ವಿದ್ಯುತ್ ಕಳ್ಳತನ ಪ್ರಕರಣ: ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಪ್ರಕರಣ ದಾಖಲಿಸಿದ ಬೆಸ್ಕಾಂ
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ದೀಪಾವಳಿ ಸಂದರ್ಭದಲ್ಲಿ ತಮ್ಮ ನಿವಾಸಕ್ಕೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದುಕೊಂಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದ ಹಿನ್ನೆಲೆಯಲ್ಲಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಮಂಗಳವಾರ ಅವರ ವಿರುದ್ಧ ಪ್ರಕರಣ ದಾಖಲಿಸಿದೆ.
ಕುಮಾರಸ್ವಾಮಿ ವಿರುದ್ಧ ಬೆಸ್ಕಾಂನ ಜಾಗೃತ ದಳ ವಿಭಾಗವು ಅದರ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದೆ. ಭಾರತೀಯ ವಿದ್ಯುತ್ ಕಾಯಿದೆಯ (ವಿದ್ಯುತ್ ಕಳ್ಳತನ) ಸೆಕ್ಷನ್ 135 ರ ಅಡಿಯಲ್ಲಿ ಹಚ್.ಡಿ. ಕುಮಾರಸ್ವಾಮಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

"ವಿಶ್ವದ ಏಕೈಕ ಪ್ರಾಮಾಣಿಕ ವ್ಯಕ್ತಿ ಹೆಚ್.ಡಿ. ಕುಮಾರಸ್ವಾಮಿ ಅವರ ಜೆಪಿ ನಗರದ ನಿವಾಸವನ್ನು ವಿದ್ಯುತ್ ಕಂಬದಿಂದ ನೇರವಾಗಿ ಅಕ್ರಮ ವಿದ್ಯುತ್ ಸಂಪರ್ಕ ಪಡೆದು ಅಲಂಕಾರಿಕ ದೀಪಗಳನ್ನು ಬೆಳಗಿಸಲಾಗಿದೆ. ಮಾಜಿ ಸಿಎಂಗೆ ವಿದ್ಯುತ್ ಕದಿಯಲು ಇಂತಹ ಬಡತನ ಬಡಿದಿರುವುದು ದುರಂತ!" ಎಂದು ಕಾಂಗ್ರೆಸ್ ಹೆಚ್ಡಿಕೆ ವಿರುದ್ಧ ಕಿಡಿ ಕಾರಿತ್ತು.
ಮತ್ತೊಂದು ಹಂತಕ್ಕೆ 'ಪವರ್' ಪಾಲಿಟಿಕ್ಸ್
ಕಾಂಗ್ರೆಸ್ ಟೀಕೆಗೆ ಪ್ರತಿಕ್ರಿಯೆ ನೀಡಿದ್ದ ಹೆಚ್.ಡಿ. ಕುಮಾರಸ್ವಾಮಿ ದಂಡ ಕಟ್ಟಲು ಸಿದ್ಧ ಎಂದು ಹೇಳಿದ್ದರು. ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿಯ ತೋಟದಲ್ಲಿದ್ದೆ. ನಿನ್ನೆ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ತಕ್ಷಣ ಅದನ್ನು ತೆಗೆಸಿ ಮನೆಯ ಮೀಟರ್ ಬೋರ್ಡ್ ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮಾಡಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದರು.
ಅಚಾತುರ್ಯಕ್ಕೆ ನನ್ನ ವಿಷಾದವಿದೆ. ಬೆಸ್ಕಾಂ ಅಧಿಕಾರಿಗಳು ಬಂದು ಪರೀಕ್ಷೆ ಮಾಡಿ ನೋಟಿಸ್ ನೀಡಲಿ. ದಂಡ ಕಟ್ಟುತ್ತೇನೆ. ಇದನ್ನೇ ಕರ್ನಾಟಕ ಕಾಂಗ್ರೆಸ್ ದೊಡ್ಡದು ಮಾಡಿ ಪ್ರಚಾರ ಗಿಟ್ಟಿಸುವ ಕೆಲಸ ಮಾಡುತ್ತಿದೆ. ನಾನೇನು ರಾಜ್ಯದ ಆಸ್ತಿ ಕಬಳಿಸಿಲ್ಲ. ಕಂಡವರ ಭೂಮಿಗೆ ಬೇಲಿ ಹಾಕಿಲ್ಲ. ಇನ್ನೊಬ್ಬರ ರಕ್ತ ಕುಡಿದು ಧನದಾಹ ತೀರಿಸಿಕೊಂಡಿಲ್ಲ. ಮನೆಯಲ್ಲೇ ಇದ್ದೇನೆ, ಬೆಸ್ಕಾಂ ಅಧಿಕಾರಿಗಳು ಬರಲಿ. ಅವರ ಯಾವುದೇ ಕ್ರಮಕ್ಕೆ ನಾನು ಸಿದ್ಧನಿದ್ದೇನೆ ಎಂದು ಹೇಳಿದ್ದರು.
ಅಪರಾಧ ಸಾಬೀತಾದ್ರೆ ಏನಾಗುತ್ತೆ?
2003 ರ ವಿದ್ಯುತ್ ಕಾಯಿದೆ 135 ಪ್ರಕಾರ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆಯುವುದು, ಎಲೆಕ್ಟ್ರಿಕ್ ಲೈನ್ಗಳು ಮತ್ತು ಸಾಮಗ್ರಿಗಳ ಕಳ್ಳತನ ಮಾಡುವುದು ಗಂಭೀರವಾದ ಅಪರಾಧವಾಗಿದ್ದು, ಮೂರು ವರ್ಷಗಳವರೆಗೆ ವಿಸ್ತರಿಸಬಹುದಾದ ಅವಧಿಯ ಜೈಲು ಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ ವಿಧಿಸಬಹುದು ಎಂದು ಹೇಳಿದೆ.












Click it and Unblock the Notifications