ಬರ್ತ್ ಡೆ ಬಾಯ್ ಮೋದಿ ವಿರುದ್ಧ ಸಿಎಂ ಸಿದ್ದು ವಾಗ್ದಾಳಿ
ಬೆಂಗಳೂರು, ಸೆಪ್ಟೆಂಬರ್ 17: ಅತ್ತ 64ನೇ ಹುಟ್ಟುಹಬ್ಬ ಸಂಭ್ರಮಾಚರಣೆಯಲ್ಲಿರುವ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಗೆ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್, ಬಿಜೆಪಿ ಹಿರಿಯ ನಾಯಕ ಆಡ್ವಾಣಿ ಹಾಗೂ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಸೇರಿದಂತೆ ಹಲವಾರು ಗಣ್ಯರು ಶುಭಾಷಯ ಕೋರಿದ್ದರೆ ಇತ್ತ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೋದಿ ಒಬ್ಬ ನರಹಂತಕ ಮತ್ತು ಕೋಮುವಾದಿ ಎಂದು ಬಣ್ಣಿಸಿದ್ದಾರೆ.
ಜನತಾ ದರ್ಶನದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದು 'ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸಿದ ಮಾತ್ರಕ್ಕೆ ರಾಜ್ಯದಲ್ಲಿ ಮೋದಿ ಆಟ ನಡೆಯೋಲ್ಲ ಎಂದು ಗುಜರಾತ್ ಮುಖ್ಯಮಂತ್ರಿ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದರಿಂದ ರಾಜ್ಯದ ಮೇಲೆ ಯಾವುದೇ ಪ್ರಭಾವ ಬೀರಲ್ಲ ಮತ್ತು ಕರ್ನಾಟಕದಲ್ಲಿ ಮೋದಿ ಮೋಡಿ ನಡೆಯಲ್ಲ ಎಂದಿರುವ ಸಿದ್ದರಾಮಯ್ಯ, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯನ್ನು ಮೋದಿಗೆ ಹೋಲಿಕೆ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.
ಇದೇ ವೇಳೆ 'ಕೋಮುವಾದಿ ನರೇಂದ್ರ ಮೋದಿ ಪ್ರಧಾನಿಯಾಗುವಾಗ ನಾನು ಜೀವಂತ ಇರಲು ಇಷ್ಟ ಪಡುವುದಿಲ್ಲ' ಎಂದಿರುವ ಅನಂತಮೂರ್ತಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಅವರು 'ಅದು ಅವರ ವೈಯಕ್ತಿಕ ಹೇಳಿಕೆ, ಆ ಬಗ್ಗೆ ನಾನು ಏನೂ ಹೇಳುವುದಿಲ್ಲ. ಆದರೆ ಎಲ್ಲರಿಗೂ ಅವರವರ ಅನಿಸಿಕೆ/ ಅಭಿಪ್ರಾಯ ಹಂಚಿಕೊಳ್ಳುವ ಸ್ವಾತಂತ್ರ್ಯ/ ಹಕ್ಕು ಇದೆ. ಮೋದಿ ಅವರ ವ್ಯಕ್ತಿತ್ವವನ್ನು ಆಧಾರವಾಗಿಟ್ಟುಕೊಂಡು ಅನಂತಮೂರ್ತಿ ಅವರು ಹಾಗೆ ಹೇಳಿರಬಹುದು' ಎಂದಿದ್ದಾರೆ.












Click it and Unblock the Notifications