ಬೆಂಗಳೂರಿನ ನಾಲ್ಕೂ ದಿಕ್ಕಿನಲ್ಲಿ ರೈತ ಸಂಘಟನೆಗಳಿಂದ ಪ್ರತಿಭಟನೆ ಆರಂಭ
ಬೆಂಗಳೂರು, ಸೆ. 27: ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿರುವ 'ಭಾರತ ಬಂದ್' ಗೆ ರಾಜಧಾನಿ ಬೆಂಗಳೂರಿನಲ್ಲಿ ನಿರೀಕ್ಷಿತ ಬೆಂಬಲ ಸಿಕ್ಕಿಲ್ಲ. ಕೆಲವು ರೈತ ಪರ ಸಂಘಟನೆಗಳು ಬೆಳಗ್ಗೆ ಪ್ರತಿಭಟನೆ ನಡೆಸಿದ್ದಾರೆ. ಮೌರ್ಯ ವೃತ್ತ, ಕೆ.ಆರ್. ಪುರಂ ಸೇರಿದಂತೆ ನಗರದಲ್ಲಿ ಹಲವಡೆ ಪ್ರತಿಭಟನೆ ಅರಂಭವಾಗಿದೆ. ವಾಹನ ಸಂಚಾರ ಎಂದಿನಂತೆ ಮಂದುವರೆದಿದೆ. ದಿನದ ಚಟುವಟಿಕೆಗಳಿಗೆ ಯಾವುದೇ ಅಡೆ ತಡೆಯಾಗಿಲ್ಲ. ಬೆಂಗಳೂರಿನಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಈ ಕುರಿತ ಬೆಂಗಳೂರಿನಲ್ಲಿ ಎಲ್ಲೆಲ್ಲಿ ಏನು ನಡೆಯಿತು ಎಂಬ ವಿವರ ಇಲ್ಲಿದೆ.
ಕೆ.ಆರ್. ಪುರಂನಲ್ಲಿ ಮೆರವಣಿಗೆ: ಕೆ.ಆರ್. ಪುರಂ ಬಿಬಿಎಂಪಿ ಕಚೇರಿ ಎದುರು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಪ್ರತಿಭಟನೆ ಆರಂಭವಾಗಿದೆ. ರೈತ ಸಂಘಟನೆಗಳು, ಮಹಿಳಾ ಸಂಘಟನೆಗಳ ಕಾರ್ಯಕರ್ತರು ಬಿಬಿಎಂಪಿ ಕಚೇರಿಯ ರಸ್ತೆಯಲ್ಲಿ ಕೂತು ಪ್ರತಿಭಟನೆ ನಡೆಸಿದರು. ಇದರಿಂದ ಹಳೇ ಮದ್ರಾಸು ರಸ್ತೆಯಲ್ಲಿ ಸಂಚರಿಸುವ ವಾಹನಗಳು ಸಾಲುಗಟ್ಟಿ ನಿಂತಿದ್ದು ಟ್ರಾಫಿಕ್ ಜಾಮ್ ಅಗಿದೆ. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್, ಕೇಂದ್ರ ಸರ್ಕಾರದ ಸ್ವಾಮ್ಯದಲ್ಲಿರುವ ಎಲ್ಲಾ ಉದ್ಯಮಗಳನ್ನು ಖಾಸಗೀಕರಣ ಮಾಡಲಾಗುತ್ತಿದೆ. ಕೃಷಿ ಕಾಯ್ದೆಗಳಲ್ಲಿ ರೈತರಿಗೆ ತೊಂದರೆ ಇದೆ. ಕೇಂದ್ರ ಸರ್ಕಾರ ತನ್ನ ದುರಾಳ ನೀತಿಯಿಂದ ಹೊರ ಬಂದಿಲ್ಲ. ಕೇವಲ ಅದಾನಿ, ಅಂಬಾನಿ ಕಂಪನಿಗಳಿಗೆ ಅನುಕೂಲ ಮಾಡಿಕೊಡುತ್ತಿದೆ. ರೈತರ ಜೀವನಕ್ಕೆ ಮುಳುವಾಗಿರುವ ಕಾಯ್ದೆಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲಾಗಿದೆ. ಕೃಷಿ ಕಾಯ್ದೆಗಳನ್ನು ವಾಪಸು ಪಡೆಯಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆ ಬಳಿಕ ಬೈಕ್ ಗಳಲ್ಲಿ ಮೆರವಣಿಗೆ ತೆರಳಿದೆ.
