''ಬಿಜೆಪಿ ಕೊಟ್ಟಿದ್ದ ₹1600 ಕೋಟಿ ಬಳಕೆ ಆಗಿದ್ದರೆ ಬೆಂಗಳೂರಿಗೆ ಈ ಸ್ಥಿತಿ ಬರುತ್ತಿರಲಿಲ್ಲ"
ಬೆಂಗಳೂರು, ಮೇ 21: ಇದು ಬ್ರ್ಯಾಂಡ್ ಬೆಂಗಳೂರು ಅಲ್ಲ, ವಾಟರ್ ಬೆಂಗಳೂರು. ಬಿಜೆಪಿ ಅವಧಿಯಲ್ಲಿ ನಗರದ ಅಭಿವೃದ್ಧಿಗೆ ಹಣ ಈಡಲಾಗಿತ್ತು. ಆ ಕಾಮಗಾರಿಗಳನ್ನು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರದ್ದು ಮಾಡಿತ್ತು. ಆ ಕಾಮಗಾರಿಗಳು ನಡೆದಿದ್ದರೆ ಇಂದು ಪ್ರವಾಹದ ಸ್ಥಿತಿ ಬರುತ್ತಿರಲಿಲ್ಲ. ಬೆಂಗಳೂರಿಗೆ ಕಳೆದ 2 ವರ್ಷಗಳಲ್ಲಿ ಏನು ಮಾಡಿದ್ದೀರಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಪ್ರಶ್ನಿಸಿದರು. ನಗರದ ಪ್ರವಾಹ ಸ್ಥಿತಿ ಕಂಡು ಕಳವಳ ವ್ಯಕ್ತಪಡಿಸಿದರು.
ನಗರದಲ್ಲಿ ಮಳೆಯಿಂದ ಉಂಟಾದ ಪ್ರವಾಹ, ಸಮಸ್ಯೆಗಳ ಸ್ಥಳ ಸಿಲ್ಕ್ ಬೋರ್ಡ್ ಜಂಕ್ಷನ್ನಲ್ಲಿ ಪ್ರವಾಹ ಪರಿಶೀಲನೆ ನಡೆಸಿದ ನಂತರ ಅವರು ಸುದ್ದಿಗಾರ ಜೊತೆಗೆ ಮಾತನಾಡಿದರು. ಬಿಜೆಪಿ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಗೆಂದು 1,600 ಕೋಟಿ ರೂಪಾಯಿ ನೀಡಲಾಗಿತ್ತು. ಅದರಿಂದ ಕಾಮಗಾರಿಗಳನ್ನು ನಡೆಸದೇ ಯೋಜನೆಗಳನ್ನು ಕಾಂಗ್ರೆಸ್ ರದ್ದು ಮಾಡಿತು.

ಇಡೀ ಬೆಂಗಳೂರು ಮಳೆಯಿಂದಾಗಿ ಮುಳುಗುತ್ತಿದ್ದು, ಜನರು ಪರದಾಡುತ್ತಿದ್ದಾರೆ. ಮಳೆಯಿಂದಾಗಿ ಐದು ಜನರು ಸತ್ತಿದ್ದಾರೆ. ಇಂಥವರ ಸಾವಿನ ಮೇಲೆ ಕಾಂಗ್ರೆಸ್ ಸಾಧನೆಯ ಸಮಾವೇಶ ಮಾಡುತ್ತಿದೆ. ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಸಮಾವೇಶವನ್ನು ರದ್ದು ಮಾಡಬೇಕಿತ್ತು. ಕಾಂಗ್ರೆಸ್ನ ತಪ್ಪಿನಿಂದಲೇ ಜನರು ಸತ್ತಿದ್ದಾರೆ. ಇಂತಹ ಸಮಾವೇಶ ಮಾಡುವ ನೈತಿಕ ಅರ್ಹತೆ ಸರ್ಕಾರಕ್ಕೆ ಇಲ್ಲ ಎಂದು ಅವರು ಟೀಕಿಸಿದರು.
ಬೆಂಗಳೂರಿನ ಸಾಯಿ ಬಡಾವಣೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದಾರೆ. ಅಭಿವೃದ್ಧಿ ಮಾಡುತ್ತೇನೆಂದು ಹೇಳಿದ್ದರು. ಸಿಲ್ಕ್ ಬೋರ್ಡ್ ಬಳಿ ಕಳೆದ ಸಲವೂ ಪ್ರವಾಹವಾಗಿತ್ತು. ಇಷ್ಟಾದರೂ ಅಭಿವೃದ್ಧಿಗೆ ನಯಾಪೈಸೆ ಬಿಡುಗಡೆಯಾಗಿಲ್ಲ. ಬಿಜೆಪಿ ಅವಧಿಯಲ್ಲಿ ರಾಜಕಾಲುವೆ, ರಸ್ತೆ ಅಭಿವೃದ್ಧಿಗೆ 1,600 ಕೋಟಿ ರೂ. ನೀಡಲಾಗಿತ್ತು. ಅದನ್ನು ಕಾಂಗ್ರೆಸ್ ರದ್ದು ಮಾಡಿದೆ. ಆ ಅಭಿವೃದ್ಧಿ ಕಾರ್ಯ ನಡೆದಿದ್ದರೆ, ಈ ರೀತಿ ಪ್ರವಾಹ ಆಗುತ್ತಿರಲಿಲ್ಲ.
ಬೆಂಗಳೂರಿಗೆ ಪ್ರಗತಿಗೆ ಹಣ ನೀಡದೆ ಲೂಟಿ ಮಾಡಲು ಆ ಹಣವನ್ನು ಬಳಸಲಾಗಿದೆ. ಎಲ್ಲ ಹಣವನ್ನು ಸುರಂಗ ಮಾರ್ಗ ಯೋಜನೆಗೆ ಮೀಸಲಿಟ್ಟಿದ್ದಾರೆ. ಈಗ ಎಲ್ಲ ರಸ್ತೆಗಳಲ್ಲಿ ಸುರಂಗ ಆಗಿದೆ ಎಂದು ಅವರು ಸದ್ಯದ ಪರಿಸ್ಥಿತಿಯನ್ನು ವಿವರಿಸಿದರು.

