ಬೆಂಗಳೂರಿಗೆ BL ಸಂತೋಷ್: ಬಿಜೆಪಿಯಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ
ಬೆಂಗಳೂರು, ಜುಲೈ 26: ಕಳೆದ ಕೆಲವು ದಿನಗಳಿಂದ ಕುತೂಹಲ ಕೆರಳಿಸಿದ್ದ ರಾಜಕೀಯ ವಿದ್ಯಮಾನಕ್ಕೆ ಬಿ.ಎಸ್. ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಅಲ್ಪ ವಿರಾಮ ಹಾಕಿದ್ದು, ನಂತರದ ರಾಜಕೀಯ ಬೆಳವಣಿಗೆಗಳು ಗರಿಗೆದರಿವೆ.
ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡುತ್ತಿದ್ದಂತೆಯೇ ರಾಜ್ಯ ಬಿಜೆಪಿಯಲ್ಲಿ ಭಾರೀ ಬೆಳವಣಿಗೆಗಳು ನಡೆಯುತ್ತಿದ್ದು, ಈ ಮಧ್ಯೆ ಇಂದು ರಾತ್ರಿಯೇ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ದೆಹಲಿಯಿಂದ ಬೆಂಗಳೂರಿಗೆ ಬರಲಿದ್ದಾರೆ ಎಂದು ಹೇಳಲಾಗುತ್ತಿದೆ.
ಕರ್ನಾಟಕ ಸಿಎಂ ರೇಸಿನಲ್ಲಿರುವ ಕಪ್ಪು ಕುದುರೆ ಯಾರು?
ಸೋಮವಾರ ರಾತ್ರಿ 8:30ರ ವಿಮಾನದ ಮೂಲಕ ದೆಹಲಿಯಿಂದ ಬೆಂಗಳೂರಿಗೆ ಬಿ.ಎಲ್. ಸಂತೋಷ್ ತೆರಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾಗಿರುವ ಬಿ.ಎಲ್. ಸಂತೋಷ್ ಸಭೆಗೂ ಮುನ್ನವೇ ಬೆಂಗಳೂರಿಗೆ ಪ್ರಯಾಣ ಬೆಳೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಮಂಗಳವಾರ ಕೇಂದ್ರ ವೀಕ್ಷಕರು ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಇದಕ್ಕೂ ಮೊದಲು ರಾಜ್ಯಕ್ಕೆ ಬಿ.ಎಲ್. ಸಂತೋಷ್ ಭೇಟಿ ನೀಡುವ ಮೂಲಕ ರಾಜ್ಯ ರಾಜಕೀಯದಲ್ಲಿ ಮತ್ತೊಂದು ಅಚ್ಚರಿಗೆ ಕಾರಣವಾಗುತ್ತಿದೆ.
ಅತ್ತ ದೆಹಲಿಯಲ್ಲಿ ಮಂಗಳವಾರ ಸಂಸದೀಯ ಮಂಡಳಿಯಲ್ಲಿ ಬಿಜೆಪಿ ಹೈಕಮಾಂಡ್ ಕರ್ನಾಟಕ ಮುಖ್ಯಮಂತ್ರಿಯನ್ನಾಗಿ ಯಾರನ್ನು ಮಾಡಬೇಕು ಎಂದು ನಿರ್ಧರಿಸಲಿದ್ದರೆ, ಇತ್ತ ಧರ್ಮೇಂದ್ರ ಪ್ರಧಾನ್ ಹಾಗೂ ಅರುಣ್ ಸಿಂಗ್ ವೀಕ್ಷಕರಾಗಿ ರಾಜ್ಯಕ್ಕೆ ಆಗಮಿಸಿ ಶಾಸಕರ ಅಭಿಪ್ರಾಯ ಆಲಿಸಲಿದ್ದಾರೆ.
ಮಾಜಿ ಸಚಿವ ಮುರುಗೇಶ್ ನಿರಾಣಿ ಕೂಡ ಸೋಮವಾರ ರಾತ್ರಿಯೇ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ. ರಾತ್ರಿ 8:30ರ ವಿಸ್ತಾರ ವಿಮಾನದ ಮೂಲಕ ಬೆಂಗಳೂರಿಗೆ ಹೋಗಲಿದ್ದಾರೆ. ಅಮಿತ್ ಶಾ ಭೇಟಿಗಾಗಿ ದೆಹಲಿಯಲ್ಲಿ ಬೀಡು ಬಿಟ್ಟಿದ್ದರೂ ಅವಕಾಶ ಸಿಗದೆ ವಾಪಸ್ಸಾಗುತ್ತಿದ್ದಾರೆ.
ಈ ಹಿಂದೆ ರಾಜ್ಯ ಉಸ್ತುವಾರಿಯಾಗಿದ್ದ ಧರ್ಮೇಂದ್ರ ಪ್ರಧಾನ್ ಇದೀಗ ವೀಕ್ಷಕರಾಗಿ ಆಯ್ಕೆಯಾಗಿದ್ದಾರೆ. ಧರ್ಮೆಂದ್ರ ಪ್ರಧಾನ್ಗೆ ಕರ್ನಾಟಕಕ್ಕೆ ತೆರಳಲು ಹೈಕಮಾಂಡ್ ಸೂಚನೆ ನೀಡಿದೆ.
ರಾಜ್ಯಕ್ಕೆ ಭೇಟಿ ಕೊಡಲಿರುವ ಧರ್ಮೇಂದ್ರ ಪ್ರಧಾನ್ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿನಲ್ಲಿ ಶಾಸಕಾಂಗ ಸಭೆ ನಡೆಸಲಿದ್ದಾರೆ. ಮುಂದಿನ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ಕಸರತ್ತು ಆರಂಭವಾಗಲಿದೆ.
Recommended Video