರೆ.












Click it and Unblock the Notifications