'ಮಹಾಲಕ್ಷ್ಮೀ' ಯೋಜನೆಗೆ ಬ್ರೇಕ್ ಹಾಕುತ್ತಾ ಬಿಜೆಪಿ ಸರ್ಕಾರ
ಬೆಂಗಳೂರು, ಫೆಬ್ರವರಿ 4: ಕಾಂಗ್ರೆಸ್-ಜೆಡಿಎಸ್ ಸರ್ಕಾರದ ಮಹತಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ 'ಮಹಾಲಕ್ಷ್ಮೀ' ಯೋಜನೆಗೆ ಈ ಬಜೆಟ್ನಲ್ಲಿ ರಾಜ್ಯ ಸರ್ಕಾರ ಬ್ರೇಕ್ ಹಾಕಲು ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.
ಈ ವರ್ಷ ಬಿಬಿಎಂಪಿ ಆಸ್ಪತ್ರೆಯಲ್ಲಿ ಜನಿಸಿದ ಎಲ್ಲಾ ಹೆಣ್ಣುಮಕ್ಕಳಿಗೆ ಬಾಂಡ್ ವಿತರಿಸುವುದಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರವು 2018-19ನೇ ಸಾಲಿನ ಬಜೆಟ್ನಲ್ಲಿ ಪಿಂಕ್ ಬೇಬಿ ಯೋಜನೆಯಡಿ ಹೊಸ ವರ್ಷದಂದು ಪಾಲಿಕೆಯ ಎಲ್ಲಾ ಆಸ್ಪತ್ರೆಗಳಲ್ಲಿ ಜನಿಸುವ ಮೊದಲ ಹೆಣ್ಣು ಮಗುವಿಗೆ 5 ಲಕ್ಷ ರೂ. ಬಾಂಡ್ ನೀಡುವ ಯೋಜನೆ ಜಾರಿಗೆ ತರಲಾಗಿತ್ತು.
ನಂತರ 2019-20ನೇ ಸಾಲಿನ ಬಜೆಟ್ನಲ್ಲಿ ಪಾಲಿಕೆಯ 6 ರೆಫರಲ್ ಹಾಗೂ 26 ಬಿಬಿಎಂಪಿ ಹೆರಿಗೆ ಆಸ್ಪತ್ರೆಗಳಲ್ಲಿ ವರ್ಷವಿಡೀ ಜನಿಸುವ ಎಲ್ಲಾ ಹೆಣ್ಣುಮಕ್ಕಳಿಗೆ ಮಹಾಲಕ್ಷ್ಮೀ ಯೋಜನೆಯಡಿ ಒಂದು ಲಕ್ಷ ರೂ ಬಾಂಡ್ ವಿತರಿಸುವ ಯೋಜನೆ ಘೋಷಿಸಿ 60 ಕೋಟಿ ರೂ. ಅನುದಾನ ಮೀಸಲಿಡಲಾಗಿತ್ತು.
ಈಗಾಗಲೇ ಬಿಬಿಎಂಪಿ ಆರೋಗ್ಯ ವಿಭಾಗದ ಅಧಿಕಾರಿಗಳು ಯೋಜನೆಯ ಫಲಾನುಭವಿಗಳನ್ನು ಆಯ್ಕೆಗೆ ಮಾನದಂಡಗಳನ್ನು ರೂಪಿಸಿ ಸಂಬಂಧಪಟ್ಟ ಸ್ಥಾಯಿ ಸಮಿತಿಯಿಂದ ಒಪ್ಪಿಗೆ ಪಡೆದುಕೊಂಡಿದೆ.
ಇತ್ತ ಆಡಳಿತ ಪಕ್ಷ ಬಿಜೆಪಿ ಮೈತ್ರಿ ಆಡಳಿತಾವಧಿಯಲ್ಲಿ ಜಾರಿಗೆ ತಂದ ಮಹಾಲಕ್ಷ್ಮೀ ಯೋಜನೆಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ.