ಬಿಜೆಪಿ ಅಭ್ಯರ್ಥಿ ಮುನಿರತ್ನರನ್ನು ದುಶ್ಯಾಸನನಿಗೆ ಹೋಲಿಸಿದ ಜೆಡಿಎಸ್ ಮುಖಂಡ
ಬೆಂಗಳೂರು, ಅ 29: ಮುನಿರತ್ನ ಒಬ್ಬರು ನಿರ್ಮಾಪಕರು, ನಾನು ನಟ. ನನ್ನ ಮತ್ತು ಅವರ ಸಂಬಂಧ ಸಿನಿಮಾಗೆ ಮಾತ್ರ ಸೀಮಿತ ಎಂದು ಹೇಳಿದ್ದ ನಿಖಿಲ್ ಕುಮಾರಸ್ವಾಮಿ, ಈಗ ಅವರನ್ನು ಚುನಾವಣೆಯಲ್ಲಿ ಸೋಲಿಸಿ ಎಂದು ಮನವಿ ಮಾಡಿದ್ದಾರೆ.
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ವಿ.ಕೃಷ್ಣಮೂರ್ತಿ ಪರ ರೋಡ್ ಶೋ ನಡೆಸಿ ಮತಯಾಚಿಸಿದ ನಿಖಿಲ್ "ಹಣದಿಂದ ಮತಗಳನ್ನು ಖರೀದಿಸುತ್ತೇವೆ ಎಂಬ ದುರಹಂಕಾರದ ಪರಮಾವಧಿಯಲ್ಲಿ ಬಿಜೆಪಿ, ಕಾಂಗ್ರೆಸ್ ಪಕ್ಷಗಳಿವೆ. ನಿಮ್ಮ ಮತಗಳನ್ನು ದುರುಪಯೋಗಪಡಿಸಿಕೊಂಡವರಿಗೆ ತಕ್ಕ ಪಾಠ ಕಲಿಸಿ" ಎಂದು ಮನವಿ ಮಾಡಿದರು.
ಜೆಡಿಎಸ್ ಮುಖಂಡ ಶರವಣ ಮಾತನಾಡಿ, "ಬಿಹಾರ ಚುನಾವಣೆಯಲ್ಲಿ ಬಿಜೆಪಿ ನಾಯಕರು ಹೇಳುತ್ತಾರೆ. ನಮ್ಮ ಸರ್ಕಾರವನ್ನು ಅಧಿಕಾರಕ್ಕೆ ತಂದರೆ ಕೊರೊನಾ ಲಸಿಕೆಯನ್ನು ಉಚಿತವಾಗಿ ನೀಡುತ್ತೇವೆ ಎಂದು, ನಿಮ್ಮ ಸರ್ಕಾರವನ್ನು ಅಧಿಕಾರಕ್ಕೆ ತರದಿದ್ದರೆ ನಮ್ಮ ಜನರನ್ನು ಸಾಯಿಸುತ್ತೀರಾ" ಎಂದು ಬಿಜೆಪಿ ನಾಯಕರನ್ನು ಶರವಣ ಪ್ರಶ್ನಿಸಿದರು.

"ಕಾಂಗ್ರೆಸ್ ನಾಯಕರು ಜೆಡಿಎಸ್ ಪಕ್ಷವನ್ನು ಸಮಾಧಿ ಮಾಡುತ್ತೇವೆ ಎನ್ನುತ್ತಾರೆ. ರಾಜ್ಯದ 6.5 ಕೋಟಿ ಕನ್ನಡಿಗರು ನಮ್ಮ ಪರವಾಗಿ ಇರುವ ತನಕ ನಮ್ಮ ಪಕ್ಷ ಸಮಾಧಿ ಆಗಲ್ಲ. ದುಶ್ಯಾಸನನಂತಹ ಬಿಜೆಪಿ ಅಭ್ಯರ್ಥಿಗೆ ಮತ ಹಾಕಬೇಡಿ. ಕೊರೊನಾಗಿಂತಲೂ ಅಪಾಯಕಾರಿಯಾದ ಎರಡು ರಾಷ್ಟ್ರೀಯ ಪಕ್ಷಗಳನ್ನು ನಂಬಬೇಡಿ. ಅವರು ನೋಟು ಕೊಟ್ಟರೆ ತೆಗೆದುಕೊಳ್ಳಿ, ಕೃಷ್ಣಮೂರ್ತಿ ಅವರಿಗೆ ಮತ ಹಾಕಿ" ಎಂದು ಶರವಣ, ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರನ್ನು ದುಶ್ಯಾಸನನಿಗೆ ಹೋಲಿಸಿದರು.
"ಉತ್ತರ ಕರ್ನಾಟಕದಲ್ಲಿ ಪ್ರವಾಹ ಬಂದು ಜನರ ಬದುಕು ಕಷ್ಟದಲ್ಲಿದೆ. ಆದರೆ, ಸರಕಾರಕ್ಕೆ ಮಾತ್ರ ಚುನಾವಣೆಯೇ ಮುಖ್ಯವಾಗಿದೆ. ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಕರ್ನಾಟಕ ರಾಷ್ಟ್ರದಲ್ಲಿಯೇ ಎರಡನೇ ಸ್ಥಾನಕ್ಕೆ ಬಂದು ನಿಂತಿದೆ ಇದಕ್ಕೆ ಯಾರು ಹೊಣೆ" ಎಂದು ನಿಖಿಲ್ ಕುಮಾರಸ್ವಾಮಿ ಸರಕಾರವನ್ನು ಪ್ರಶ್ನಿಸಿದರು.
"ಜೆಡಿಎಸ್ ಪಕ್ಷಕ್ಕೆ ಸಿಕ್ಕ ಅಲ್ಪಾವಧಿಯಲ್ಲಿಯೇ ಸಮಾಜಮುಖಿ ಅಭಿವೃದ್ಧಿ ಕೆಲಸಗಳನ್ನು ಮಾಡಿದೆ. 2018ರಲ್ಲಿ ಕುಮಾರಸ್ವಾಮಿಯವರಿಗೆ ಅಧಿಕಾರವನ್ನು ಕೊಟ್ಟ ಕಾಂಗ್ರೆಸ್, ಅಭಿವೃದ್ಧಿ ವಿಚಾರಗಳಲ್ಲಿ ಅವರ ಕೈಯನ್ನು ಕಟ್ಟಿ ಹಾಕಿತ್ತು. ದೇಶದ ಇತಿಹಾಸದಲ್ಲಿ ಯಾವುದೇ ಮುಖ್ಯಮಂತ್ರಿ ರೈತರ ಸಂಪೂರ್ಣ ಸಾಲ ಮನ್ನಾ ಮಾಡಿದ್ದಿಲ್ಲ. ಅದನ್ನು ಕುಮಾರಸ್ವಾಮಿಯವರು ಮಾಡಿ ತೋರಿಸಿದ್ದಾರೆ"ಎಂದು ನಿಖಿಲ್ ಕುಮಾರಸ್ವಾಮಿ ಈ ಸಂದರ್ಭದಲ್ಲಿ ಹೇಳಿದರು.












Click it and Unblock the Notifications