ಋಣಮುಕ್ತ ಪತ್ರದ ಆಮಿಷ: ಎಚ್ಡಿಕೆ ವಿರುದ್ಧ ಬಿಜೆಪಿ ದೂರು
ಬೆಂಗಳೂರು, ಅಕ್ಟೋಬರ್ 27: ಬೆಳೆಸಾಲ ಮನ್ನಾದ ಋಣಮುಕ್ತ ಪತ್ರದ ಆಮಿಷವೊಡ್ಡಿದ ಆರೋಪದ ಮೇಲೆ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.
ರಾಜ್ಯದಲ್ಲಿ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಉಪ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮತದಾರರಿಗೆ ಆಮಿಷವೊಡ್ಡುವಂತಹ ಆಶ್ವಾಸನೆಗಳನ್ನು ನೀಡದಂತೆ ಮುಖ್ಯಮಂತ್ರಿಗೆ ಸೂಚನೆ ಕೊಡಬೇಕೆಂದು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ಕೊಟ್ಟಿದೆ.
ಮಂಡ್ಯದಲ್ಲಿ ಪ್ರಚಾರ ಸಮಯದಲ್ಲಿ ಕುಮಾರಸ್ವಾಮಿ ಉಪ ಚುನಾವಣೆ ಮುಗಿದ ಬಳಿಕ ರೈತರಿಗೆ ಋಣಮುಕ್ತ ಪತ್ರ ನೀಡುವುದಾಗಿ ಹೇಳಿದ್ದಾರೆ. ಇದು ನೀತಿಸಂಹಿತೆ ಉಲ್ಲಂಘನೆಯಾಗಿರುವುದರಿಂದ ಅವರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ರಾಜ್ಯ ಬಿಜೆಪಿಯ ಸಹ ವಕ್ತಾರ ಎ.ಎಚ್.ಆನಂದ್ ಹಾಗೂ ಬಿಜೆಪಿ ಚುನಾವಣಾ ಆಯೋಗದ ಸಂಪರ್ಕ ವಿಭಾಗದ ರಾಜ್ಯ ಸಂಚಾಲಕ ದತ್ತಗುರು ಹೆಗಡೆ ದೂರು ನೀಡಿದರು.

ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ಕುಮಾರ್ ಅವರನ್ನು ಭೇಟಿ ಮಾಡಿದ ಬಿಜೆಪಿ ನಿಯೋಗ ಚುನಾವಣಾ ಸಂದರ್ಭದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮತದಾರರನ್ನು ಸೆಳೆಯುವಂತಹ ಆಮಿಷಗಳನ್ನು ಹೊಡ್ಡಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ದೂರಿದ್ದಾರೆ.
ಯಾವುದೇ ತಹರದ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಆಡಳಿತ ಚುಕ್ಕಾಣಿ ಹಿಡಿದಿರುವ ಮುಖ್ಯಸ್ಥರು ಮತದಾರರಿಗೆ ಭರವಸೆ ನೀಡಿವುದು ನೀತಿ ಸಂಹಿತೆಯ ಉಲ್ಲಂಘನೆ. ಇದು ಪರೋಕ್ಷವಾಗಿ ಮತದಾರರ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಚುನಾವಣಾ ಆಯೋಗ ಅವರಿಗೆ ಸೂಕ್ತ ನಿರ್ದೇಶನ ನೀಡುವಂತೆ ಮನವಿ ಮಾಡಲಾಗಿದೆ.ವಾಸ್ತವವಾಗಿ ಕುಮಾರಸ್ವಾಮಿ ಅವರು ರಾಷ್ಟ್ರೀಕೃತ ಹಾಗೂ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ ಸಾಲ ಮನ್ನಾ ಮಾಡಿವುದಾಗಿ ಘೋಷಣೆ ಮಾಡಿ ಹಲವು ತಿಂಗಳುಗಳು ಕಳೆದಿವೆ. ಈವರೆಗೂ ರಾಜ್ಯದ ಯಾವುದೇ ಒಬ್ಬ ರೈತನ ನಯಾಪೈಸೆ ಹಣವನ್ನು ಮನ್ನಾ ಮಾಡಿಲ್ಲ.
ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಉಪಚುನಾವಣೆ ಫಲಿತಾಂಶ ಮುಗಿಯುವವರೆಗೂ ಯಾವುದೇ ರೀತಿಯ ಜಾಥ ನಡೆಸುವುದಾಗಲಿ, ಇಲ್ಲವೆ ಆಶ್ವಾಸನೆಗಳನ್ನು ನೀಡದಂತೆ ಕುಮಾರಸ್ವಾಮಿಗೆ ನಿರ್ದೇಶನ ನೀಡುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ.
ಅಲ್ಲದೆ, ಯಾವುದೇ ಬ್ಯಾಂಕುಗಳಿಗೂ ಸರ್ಕಾರ ಒಂದೇ ಒಂದು ರೂಪಾಯಿ ಹಣವನ್ನು ಪಾವತಿ ಮಾಡಿಲ್ಲ. ಪರಿಸ್ಥಿತಿ ಹೀಗಿರುವಾಗ ಚುನಾವಣಾ ಸಂದರ್ಭದಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳಿಗೆ ಮತ ಹಾಕಬೇಕೆಂಬ ಉದ್ದೇಶದಿಂದ ಮುಖ್ಯಮಂತ್ರಿ ಅವರು ಆಮಿಷವೊಡ್ಡಿ ಮತದಾರರನ್ನು ತಮ್ಮ ಪಕ್ಷದತ್ತ ಸೆಳೆಯಲು ಮುಂದಾಗಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದ್ದಾರೆ.












Click it and Unblock the Notifications