ಮಾಡಾಳ್ ವಿರೂಪಾಕ್ಷಪ್ಪ ಪ್ರಕರಣ: ಭ್ರಷ್ಟಾಚಾರದ ನೈತಿಕ ಹೊಣೆ ಹೊತ್ತು ಸಿಎಂ ಬೊಮ್ಮಾಯಿ ರಾಜೀನಾಮೆ ನೀಡಲಿ: ಎಎಪಿ
ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ್ ಮನೆ ಮೇಲಿನ ದಾಳಿಯಲ್ಲಿ ಕೋಟ್ಯಂತರ ಹಣ ಪತ್ತೆ. ರಾಜ್ಯ ಭ್ರಷ್ಟಾಚಾರ ತಂಡವವಾಡುತ್ತಿದೆ. ಸಿಎಂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವಂತೆ ಆಮ್ ಆದ್ಮಿ ಪಕ್ಷ ಆಗ್ರಹಿಸಿ ಪ್ರತಿಭಟಿಸಿತು.
ಬೆಂಗಳೂರು, ಮಾರ್ಚ್ 08: ಲೋಕಾಯುಕ್ತ ಅಧಿಕಾರಿಗಳ ದಾಳಿ ವೇಳೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಸಿಕ್ಕಿಬಿದ್ದಿದ್ದಾರೆ. ಅಲ್ಲದೇ ಶಾಸಕ ಮನೆ ಮೇಲಿನ ದಾಳಿಯಲ್ಲಿ ಕೋಟ್ಯಂತರ ರೂಪಾಯಿ ಹಣ ಸಿಕ್ಕಿದೆ. ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವಲ್ಲಿ ವಿಫಲವಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಆಮ್ ಆದ್ಮಿ ಪಕ್ಷ ಬೃಹತ್ ಪ್ರತಿಭಟನೆ ನಡೆಸಿತು.
ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಪೃಥ್ವಿ ರೆಡ್ಡಿ ಅವರು, ಚನ್ನಗಿರಿಯ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪರವರ ಪುತ್ರ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿದ್ದಾನೆ. ಚುನಾವಣೆಗೆ ಕೆಲವೇ ವಾರಗಳು ಬಾಕಿಯಿರುವ ಈ ಸಂದರ್ಭದಲ್ಲಿ ಶಾಸಕರೊಬ್ಬರ ಮನೆಯಲ್ಲಿ ಈ ಪ್ರಮಾಣದ ನಗದು ಪತ್ತೆಯಾಗಿರುವುದು ಗಂಭೀರ ವಿಚಾರ. ಈ ಸಂಬಂಧ ಎಲ್ಲ ಶಾಸಕರ ನಿವಾಸ ಹಾಗೂ ಕಚೇರಿಗಳಲ್ಲಿ ತಪಾಸಣೆ ಮಾಡಬೇಕು ಎಂದು ಆಗ್ರಹಿಸಿದರು.

