V Somanna Nomination: ಇಂದು ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣರಿಂದ ನಾಮಪತ್ರ: ಮೈಸೂರು ತಲುಪಿದ ಸಿಎಂ ಬೊಮ್ಮಾಯಿ
ಬೆಂಗಳೂರು, ಏಪ್ರಿಲ್ 17: ಮಹತ್ವದ ವಿಧಾನಸಭಾ ಕ್ಷೇತ್ರಗಳಲ್ಲಿ ಒಂದಾದ ಮೈಸೂರು ಜಿಲ್ಲೆ ವರುಣಾ ಕ್ಷೇತ್ರದಿಂದ ಬಿಜೆಪಿಯ ಅಭ್ಯರ್ಥಿ ವಿ.ಸೋಮಣ್ಣನವರು ನಾಮಪತ್ರ ಸಲ್ಲಿಸಲಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಗಾಗಲೇ ಮೈಸೂರು ಜಿಲ್ಲೆ ತಲುಪಿದ್ದಾರೆ.
ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಮುಖ್ಯಮಂತ್ರಿಗಳ ಬಸವರಾಜ ಬೊಮ್ಮಾಯಿ ಅವರು, ಹೌದು ವರುಣಾ ಕ್ಷೇತ್ರದಿಂದ ಇಂದು ಮಧ್ಯಾಹ್ನ 1ಕ್ಕೆ ಸಚಿವ ವಿ.ಸೋಮಣ್ಣನವರು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು.

ವರುಣಾ ವಿಧಾನಸಭಾ ಕ್ಷೇತ್ರದಿಂದ ಸೋಮಣ್ಣನವರನ್ನು ಕಣಕ್ಕಿಳಿಸಿದ್ದೇವೆ. ಹೀಗಾಗಿ ಈ ಕ್ಷೇತ್ರಕ್ಕೆ ಬಿಜೆಪಿ ಹೆಚ್ಚಿನ ಮಹತ್ವ ಕೊಡುತ್ತಿದ್ದೇವೆ. ನಮ್ಮ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಸಂಬಂಧ ತಾವು ಮೈಸೂರಿಗೆ ಬಂದಿರುವುದಾಗಿ ಸುದ್ದಿಗಾರರ ಪ್ರಶ್ನೆಗೆ ಅವರು ಉತ್ತರಿಸಿದರು.
ಈ ವರುಣಾ ಕ್ಷೇತ್ರದಿಂದ ಕಾಂಗ್ರೆಸ್ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಅಭ್ಯರ್ಥಿಯಾಗಿದ್ದಾರೆ. ಅವರ ವಿರುದ್ಧ ಬಿಜೆಪಿಯಿಂದ ಸೋಮಣ್ಣನವರು ನಿಂತ ಹಿನ್ನೆಲೆಯಲ್ಲಿ ಅವರೊಂದಿಗೆ ಮುಖ್ಯಮಂತ್ರಿಗಳು ಸಹ ನಾಮಪತ್ರ ಸಲ್ಲಿಕೆಗೆ ತೆರಳಿದ್ದಾರೆ. ಕಾರ್ಯಕತರು, ಮುಖಂಡರು ಈ ವೇಳೆ ಪಾಲ್ಗೊಳ್ಳಲಿದ್ದಾರೆ.
ವರುಣ ಕ್ಷೇತ್ರ ಬಿಜೆಪಿ ಪರ: ಸಿಎಂ ವಿಶ್ವಾಸ
ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಸೋಮಣ್ಣನವರು ಪ್ರತಿನಿಧಿಸುತ್ತಿದ್ದಾರೆ. ಇಲ್ಲಿನ ರಾಜಕೀಯ, ಸಾಮಾಜಿಕವಾಗಿ ಹೇಳುವುದಾದರೆ ಇಲ್ಲಿ ಆಶ್ಚರ್ಯಕರ ಫಲಿತಾಂಶ ಹೊರ ಬೀಳಲಿದೆ. ಬಿಜೆಪಿಯ ಅದ್ಭುತ ಅಭ್ಯರ್ಥಿ ಕಣಕ್ಕಿಳಿದ ಪರಿಣಾಮ ನಾವು ಈ ಕ್ಷೇತ್ರಕ್ಕೆ ಹೆಚ್ಚು ಮಹತ್ವ ನೀಡಿದ್ದೇವೆ ಎಂದು ಬೊಮ್ಮಾಯಿ ತಿಳಿಸಿದರು.
ವರುಣಾದಿಂದ ದೆಹಲಿ ನಾಯಕರು ಬಂದು ಪ್ರಚಾರ ಕೈಗೊಳ್ಳುವ ಬಗ್ಗೆ ಚಿಂತನೆ ನಡೆಯುತ್ತಿದೆ. ಶಿಗ್ಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಆಗಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಎದುರಾಳಿ ಯಾರು ಎಂಬುದ ಮುಖ್ಯವಲ್ಲ. ಅಲ್ಲಿ ಜನ ಬೆಂಬಲ, ಜನಾಶೀರ್ವಾದ ಯಾರಿಗೆ ಎಂಬುದೇ ಮುಖ್ಯ ಎಂದರು.

ಪಕ್ಷಾಂತರಗೊಂಡ ಜಗದೀಶ್ ಶೆಟ್ಟರ್ ಅವರು ಸಜ್ಜನರು. ದುರುದೃಷ್ಟವಶಾತ್ ಅವರು ದುರ್ಜನರ ಸಂಘಕ್ಕೆ ಸೇರಿದ್ದಾರೆ. ಪಕ್ಷಾಂತರ ಮಾಡಿದವರು ಸಜ್ಜನರ ಸಂಘದಲ್ಲಿದ್ದರು ಎಂದು ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದರು. ಜಗದೀಶ್ ಶೆಟ್ಟರ್ ಪಕ್ಷ ಬಿಟ್ಟು ವಿಚಾರ ಸೇರಿದಂತೆ ಬಂಡಾಯದಿಂದ ಪಕ್ಷಕ್ಕೆ ಯಾವುದೇ ಸಮಸ್ಯೆ ಆಗುವುದಿಲ್ಲ. ನಾಯಕರು ಹೋಗಿರಬಹುದು. ಆದರೆ ಬಿಜೆಪಿಯಲ್ಲಿ ಕಾರ್ಯಕರ್ತರ ದೊಡ್ಡ ದಂಡೆ ಇದೆ. ಹೀಗಾಗಿ ಯಾವುದೇ ತೊಂದರೆ ಆಗಲ್ಲ.
ಚಾಮುಂಡೇಶ್ವರಿಗೆ ಸೋಮಣ್ಣ ಪೂಜೆ ಸಲ್ಲಿಕೆ
ನಾಮಪತ್ರ ಸಲ್ಲಿಕೆಗೂ ಮುನ್ನ ಇತ್ತ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣನವರು ಮೈಸೂರಿನ ಇತಿಹಾಸ ಪ್ರಸಿದ್ಧ ಶ್ರೀ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದರು. ಜಗನ್ಮಾತೆ ಶ್ರೀ ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಪ್ರತಾಪ್ ಸಿಂಹ್ ಅವರು ಹಾಗೂ ವಿ ರವಿಶಂಕರ್, ಸ್ಥಳೀಯ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.












Click it and Unblock the Notifications