ಶಾದಿ ಭಾಗ್ಯ ಹಿಂದೂ ಹೆಣ್ಣು ಮಕ್ಕಳಿಗೆ ಇಲ್ಲ: ಸಚಿವ ಇಸ್ಲಾಂ
ಹಿಂದೂಗಳನ್ನು ಬಿಟ್ಟು ಇನ್ನೆಲ್ಲರಿಗೂ ಈ ಶಾದಿ ಭಾಗ್ಯ ಪ್ರಾಪ್ತಿಯಾಗಲಿದೆ. ಅಂದರೆ ಯೋಜನೆಯನ್ನು ಕ್ರಿಶ್ಚಿಯನ್, ಜೈನ, ಪಾರ್ಸಿ, ಬೌದ್ಧರಿಗೂ ವಿಸ್ತರಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಖಮರುಲ್ ಇಸ್ಲಾಂ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಖಮರುಲ್ ಇಸ್ಲಾಂ, ಕ್ರಿಶ್ಚಿಯನ್ ಸಮುದಾಯಕ್ಕೆ 2 ಕೋಟಿ ರೂ., ಜೈನರಿಗೆ 1 ಕೋಟಿ ರೂ., ಉಳಿದ ವರ್ಗಕ್ಕೆ 2 ಕೋಟಿ ರೂ. ಮೀಸಲಿಡಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಫಲಾನುಭವಿಗಳ ಆಯ್ಕೆ ಸಂದರ್ಭದಲ್ಲಿ ಹಿರಿತನ ಪರಿಗಣಿಸಲಾಗುವುದು. ಜತೆಗೆ ಅಂಗವಿಕಲರು, ವಿಧವೆಯರಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.
ಇದೇ ವೇಳೆ, ಶಾದಿ ಭಾಗ್ಯ ಯೋಜನೆಯನ್ನು ಎಲ್ಲ ವರ್ಗದ ಬಡವರಿಗೂ ವಿಸ್ತರಿಸಲು ತಮ್ಮ ಅಭ್ಯಂತರವಿಲ್ಲ. ಆದರೆ ಪ್ರತಿಪಕ್ಷಗಳು ಈ ವಿಚಾರದಲ್ಲಿ ರಾಜಕಾರಣ ಮಾಡುತ್ತಿವೆ. ಬಜೆಟ್ ನಲ್ಲಿ ಘೋಷಿಸಿದಂತೆ ಯೋಜನೆ ಅನುಷ್ಠಾನ ಮಾಡಲಾಗುತ್ತಿದೆ. ಆಗೆಲ್ಲಾ ಸುಮ್ಮನಿದ್ದವರೂ ಈಗ ರಾಜಕೀಯ ಲಾಭಕ್ಕೆ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಸಚಿವ ಇಸ್ಲಾಂ ದೂರಿದರು. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಧರಣಿ ಕುರಿತು ಪ್ರತಿಕ್ರಿಯಿಸಿ, ಅವರು ಮುಖ್ಯಮಂತ್ರಿಯಾಗಿದ್ದಾಗ ಇಂತಹ ಯೋಜನೆ ಯಾಕೆ ಜಾರಿಗೊಳಿಸಲಿಲ್ಲ? ಎಂದು ಪ್ರಶ್ನಿಸಿದರು.