ಹಣದ ಮೂಲವೇನು ಹಾಗೂ ಏಕೆ ಸಂಗ್ರಹಿಸಿಡಲಾಗಿತ್ತು ಎಂದು ಸೂಕ್ತ ತನಿಖೆಯಾಗಬೇಕು. ಪ್ರಕರಣದ ಕುರಿತು ಸಿಬಿಐ, ಇಡಿ, ಐಟಿ ಸಂಸ್ಥೆಗಳಿಂದ ಸೂಕ್ತ ತನಿಖೆಯಾಗಲಿದೆ. ಶಾಸಕರ ಮನೆ, ಕಚೇರಿಗಳಲ್ಲಿ ಪಾಸಣೆ ನಡೆಸಿ, ಅಕ್ರಮ ನಗದು ವಶಕ್ಕೆ ಪಡೆದು ಸಂಭವನೀಯ ಚುನಾವಣಾ ಅಕ್ರಮಗಳಿಗೆ ಕಡಿವಾಣ ಹಾಕಬೇಕು ಎಂದರು.
ವಿರೂಪಾಕ್ಷಪ್ಪನವರಿಗೆ ನ್ಯಾಯಾಲಯದಲ್ಲಿ ಜಾಮೀನು ಸಿಗುವ ತನಕ ಅವರು ಐದು ದಿನಗಳ ಕಾಲ ಪೊಲೀಸರು ಹಾಗೂ ಲೋಕಾಯುಕ್ತ ಅಧಿಕಾರಿಗಳಿಗೆ ಸಿಗದಂತೆ ನಾಪತ್ತೆಯಾಗಿದ್ದರು. ಇದರಿಂದ ಶಾಸಕರ ಗಮನಕ್ಕೆ ಸರ್ಕಾರ ನಿಂತಿರುವುದು ಸ್ಪಷ್ಟವಾಗುತ್ತದೆ. ಬಿಜೆಪಿ ಆಡಳಿತದ 40% ಕಮಿಷನ್ ದಂಧೆಗೆ ಸಂಬಂಧಿಸಿದ ಇಂತಹ ಅನೇಕ ಪ್ರಕರಣಗಳು ಬಯಲಿಗೆ ಬಂದಿದ್ದರೂ, ಸಿಎಂ ಬಸವರಾಜ ಬೊಮ್ಮಾಯಿಯವರು ಯಾರ ವಿರುದ್ಧವೂ ಕ್ರಮ ಕೈಗೊಳ್ಳದಿರುವುದು ದುರಂತ. ಆದ್ದರಿಂದ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಪೃಥ್ವಿ ರೆಡ್ಡಿ ಒತ್ತಾಯಿಸಿದರು.

ಎಎಪಿ ರಾಜ್ಯ ಕಾರ್ಯಾಧ್ಯಕ್ಷ ಮೋಹನ್ ದಾಸರಿ ಮಾತನಾಡಿ, ಬಿಜೆಪಿ ರಾಜ್ಯದ ರಾಜಕೀಯ ಇತಿಹಾಸದಲ್ಲೇ ಅತ್ಯಂತ ಭ್ರಷ್ಟ ಸರ್ಕಾರವಾಗಿದೆ. ಮುಖ್ಯಮಂತ್ರಿ ಬೊಮ್ಮಾಯಿಯವರ ಆಡಳಿತದಲ್ಲಿ ರಾಜ್ಯದ ಅಭಿವೃದ್ಧಿ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ಬಿಜೆಪಿ ಶಾಸಕರು ಮಾತ್ರ ಅಭಿವೃದ್ಧಿಯಾಗುತ್ತಿದ್ದಾರೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣರವರು ಆರೋಪ ಮಾಡಿದಾಗ, ಸೂಕ್ತ ಸಾಕ್ಷಿ ಇಲ್ಲವೆಂದು ಹೇಳಿ, ಭ್ರಷ್ಟಾಚಾರದ ವಿರುದ್ಧ ದನಿ ಎತ್ತಿದ ಅವರನ್ನೇ ಬಂಧಿಸಲಾಗಿತ್ತು. ಈಗ ಲೋಕಾಯುಕ್ತ ದಾಳಿಯಿಂದಾಗಿ 40% ಕಮಿಷನ್ ಆರೋಪಕ್ಕೆ ಸಾಕ್ಷಿ ದೊರೆತಿದೆ ಎಂದರು.
ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರಾದ ಡಾ.ಸತೀಶ್ ಕುಮಾರ್, ಅಶೋಕ್ ಮೃತ್ಯುಂಜಯ, ಚನ್ನಪ್ಪಗೌಡ ನೆಲ್ಲೂರು, ಕಾಳಿದಾಸ ಜೊನ್ನಾಲ, ಗೋಪಿನಾಥ್ ನಾಯ್ಡು, ನಾರಿ ಶ್ರೀನಿವಾಸ್, ಅನಿಲ್ ನಾಚಪ್ಪ, ಶ್ರೀನಿವಾಸ್ ರೆಡ್ಡಿ, ಸತೀಶ್ ಗೌಡ, ಕೇಶವ್ ಕುಮಾರ್, ಶಶಿಧರ್ ಆರಾಧ್ಯ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.












Click it and Unblock the Notifications