ಪ್ರವಾಹದ ಸ್ಥಳಗಳಲ್ಲಿ ಸೆನ್ಸರ್ ಅಳವಡಿಸಲಾಗುವುದು ಎಂದು ಸರ್ಕಾರ ಹೇಳಿತ್ತು. ಆದರೆ ಯಾವ ಕೆಲಸವೂ ಆಗಿಲ್ಲ. ಏಪ್ರಿಲ್ 15 ರಂದೇ ಹವಾಮಾನ ಇಲಾಖೆ ಮಳೆ ಜೋರಾಗಲಿದೆ ಎಂದು ಸೂಚನೆ ನೀಡಿತ್ತು. ಒಂದು ತಿಂಗಳ ಸಮಯದಲ್ಲಿ ಬಿಬಿಎಂಪಿಯಿಂದ ಮುಂಜಾಗ್ರತಾ ಸಭೆ ನಡೆಸಿಲ್ಲ. ಸಮಾವೇಶಕ್ಕೆ ಮಾತ್ರ ತರಾತುರಿಯಲ್ಲಿ ಸಿದ್ಧತೆ ಮಾಡಿಕೊಂಡರು. 14 ಸಾವಿರ ಗುಂಡಿ ಮುಚ್ಚಿದ್ದೇವೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಈಗ ಕಾಂಗ್ರೆಸ್ ಪಕ್ಷವನ್ನು ಮುಚ್ಚಿಹಾಕಲು ಜನರೇ ಗುಂಡಿ ತೆಗೆಯುತ್ತಿದ್ದಾರೆ ಎಂದು ಹೇಳಿದರು.
ಜನ ಸಾಯುತ್ತಿರುವುದಕ್ಕೆ ಸಾಕ್ಷಿ ಬೇಕಾ?
ಯುದ್ಧಕ್ಕೆ ಸಾಕ್ಷಿ ಕೇಳುವ ಇವರು, ಜನರು ಸಾಯುತ್ತಿರುವುದನ್ನು ಬಂದು ನೋಡಲಿ. ಇದಕ್ಕೆ ಯಾವುದೇ ಸಾಕ್ಷಿ ಬೇಕಿಲ್ಲ. ಬಿಜೆಪಿ ಅವಧಿಯಲ್ಲಿ ಪ್ರತಿ ವರ್ಷ ಏಳೆಂಟು ಸಾವಿರ ಕೋಟಿ ರೂ. ನೀಡಲಾಗುತ್ತಿತ್ತು. ಕಾಂಗ್ರೆಸ್ ಸರ್ಕಾರ ಬೆಂಗಳೂರಿಗೆ ನೀಡಿರುವ ಹಣವೆಲ್ಲವನ್ನೂ ಸುರಂಗ ನಿರ್ಮಿಸಲು ಬಳಸಲಾಗುತ್ತಿದೆ. ಬೆಂಗಳೂರು ಮುಳುಗುತ್ತಿರುವ ಬಗ್ಗೆ ಸರ್ಕಾರಕ್ಕೆ ಯಾವುದೇ ಕಾಳಜಿ ಇಲ್ಲ. ಗ್ರೇಟರ್ ಬೆಂಗಳೂರು ಹೋಗಿ ವಾಟರ್ ಬೆಂಗಳೂರು ಆಗಿದೆ. ಮನೆ ಬಾಗಿಲಿಗೆ ಅವಾಂತರ, ಸಾವುಗಳನ್ನು ಸರ್ಕಾರ ತರುತ್ತಿದೆ ಎಂದು ದೂರಿದರು.












Click it and Unblock the Notifications