ಶಿವಾಜಿನಗರದಲ್ಲಿ ನೀರಸ ಪ್ರತಿಕ್ರಿಯೆ:
ರಾಜಧಾನಿ ಕೇಂದ್ರ ಭಾಗದಲ್ಲಿರುವ ಶಿವಾಜಿನಗರದಲ್ಲಿ ಭಾರತ್ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಬಸ್ ನಿಲ್ದಾಣದಲ್ಲಿ ಎಂದಿನಂತೆ ಬಸ್ ಗಳು ಸಂಚರಿಸುತ್ತಿವೆ. ಸೋಮವಾರ ಆಗಿರುವ ಕಾರಣ ಸಾವಿರಾರು ಪ್ರಯಾಣಿಕರು ಎಂದಿನಂತೆ ಸಂಚರಿಸುತ್ತಿದ್ದಾರೆ. ಬಸ್ ನಿಲ್ದಾಣದಲ್ಲಿ ಯಾವುದೇ ಪ್ರತಿಭಟನೆಗೆ ಅವಕಾಶ ಕೊಡದೇ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ನಿಯಮ ಉಲ್ಲಂಘನೆ ಮಾಡಿ ಪ್ರತಿಭಟನೆ ಮಾಡುವರನ್ನು ಬಂಧಿಸುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಟೌನ್ ಹಾಲ್ ನಿಂದ ಸ್ವಾತಂತ್ರ್ಯ ಉದ್ಯಾನದ ವರೆಗೆ ರ್ಯಾಲಿ:
ಬೆಂಗಳೂರಿನ ಗೊರಗುಂಟೆಪಾಳ್ಯ, ಕೆ.ಆರ್. ಪುರಂ ಸೇರಿದಂತೆ ವಿವಿಧ ಕಡೆ ಪ್ರತಿಭಟನೆ ಆರಂಭವಾಗಿದೆ. ನಗರದ ಟೌನ್ ಹಾಲ್ ನಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳು ಜಮಾವಣೆಯಾಗಲಿದ್ದು, ಸ್ವಾತಂತ್ರ್ಯ ಉದ್ಯಾನವನದ ವರೆಗೂ ರೈತರು ಮೆರವಣಿಗೆ ನಡೆಸಲಿದ್ದಾರೆ. ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಟೌನ್ ಹಾಲ್ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಪ್ರತಿಭಟನಾ ಮೆರವಣಿಗೆ ಹಿನ್ನೆಲೆಯಲ್ಲಿ ಕೆ.ಜಿ. ರಸ್ತೆಯ ಸಂಚಾರ ಮಾರ್ಗದಲ್ಲಿ ಸಂಚಾರ ವ್ಯತ್ಯಯವಾಗಲಿದೆ.
ಗೊರಗುಂಟೆಪಾಳ್ಯದಲ್ಲಿ ಹೋರಾಟ :
ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಗಿರೀಶ್ ಗೌಡ ನೇತೃತ್ವದಲ್ಲಿ ಐದಕ್ಕೂ ಹೆಚ್ಚು ರೈತ ಸಂಘಟನೆಗಳ ಮುಖಂಡರು ಗೊರಗುಂಟೆಪಾಳ್ಯದಲ್ಲಿ ಪ್ರತಿಭಟನೆ ನಡೆಸಿದರು. ಗೊರಗುಂಟೆ ಪಾಳ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನೀಡದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಸುಮಾರು ಐದು ನೂರಕ್ಕೂ ಹೆಚ್ಚು ರೈತರು ಇಲ್ಲಿ ಜಮಾವಣೆಯಗುವ ಸಾಧ್ಯತೆಯಿದೆ. ಗೊರಗುಂಟೆ ಪಾಳ್ಯದಿಂದ ಸ್ವಾತಂತ್ರ್ಯ ಉದ್ಯಾನವನದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.
ನೈಸ್ ರೋಡ್ ಜಂಕ್ಷನ್ ಬಂದ್ ಸಾಧ್ಯತೆ:
ಮಾಗಡಿ ರಸ್ತೆಯ ಗೊಲ್ಲರಹಳ್ಳಿ ನೈಸ್ ರೋಡ್ ಜಂಕ್ಷನ್ ನಲ್ಲಿ ಪ್ರತಿಭಟನೆ ಮಾಡಲು ರೈತ ಮುಖಂಡರು ನಿರ್ಧರಿಸಿದ್ದಾರೆ. ಈಗಾಗಲೇ ಹಲವು ರೈತ ಮುಖಂಡರು ಜಮಾಯಿಸಿದ್ದು, ಪೊಲೀಸರ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಹೊಸೂರು ರಸ್ತೆಯಿಂದ ಮಾಜಿ ಶಾಸಕ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.
600 ಪೊಲೀಸರ ಭದ್ರತೆ:
ಟೌನ್ ಹಾಲ್ ಬಳಿ ಸಾವಿರಾರು ರೈತರು ಜಮಾವಣೆ ಯಾಗುವ ಹಿನ್ನೆಲೆಯಲ್ಲಿ ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್. ಅನುಚೇತ್ ನೇತೃತ್ವದಲ್ಲಿ ಆರು ನೂರು ಪೊಲೀಸ್ ಸಿಬ್ಬಂದಿಯ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಎಂಟು ಎಸಿಪಿಗಳು ಹಾಗೂ ಹತ್ತು ಇನ್ಸ್ಪೆಕ್ಟರ್ ಗಳು ಮತ್ತು ಆರು ನೂರಕ್ಕೂ ಹೆಚ್ಚು ಸಿಬ್ಬಂದಿ, ಜತೆಗೆ ಕೆಎಸ್ಆರ್ ಪಿ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ. ಪ್ರತಿಭಟನೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ರೌಡಿ ಶೀಟರ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸುಮಾರು ಐದು ಸಾವಿರಕ್ಕೂ ಹೆಚ್ಚು ರೈತರು ಸೇರುವ ಸಾಧ್ಯತೆಯಿದೆ ಎಂದು ರೈತ ಮುಖಂಡರು ಅಂದಾಜಿಸಿದ್ದಾರೆ.
Recommended Video