ದೆಹಲಿಯಿಂದ ಬೆಂಗಳೂರಿಗೆ ಬಂದ ಮುರುಗೇಶ್ ನಿರಾಣಿ ಮೊದಲ ಮಾತು?
ಬೆಂಗಳೂರು, ಜುಲೈ 25: ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ಬಿ ಎಸ್ ಯಡಿಯೂರಪ್ಪ ರಾಜೀನಾಮೆ ನೀಡಿರುವುದರ ಮೂಲಕ ತಮ್ಮ ಸ್ಥಾನವನ್ನು ಬೇರೆಯವರಿಗೆ ಬಿಟ್ಟು ಕೊಟ್ಟಿದ್ದಾರೆ. ಮುಂದಿನ ಸಿಎಂಗೆ ಮಾರ್ಗದರ್ಶನವನ್ನೂ ಮಾಡಲಿದ್ದಾರೆ. ಇದೇ ಭಾರತೀಯ ಜನತಾ ಪಕ್ಷದ ವಿಶೇಷತೆ ಎಂದು ಬಿಜೆಪಿ ಶಾಸಕ ಮುರುಗೇಶ್ ನಿರಾಣಿ ಹೇಳಿದ್ದಾರೆ.
ನವದೆಹಲಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುರುಗೇಶ್ ನಿರಾಣಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಅವರ ರಾಜೀನಾಮೆಯಿಂದ ವೈಯಕ್ತಿಕವಾಗಿ ನನಗೂ ತುಂಬಾ ನೋವು ಉಂಟಾಗಿದೆ. ಆದರೆ ಬಿಜೆಪಿ ಹೈಕಮಾಂಡ್ ಸೂಚನೆಯಂತೆ ಬಿ ಎಸ್ ಯಡಿಯೂರಪ್ಪನವರು ರಾಜೀನಾಮೆ ನೀಡಿದ್ದಾರೆ.
ಬಹಳಷ್ಟು ನಿಗೂಢ ಅರ್ಥ ಒಳಗೊಂಡಿದೆಯಾ ಯಡಿಯೂರಪ್ಪ ಕೊಟ್ಟಿರುವ 'ಎರಡು ಸಾಲಿನ ರಾಜೀನಾಮೆ ಪತ್ರ'?
ರಾಜ್ಯದಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಆಗುತ್ತಾರೆ ಎಂಬುದರ ಬಗ್ಗೆ ನನಗೆ ಗೊತ್ತಿಲ್ಲ. ಬಿಜೆಪಿ ಹೈಕಮಾಂಡ್ ಪಕ್ಷದ ನಿಷ್ಠಾವಂತ ಮತ್ತು ಪ್ರಾಮಾಣಿಕ ಕಾರ್ಯಕರ್ತರಿಗೆ ಮುಖ್ಯಮಂತ್ರಿ ಸ್ಥಾನ ಸಿಗಲಿದ್ದು, ಅದನ್ನು ಹೈಕಮಾಂಡ್ ತೀರ್ಮಾನಿಸಲಿದೆ. ತಾವು ಕೆಲಸ ಮಾಡುವುದಾಗಿ ಮುರುಗೇಶ್ ನಿರಾಣಿ ಹೇಳಿದ್ದಾರೆ.
ಮುಖ್ಯಮಂತ್ರಿ ರೇಸ್ ನಲ್ಲಿ ಮುರುಗೇಶ್ ನಿರಾಣಿ:
ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ನಾಯಕರ ರೇಸ್ ನಲ್ಲಿ ಮುರುಗೇಶ್ ನಿರಾಣಿ ಹೆಸರು ಸಹ ಕೇಳಿ ಬರುತ್ತಿದೆ. ಕಳೆದ ಕೆಲವು ದಿನಗಳಿಂದ ನವದೆಹಲಿಯಲ್ಲಿ ವಾಸ್ತವ್ಯ ಹೂಡಿದ್ದ ಮುರುಗೇಶ್ ನಿರಾಣಿ, ಇತ್ತ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರಾಜೀನಾಮೆ ಬೆನ್ನಲ್ಲೇ ಬೆಂಗಳೂರಿಗೆ ವಾಪಸ್ ಆಗಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ.
ರಾಜ್ಯದ ಭಾರತೀಯ ಜನತಾ ಪಕ್ಷದಲ್ಲಿ ನಡೆಯುತ್ತಿರುವ ಆಂತರಿಕ ಬೆಳವಣಿಗೆ ಮತ್ತು ರಾಜಕೀಯ ಹೊಯ್ದಾಟಗಳ ಮೇಲೆ ನಿಗಾ ವಹಿಸುವುದಕ್ಕೆ ಕೇಂದ್ರದಿಂದ ಇಬ್ಬರು ವೀಕ್ಷಕರನ್ನು ನೇಮಿಸಲಾಗಿದೆ. ರಾಜ್ಯ ವೀಕ್ಷಕರಾಗಿ ಧರ್ಮೇಂದ್ರ ಪ್ರಧಾನ್ ಹಾಗೂ ಅರುಣ್ ಸಿಂಗ್ ನೇಮಕವಾಗುವ ಸಾಧ್ಯತೆಯಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಧರ್ಮೇಂದ್ರ ಪ್ರಧಾನ್ ಹಾಗೂ ಅರುಣ್ ಸಿಂಗ್ ಮಂಗಳವಾರ ಬೆಳಗ್ಗೆ ಅಥವಾ ಸೋಮವಾರ ಸಂಜೆಯೇ ರಾಜ್ಯಕ್ಕೆ ಆಗಮಿಸಲಿದ್ದಾರೆ. ರಾಜ್ಯ ಬಿಜೆಪಿ ಶಾಸಕರು ಮತ್ತು ನಾಯಕರೊಂದಿಗೆ ಚರ್ಚೆ ನಡೆಸಿ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬುದರ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ಆನಂತರದಲ್ಲಿ ಶಾಸಕರ ಅಭಿಪ್ರಾಯವನ್ನು ಸಂಗ್ರಹಿಸಿ ಹೈಕಮಾಂಡ್ ನಾಯಕರಿಗೆ ಸಂದೇಶ ರವಾನಿಸಲಿದ್ದಾರೆ.
Recommended Video