ಕದಿರೇಶ್ ಹತ್ಯೆ: ಜಮೀರ್ ಅಹಮದ್ ಪಾತ್ರದ ಬಗ್ಗೆ ತನಿಖೆಗೆ ಒತ್ತಾಯ
ಬೆಂಗಳೂರು, ಫೆಬ್ರವರಿ 13: ಬಿಬಿಎಂಪಿ ಸದಸ್ಯೆ ರೇಖಾ ಅವರ ಪತಿ ಕದಿರೇಶ್ ಹತ್ಯೆಯ ಹಿಂದೆ ಶಾಸಕ ಜಮೀರ್ ಅಹ್ಮದ್ ಕೈವಾಡದ ಶಂಕೆ ಇದ್ದು ಈ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ.
ಜೆಸಿ ನಗರದ ಗೂಡ್ಸ್ ಶೆಡ್ ರೋಡ್ ಬಳಿ ಇರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಬಳಿ ಬಿಜೆಪಿ ಯುವ ಮೋರ್ಚಾದ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ರವಿಕುಮಾರ್ ಅವರು, ಬಿಜೆಪಿ ಕಾರ್ಯಕರ್ತ ಸಂತೋಷ್ ಹತ್ಯೆಯ ಹಿಂದೆ ಸಚಿವ ರೋಷನ್ ಬೇಗ್ ಹೆಸರು ಕೇಳಿಬಂದಿದೆ. ಅದೇ ರೀತಿ ಡಿವೈಎಸ್ ಪಿ ಗಣಪತಿ ಹತ್ಯೆಯ ಹಿಂದೆ ಸಚಿವ ಕೆ.ಜೆ. ಜಾರ್ಜ್ ಪಾತ್ರದ ಬಗ್ಗೆ ಮಾಹಿತಿ ಈಗಾಗಲೇ ಸಿಬಿಐ ಅವರನ್ನು ಮೊದಲ ಆರೋಪಿಯನ್ನಾಗಿ ಪರಿಗಣಿಸಿದೆ. ಆದರೆ ರಾಜ್ಯದಲ್ಲಿ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಅವರು ಈ ಯಾವುದೇ ವಿಷಯಗಳನ್ನು ಪ್ರಸ್ತಾಮ ಮಾಡಿಲ್ಲವೇಕೆ ಎಂದು ಪ್ರಶ್ನಿಸಿದರು.
ಗೃಹ ಸಚಿವ ರಾಮಲಿಂಗಾರೆಡ್ಡಿ ಅವರು ಈ ಹಿಂದೆ ಸಂತೋಷ್ ಹತ್ಯೆಯಾದಾಗ ಇದು ಹತ್ಯೆಯಲ್ಲ ಸ್ಕ್ರೂ ಡ್ರೈವರ್ ನಿಂದ ಚುಚ್ಚಿದ್ದಾರೆ ಎಷ್ಟೇ ಎಂದು ಹಗುರವಾಗಿ ಮಾತನಾಡಿದ್ದರು. ಈಗ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ ಎಂದರು.

ನಿರ್ಧಿಷ್ಟ ಸಂಘಟನೆಯ ಕಾರ್ಯಕರ್ತರನ್ನೇ ಗುರಿಯಾಗಿಟ್ಟುಕೊಂಡು ಬರ್ಬರವಾಗಿ ಹತ್ಯೆ ಮಾಡಲಾಗುತ್ತಿದೆ. ಕದಿರೇಶ್ ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿದ್ದರು. ಅವರ ರಾಜಕೀಯ ಏಳಿಗೆ ಸಹಿಸದ ಕೆಲವರು ಈ ಕೃತ್ಯ ನಡೆಸಿರುವ ಸಾಧ್ಯತೆ ಇದೆ. ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.
ಸಂಸದ ಪಿಸಿ ಮೋಹನ್, ನಗರ ಬಿಜೆಪಿ ಅಧ್ಯಕ್ಷರಾದ ಪಿ.ಎನ್. ಸದಾಶಿವ, ರಾಜ್ಯ ಬಿಜೆಪಿ ಸಹ ವಕ್ತಾರ ಅನ್ವರ್ ಮಾಣಿಪ್ಪಾಡಿ, ಬಿಬಿಎಂಪಿ ಮಾಜಿ ಸದಸ್ಯರಾದ ಬಿ.ವಿ. ಗಣೇಶ್ ಭಾಗವಹಿಸಿದ್ದರು.












Click it and Unblock the Notifications