ಮೂರು ಡಿಸಿಎಂ ಹುದ್ದೆ ಸೃಷ್ಟಿಗೆ ಯಡಿಯೂರಪ್ಪಗೆ ಬಿಜೆಪಿ ಹೈಕಮಾಂಡ್ ಸೂಚನೆ?
ಬೆಂಗಳೂರು, ಆಗಸ್ಟ್ 24: ಮೂರು ಡಿಸಿಎಂ ಹುದ್ದೆ ಸೃಷ್ಟಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಬಿಜೆಪಿ ಹೈಕಮಾಂಡ್ ಸೂಚನೆ ನೀಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಈ ಮೊದಲು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಡಿಸಿಎಂ ಹುದ್ದೆ ಸೃಷ್ಟಿಗೆ ಹೈಕಮಾಂಡ್ ಮುಂದೆ ಪಟ್ಟು ಹಿಡಿದಿದ್ದರು.ಕುರುಬ, ದಲಿತ, ಒಕ್ಕಲಿಗ ಸಮುದಾಯಕ್ಕೆ ಡಿಸಿಎಂ ಸ್ಥಾನ ಕೊಡುವ ಬಗ್ಗೆ ಸಿಎಂ ಜೊತೆ ಹೈಕಮಾಂಡ್ ಪ್ರಸ್ತಾಪ ಮಾಡಿದೆ ಎನ್ನಲಾಗಿದೆ.
ಯಡಿಯೂರಪ್ಪ ದೆಹಲಿಯಿಂದ ವಾಪಸ್, ಲಿಂಬಾವಳಿಗೆ ಹೈಕಮಾಂಡ್ ಬುಲಾವ್
ಕುರುಬ ಕೋಟಾದಲ್ಲಿ ಕೆ.ಎಸ್. ಈಶ್ವರಪ್ಪ, ದಲಿತ ಕೋಟಾದಲ್ಲಿ ಗೋವಿಂದ ಕಾರಜೋಳ, ಒಕ್ಕಲಿಗ ಕೋಟಾದಲ್ಲಿ ಡಾ. ಅಶ್ವತ್ಥ ನಾರಾಯಣ ಇದ್ದಾರೆ.
ಅಶೋಕ್ ಬದಲಾಗಿ ಅಶ್ವತ್ಥ ನಾರಾಯಣ ಹೆಸರನ್ನು ಹೈಕಮಾಂಡ್ ಮುಂದಿಟ್ಟಿದ್ದು, ಇದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸಮ್ಮತಿ ಸೂಚಿಸಿಲ್ಲ ಎಂಬ ಮಾಹಿತಿಯೂ ಲಭ್ಯವಾಗಿದೆ.
ಶನಿವಾರ ಬೆಳಗ್ಗೆ ಬೆಂಗಳೂರಿನ ಕೆಲವು ಶಾಸಕರನ್ನು ಕರೆಸಿಕೊಂಡು ಡಿಸಿಎಂ ಸ್ಥಾನ ನೀಡುವ ವಿಚಾರದ ಕುರಿತು ಯಡಿಯೂರಪ್ಪ ಮಾತುಕತೆ ನಡೆಸಿದ್ದಾರೆ. ಸದ್ಯ ಡಿಸಿಎಂ ಹುದ್ದೆ ಸೃಷ್ಟಿಗೆ ಹೈಕಮಾಂಡ್ ಸೂಚಿಸಿರುವ ಕಾರಣ ಸಿಎಂ ವಿಚಲಿತರಾದಂತೆ ಗೋಚರಿಸುತ್ತಿದೆ.
ಇನ್ನು ಸುಪ್ರೀಂಕೋರ್ಟ್ನಲ್ಲಿ ಅನರ್ಹ ಶಾಸಕರ ಅರ್ಜಿ ವಿಚಾರಣೆ ಬಂದಿಲ್ಲ, ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿರುವ ಶಾಸಕರು ಶನಿಆರ ಸಂಜೆ ಬೆಂಗಳೂರಿಗೆ ಹಿಂದಿರುಗುವ ಸಾಧ್ಯತೆ ಇದೆ.
ಪಕ್ಷ ಸರ್ಕಾರಕ್ಕೆ ಮುಜುಗರವಾಗುವಂತಹ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ, ನೀವು ರಾಜ್ಯಕ್ಕೆ ಬೇಕಾದ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಿ ಅದನ್ನು ನಮಗೆ ತಿಳಿಸಿ ಸಾಕು ಎಂದು ಗೃಹ ಸಚಿವ ಅಮಿತ್ ಶಾ ಯಡಿಯೂರಪ್ಪ ಅವರಿಗೆ ತಿಳಿಸಿದ್ದಾರೆ.
ಅನರ್ಹ ಶಾಸಕರು ಅಶ್ವತ್ಥ ನಾರಾಯಣ ಹಾಗೂ ಬಿವೈ ರಾಘವೇಂದ್ರ ಅವರ ಜೊತೆ ಮಾತುಕತೆ ನಡೆಸಲು ನಿರಾಕರಿಸಿದ್ದರು. ಅಮಿತ್ ಶಾ ಅಥವಾ ಯಡಿಯೂರಪ್ಪ ಅವರೊಂದಿಗೇ ನಾವು ಮಾತನಾಡುತ್ತೇವೆ ಎಂದಿದ್ದರು.